ಕಲಬುರಗಿ | ವಾರ್ಡನ್ ವಿರುದ್ಧ ಹಾಸ್ಟೆಲ್ ವಿದ್ಯಾರ್ಥಿಗಳಿಂದ ಅಹೋರಾತ್ರಿ ಪ್ರತಿಭಟನೆ
ಕಲಬುರಗಿ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಶ್ರೀ ದೇವರಾಜ್ ಅರಸು ಮೆಟ್ರಿಕ್ ನಂತರದ ಬಾಲಕರ ಮೂಲಭೂತ ಸೌಕರ್ಯ ಒದಗಿಸುವಂತೆ ಅಗ್ರಹಿಸಿ ವಿದ್ಯಾರ್ಥಿಗಳು ತಡ ರಾತ್ರಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಎದುರು ಪ್ರತಿಭಟನೆ ನಡೆಸಿರುವ ಘಟನೆ ಗುರುವಾರ ನಡೆದಿದೆ.
ನಿಗದಿತ ಊಟದ ಪಟ್ಟಿಯ ಪ್ರಕಾರ ಊಟ ಕೇಳಿದ್ದಕ್ಕೆ ವಸತಿ ನಿಲಯದ ಮುಖ್ಯ ಅಡುಗೆಗಾರನಿಂದ ವಿದ್ಯಾರ್ಥಿಗಳೊಂದಿಗೆ ಅನುಚಿತ ವರ್ತನೆ ಮತ್ತು ಹಿರಿಯ ಅಧಿಕಾರಿಗಳಿಗೆ ಅಗೌರವ ತೊರುತ್ತಿರುವ ವಿಡಿಯೋ ವೈರಲ್ ಆಗಿದ್ದು, ಅಡುಗೆಗಾರನನ್ನು ತಕ್ಷಣ ವರ್ಗಾವಣೆ ಮಾಡಬೇಕೆಂದು ಒತ್ತಾಯಿಸಿದರು.
ವಸತಿ ನಿಲಯದಲ್ಲಿ ಮೆನು ಪ್ರಕಾರ ಊಟದ ವ್ಯವಸ್ಥೆ ಮತ್ತು ವಸತಿ ನಿಲಯದಲ್ಲಿ ಗೀಜರ್, ಶುದ್ಧ ಕುಡುಯುವ ನೀರು ಸೇರಿದಂತೆ ಮೂಲಭೂತ ಸೌಕರ್ಯಗಳು ನೀಡಬೇಕೆಂದು ಆಗ್ರಹಿಸಿದರು.
ಹಿಂದುಳಿದ ವರ್ಗಗಳ ಜಿಲ್ಲಾ ಅಧಿಕಾರಿ ಪ್ರಭು ದೊರೆ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ, ವಿದ್ಯಾರ್ಥಿಗಳ ಎಲ್ಲಾ ಬೇಡಿಕೆಗಳನ್ನು ಬೆಳಗ್ಗೆ 10:30ಕ್ಕೆ ತಮ್ಮ ಕಚೇರಿಯಲ್ಲಿ ವಿದ್ಯಾರ್ಥಿಗಳೊಂದಿಗೆ ಸಭೆ ಮಾಡಿ ಬೇಡಿಕೆಗಳನ್ನು ಈಡೇರಿಸುವುದಾಗಿ ಹೇಳಿದ ಹಿನ್ನೆಲೆಯಲ್ಲಿ ಪ್ರತಿಭಟನೆ ವಾಪಸ್ ಪಡೆಯಲಾಯಿತು.
ಈ ಸಂದರ್ಭದಲ್ಲಿ ಕೆವಿಎಸ್ ಸಂಘಟನೆ ಜಿಲ್ಲಾ ಸಂಚಾಲಕ ರಾಜೇಂದ್ರ ರಾಜವಾಳ್, ಮೈಲಾರಿ ದೊಡ್ಡಮನಿ ಸೇರಿದಂತೆ ವಸತಿ ನಿಲಯದ ಹಲವು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.