ಕಲಬುರಗಿ| ಅಪಘಾತದಲ್ಲಿ ಗಾಯಗೊಂಡಿದ್ದ ಪ್ರಾಧ್ಯಾಪಕ ಮೃತ್ಯು
Update: 2026-01-30 11:42 IST
ಕಲಬುರಗಿ: ಬೈಕ್ ಸ್ಕಿಡ್ ಆಗಿ ತಲೆಗೆ ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಕಲ್ಯಾಣ ಕರ್ನಾಟಕ ಕಾಲೇಜು ಅಧ್ಯಾಪಕರ ಸಂಘದ ಅಧ್ಯಕ್ಷ ಶರಣಪ್ಪ ಸೈದಾಪುರ (49) ಅವರು ಚಿಕಿತ್ಸೆಗೆ ಸ್ಪಂದಿಸದೇ ಶುಕ್ರವಾರ ಮೃತಪಟ್ಟಿದ್ದಾರೆ.
ಇತ್ತೀಚೆಗಷ್ಟೇ ನಗರದ ಹೊಸ ಆರ್ ಟಿಒ ಕಚೇರಿ ಬಳಿ ಬೈಕ್ ಸ್ಕಿಡ್ ಆಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಹೈದರಾಬಾದ್ ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿರುವುದಾಗಿ ಕುಟುಂಬದ ಮೂಲಗಳು ಹೇಳಿವೆ.
ಸದ್ಯ ಜೇವರ್ಗಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅರ್ಥಶಾಸ್ತ್ರ ಸಹ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದ ಅವರು, ಎನ್ಎಸ್ಎಸ್ ಅಧಿಕಾರಿಯೂ ಆಗಿದ್ದರು.
ಮೃತರು ಪತ್ನಿ, ಇಬ್ಬರು ಪುತ್ರಿಯರು, ಓರ್ವ ಪುತ್ರನನ್ನು ಅಗಲಿದ್ದಾರೆ.