×
Ad

Kalaburagi | ರೌಡಿ ಶೀಟರ್ ಚೇತನ ಹೈಬತ್ತಿಗೆ ಗುಂಡಾ ಕಾಯ್ದೆಯಡಿ ಬಂಧನ

ಬೆಳಗಾವಿ ಕೇಂದ್ರ ಕಾರಾಗೃಹದಲ್ಲಿ ಇರಿಸಲು ಆದೇಶ

Update: 2026-07-16 20:16 IST

ಕಲಬುರಗಿ : ನಗರದ ಅಶೋಕ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ರೌಡಿ ಶೀಟರ್ ಚೇತನ ತಂದೆ ಚಂದ್ರಕಾಂತ ಹೈಬತ್ತಿ (31) ಎಂಬಾತನನ್ನು ಕರ್ನಾಟಕ ಅಪಾಯಕಾರಿ ಚಟುವಟಿಕೆಗಳ ನಿಯಂತ್ರಣ ಕಾಯ್ದೆ (ಗುಂಡಾ ಕಾಯ್ದೆ) ಅಡಿ ಬಂಧಿಸಿ ಬೆಳಗಾವಿ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿಡಲು ಕಲಬುರಗಿ ನಗರ ಪೊಲೀಸ್ ಆಯುಕ್ತರು ಆದೇಶಿಸಿದ್ದಾರೆ.

ಕಲಬುರಗಿ ನಗರದ ವಿದ್ಯಾನಗರ, ಎಸ್.ಬಿ. ಕಾಲೇಜು ರಸ್ತೆ ನಿವಾಸಿಯಾಗಿರುವ ಚೇತನ ಹೈಬತ್ತಿ ವಿರುದ್ಧ ಕಲಬುರಗಿ ಸೇರಿದಂತೆ ವಿವಿಧ ಜಿಲ್ಲೆಗಳ ಪೊಲೀಸ್ ಠಾಣೆಗಳಲ್ಲಿ ಒಟ್ಟು 17 ಪ್ರಕರಣಗಳು ದಾಖಲಾಗಿವೆ. 2016ರಿಂದ 2026ರವರೆಗೆ ಭಾರತೀಯ ದಂಡ ಸಂಹಿತೆ, ಭಾರತೀಯ ನ್ಯಾಯ ಸಂಹಿತೆ–2023, ಸಿಆರ್‌ಪಿಸಿ ಹಾಗೂ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ ವಿವಿಧ ಕಲಂಗಳಡಿ ಪ್ರಕರಣಗಳನ್ನು ಎದುರಿಸುತ್ತಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಮಾಹಿತಿ ಪ್ರಕಾರ, ಚೇತನ ಹೈಬತ್ತಿಯನ್ನು ‘ಎ’ ವರ್ಗದ ರೌಡಿ ಎಂದು ಗುರುತಿಸಲಾಗಿದ್ದು, ಆತನ ರೌಡಿ ಶೀಟ್ ಚಾಲ್ತಿಯಲ್ಲಿದೆ. ಕೊಲೆ, ಕೊಲೆಗೆ ಯತ್ನ, ದರೋಡೆ, ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸುವುದು, ಸಾರ್ವಜನಿಕ ಸ್ಥಳಗಳಲ್ಲಿ ಗಲಾಟೆ, ಮಾರಕಾಸ್ತ್ರಗಳಿಂದ ಹಲ್ಲೆ ಸೇರಿದಂತೆ ಹಲವು ಗಂಭೀರ ಅಪರಾಧ ಪ್ರಕರಣಗಳಲ್ಲಿ ಆತ ಭಾಗಿಯಾಗಿದ್ದಾನೆ ಎಂದು ತಿಳಿಸಲಾಗಿದೆ.

ಸಾರ್ವಜನಿಕರಲ್ಲಿ ಭಯದ ವಾತಾವರಣ ಸೃಷ್ಟಿಸುವುದು, ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗುವುದು, ಮುಚ್ಚಳಿಕೆ ಷರತ್ತು ಉಲ್ಲಂಘಿಸುವುದು ಹಾಗೂ ತುಮಕೂರು ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜಾರಿಯಲ್ಲಿದ್ದ ಗಡಿಪಾರು ಆದೇಶವನ್ನು ಉಲ್ಲಂಘಿಸಿರುವ ಆರೋಪಗಳೂ ಆತನ ವಿರುದ್ಧ ಇವೆ ಎಂದು ಪೊಲೀಸರು ತಿಳಿಸಿದ್ದಾರೆ.

ಆತನ ಚಟುವಟಿಕೆಗಳು ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಅಶೋಕ ನಗರ ಪೊಲೀಸ್ ಠಾಣೆ ಪೊಲೀಸ್ ನಿರೀಕ್ಷಕ ಸತೀಶ ಕಣಿಮೇಶ್ವರ ಅವರು ಸಲ್ಲಿಸಿದ ವರದಿಯ ಆಧಾರದ ಮೇಲೆ, ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ. (ಐಪಿಎಸ್) ಅವರು ಗುಂಡಾ ಕಾಯ್ದೆಯಡಿ ಬಂಧನಕ್ಕೆ ಆದೇಶ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News