Kalaburagi | ನೀಟ್ ಪರೀಕ್ಷಾ ಅಕ್ರಮಗಳ ಸಮಗ್ರ ತನಿಖೆಗೆ ಆಗ್ರಹಿಸಿ ಪ್ರತಿಭಟನೆ

Update: 2026-07-24 20:47 IST

ಕಲಬುರಗಿ: ನೀಟ್ ಪರೀಕ್ಷೆ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿನ ಅಕ್ರಮಗಳ ಕುರಿತು ನ್ಯಾಯಸಮ್ಮತ ತನಿಖೆ ನಡೆಸಿ, ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕು ಹಾಗೂ ಶಿಕ್ಷಣ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆಗಳನ್ನು ಜಾರಿಗೆ ತರಬೇಕು ಎಂದು ಆಗ್ರಹಿಸಿ ಸ್ನೇಹ ಜಾಗೃತಿ ಸುರಕ್ಷಾ ಮಂಚ್ ಹಾಗೂ ವಿವಿಧ ಸಂಘಟನೆಗಳ ಆಶ್ರಯದಲ್ಲಿ ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯ ಬಳಿಕ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ ಪ್ರತಿಭಟನಾಕಾರರು, ರಾಷ್ಟ್ರೀಯ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳಾದ ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳಲ್ಲಿ ಪದೇ ಪದೇ ಕೇಳಿಬರುತ್ತಿರುವ ಪ್ರಶ್ನೆಪತ್ರಿಕೆ ಸೋರಿಕೆ, ಪರೀಕ್ಷಾ ಅಕ್ರಮಗಳು ಹಾಗೂ ವಿದ್ಯಾರ್ಥಿಗಳ ಮೇಲೆ ಹೆಚ್ಚುತ್ತಿರುವ ಮಾನಸಿಕ ಒತ್ತಡದ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಮಾತನಾಡಿದ ಸಂಚಾಲಕ ಕಾರ್ತಿಕ್ ಮಹದೇಶ, ಪರೀಕ್ಷಾ ಅಕ್ರಮಗಳು ಮತ್ತು ಪ್ರಶ್ನೆಪತ್ರಿಕೆ ಸೋರಿಕೆ ಕುರಿತ ಎಲ್ಲ ಆರೋಪಗಳ ಬಗ್ಗೆ ಪಾರದರ್ಶಕ ಹಾಗೂ ಸಮಯಬದ್ಧ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಯಾವುದೇ ಪ್ರಭಾವಕ್ಕೆ ಮಣಿಯದೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ನಕಲು ತಡೆಯಲು ತಾಂತ್ರಿಕವಾಗಿ ಸುರಕ್ಷಿತ ಪರೀಕ್ಷಾ ವ್ಯವಸ್ಥೆ ರೂಪಿಸಿ, ಪರೀಕ್ಷಾ ಪ್ರಕ್ರಿಯೆಯ ಪ್ರತಿಯೊಂದು ಹಂತದಲ್ಲೂ ಪಾರದರ್ಶಕತೆ ಹಾಗೂ ಹೊಣೆಗಾರಿಕೆಯನ್ನು ಖಚಿತಪಡಿಸಬೇಕು ಎಂದು ಅವರು ಒತ್ತಾಯಿಸಿದರು.

ಕಲಬುರಗಿಯಂತಹ ಶೈಕ್ಷಣಿಕವಾಗಿ ಹಿಂದುಳಿದ ಜಿಲ್ಲೆಗಳಲ್ಲಿ ಸರ್ಕಾರಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರಗಳನ್ನು ಆರಂಭಿಸಿ, ನೀಟ್, ಜೆಇಇ, ಯುಪಿಎಸ್‌ಸಿ, ಕೆಪಿಎಸ್‌ಸಿ, ಎಸ್‌ಎಸ್‌ಸಿ, ಬ್ಯಾಂಕಿಂಗ್ ಹಾಗೂ ರೈಲ್ವೆ ಸೇರಿದಂತೆ ವಿವಿಧ ಪರೀಕ್ಷೆಗಳಿಗೆ ಉಚಿತ ಅಥವಾ ಹೆಚ್ಚಿನ ಅನುದಾನಿತ ತರಬೇತಿ ನೀಡಬೇಕು ಎಂದು ಮನವಿ ಮಾಡಲಾಯಿತು.

ಆರ್ಥಿಕವಾಗಿ ದುರ್ಬಲ ವರ್ಗದ ವಿದ್ಯಾರ್ಥಿಗಳಿಗೆ ಸಮಾನ ಅವಕಾಶ ಕಲ್ಪಿಸಬೇಕು. ಶಾಲೆ-ಕಾಲೇಜುಗಳಲ್ಲಿ ತರಬೇತಿ ಪಡೆದ ಮಾನಸಿಕ ಆರೋಗ್ಯ ಸಲಹೆಗಾರರನ್ನು ನೇಮಿಸಿ, ವಿದ್ಯಾರ್ಥಿ ಸಹಾಯವಾಣಿ ಆರಂಭಿಸಬೇಕು. ಪ್ರಶ್ನೆಪತ್ರಿಕೆ ತಯಾರಿಕೆ, ಸಂಗ್ರಹಣೆ ಮತ್ತು ವಿತರಣೆಗೆ ರಾಷ್ಟ್ರೀಯ ಮಟ್ಟದ ಸುರಕ್ಷಿತ ಡಿಜಿಟಲ್ ಮೇಲ್ವಿಚಾರಣಾ ವ್ಯವಸ್ಥೆ ಜಾರಿಗೊಳಿಸಬೇಕು ಎಂದು ಒತ್ತಾಯಿಸಲಾಯಿತು.

ಶಿಕ್ಷಣ ತಜ್ಞರು, ನಿವೃತ್ತ ನ್ಯಾಯಾಧೀಶರು, ಮನೋವೈದ್ಯರು, ವಿದ್ಯಾರ್ಥಿ ಪ್ರತಿನಿಧಿಗಳು ಹಾಗೂ ನಾಗರಿಕ ಸಮಾಜದ ಸದಸ್ಯರನ್ನು ಒಳಗೊಂಡ ಶಾಶ್ವತ ಸಮಿತಿಯನ್ನು ರಚಿಸಬೇಕು. ವಿದ್ಯಾರ್ಥಿಗಳ ಮೇಲಿನ ಶೈಕ್ಷಣಿಕ ಒತ್ತಡ ಕಡಿಮೆ ಮಾಡಲು ಪರಿಣಾಮಕಾರಿ ಕ್ರಮಗಳನ್ನು ಕೈಗೊಂಡು, ಕಲಿಕೆ, ಪ್ರಾಮಾಣಿಕತೆ ಮತ್ತು ಮಾನಸಿಕ ಯೋಗಕ್ಷೇಮಕ್ಕೆ ಆದ್ಯತೆ ನೀಡುವ ಶಿಕ್ಷಣ ವ್ಯವಸ್ಥೆ ರೂಪಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಪರೀಕ್ಷಾ ದುಷ್ಕೃತ್ಯಗಳಲ್ಲಿ ಭಾಗಿಯಾಗುವ ಯಾವುದೇ ವ್ಯಕ್ತಿ ಅಥವಾ ಸಂಘಟಿತ ಜಾಲದ ವಿರುದ್ಧ ಕಾನೂನು ಪ್ರಕಾರ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಅವರು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಸಂಚಾಲಕ ಕಾರ್ತಿಕ್ ಮಹದೇಶ, ಗುರುರಾಜ್ ಭಂಡಾರಿ, ಸಚಿನ್ ಗೋಳಾ, ಅರ್ಜುನ್ ಎನ್.ಕೆ., ಆನಂದ ನಂದೂರ, ರೇಣುಕಾ, ಯಲ್ಲಾಲಿಂಗ ಬಿರಾಳ, ಆಕಾಶ, ಗಜಾನನ, ವೈಜನಾಥ ಸೇರಿದಂತೆ ಹಲವರು ಭಾಗವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News