×
Ad

Kalaburagi | ಜನರ ಹೃದಯದಲ್ಲಿ ಸ್ಥಾನ ಪಡೆದಿರುವುದೇ ನನ್ನ ದೊಡ್ಡ ಸಾಧನೆ: ಹನೀಫಾ ಎಂ.ಶೇಖ್

Update: 2026-07-10 20:17 IST

ಕಲಬುರಗಿ : “ನಾನು ಸ್ವತಃ ಯಾವುದೇ ದೊಡ್ಡ ಸಾಧನೆ ಮಾಡಿಲ್ಲ. ಆದರೆ ಜನರ ಹೃದಯದಲ್ಲಿ ಸ್ಥಾನ ಪಡೆದಿರುವುದೇ ನನ್ನ ಜೀವನದ ಅತ್ಯಂತ ದೊಡ್ಡ ಸಾಧನೆ. ಕಲಬುರಗಿ ಜಿಲ್ಲೆಯಲ್ಲಿ ಕಲೆಗೆ ಇನ್ನಷ್ಟು ಪ್ರೋತ್ಸಾಹ ಮತ್ತು ಗೌರವ ಸಿಗಬೇಕಿದೆ” ಎಂದು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಜಾನಪದ ಕಲಾವಿದೆ ಹನೀಫಾ ಎಂ. ಶೇಖ್ ಹೇಳಿದರು.

ನಗರದ ರಂಗಾಯಣ ಅಡಿಟೋರಿಯಂನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿದ್ದ ‘ಸಾಧಕರೊಂದಿಗೆ ಸಂವಾದ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಬಡತನದ ದಿನಗಳಲ್ಲಿ ಜಾನಪದ ಕಲೆಯೇ ತಮ್ಮ ಬದುಕಿಗೆ ಆಸರೆಯಾಗಿತ್ತು ಎಂದು ಸ್ಮರಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿಗಳು ಹಾಗೂ ಸಹ ಕಲಾವಿದರು ತಮ್ಮೊಂದಿಗೆ ಇರುವವರೆಗೆ ತಾವು ಬಡವರಲ್ಲ, ಶ್ರೀಮಂತರೇ ಎಂದು ಹೇಳಿದ ಅವರು, ಇಲಾಖೆಯ ಬೆಂಬಲವನ್ನು ಶ್ಲಾಘಿಸಿದರು. ಇದೇ ವೇಳೆ ತಾವು ರಚಿಸಿದ ಭಜನಾ ಗೀತೆಯನ್ನು ಹಾಡಿ ನೆರೆದಿದ್ದವರ ಮೆಚ್ಚುಗೆಗೆ ಪಾತ್ರರಾದರು. ಕಲಾವಿದರು ಸರ್ಕಾರದ ವಿವಿಧ ಸೌಲಭ್ಯಗಳನ್ನು ಪಡೆಯಲು ಅಗತ್ಯ ದಾಖಲೆಗಳನ್ನು ಸಕಾಲದಲ್ಲಿ ಸಲ್ಲಿಸಬೇಕು ಎಂದು ಸಲಹೆ ನೀಡಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ ಬಸವರಾಜ ಹೂಗಾರ ಮಾತನಾಡಿ, ಕಲ್ಯಾಣ ಕರ್ನಾಟಕವು ವಚನ, ತತ್ವಪದ ಹಾಗೂ ದಾಸ ಪರಂಪರೆಯ ಮೂಲಕ ಮಹಿಳಾ ಧ್ವನಿಯನ್ನು ಜಗತ್ತಿಗೆ ಪರಿಚಯಿಸಿದ ಸಾಂಸ್ಕೃತಿಕ ನೆಲವಾಗಿದೆ. ಸಂಪ್ರದಾಯಸ್ಥ ಕುಟುಂಬದಿಂದ ಬಂದ ಹನೀಫಾ ಎಂ. ಶೇಖ್ ಅವರು ತತ್ವಪದಗಳ ಮೂಲಕ ವಿಶಿಷ್ಟ ಸಾಂಸ್ಕೃತಿಕ ಪರಂಪರೆಯನ್ನು ಕಟ್ಟಿಕೊಟ್ಟಿದ್ದು, ಅವರ ಜೀವನ ಇಂದಿನ ಯುವ ಪೀಳಿಗೆಗೆ ಪ್ರೇರಣೆಯಾಗಿದೆ ಎಂದು ಹೇಳಿದರು.

ರಂಗಾಯಣದ ಆಡಳಿತಾಧಿಕಾರಿ ಸಿದ್ರಾಮ ಸಿಂಧೆ ಮಾತನಾಡಿ, ಕಡಿಕೋಲ ಮಡಿವಾಳಪ್ಪನವರ ತತ್ವಪದಗಳನ್ನು ಗಾಯನದ ಮೂಲಕ ಜನಮಾನಸಕ್ಕೆ ತಲುಪಿಸಿ, ನಾಡಿನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ಹನೀಫಾ ಎಂ. ಶೇಖ್ ಅವರ ಕೊಡುಗೆ ಅಪಾರವಾಗಿದೆ ಎಂದು ಪ್ರಶಂಸಿಸಿದರು.

ನಶಿಸುತ್ತಿರುವ ಸಾಂಪ್ರದಾಯಿಕ ಕಲೆಗಳನ್ನು ಉಳಿಸುವ ಉದ್ದೇಶದಿಂದ ಹಿರಿಯ ಕಲಾವಿದರನ್ನು ಗುರುತಿಸಿ ವೇದಿಕೆ ಕಲ್ಪಿಸಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯವನ್ನು ಅವರು ಶ್ಲಾಘಿಸಿದರು.

ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪನಿರ್ದೇಶಕಿ ಜಗದೀಶ್ವರಿ ನಾಸಿ ಸ್ವಾಗತಿಸಿದರು.

ಕಾರ್ಯಕ್ರಮದಲ್ಲಿ ರಂಗಾಯಣದ ನಿರ್ದೇಶಕಿ ಡಾ.ಸುಜಾತಾ ಜಂಗಮಶೆಟ್ಟಿ, ದತ್ತಾತ್ರೇಯ ಭಂಗಿ, ಸಿದ್ಧರಾಮ ಪೊಲೀಸ್ ಪಾಟೀಲ್, ಗಣ್ಯರಾದ ಕೋಬಾಳ, ಗಿರಿಜಾ ಕರ್ಪೂರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News