Kalaburagi | ಖರ್ಗೆ ರ್ಯಾಲಿ ನಡೆಸಿದ 'ಸ್ಥಳ ಶುದ್ಧೀಕರಣ' : ಕಾನೂನು ಜಾಗೃತ ಸಂಘದಿಂದ ಖಂಡನೆ
ಕಲಬುರಗಿ: ಉತ್ತರಾಖಂಡದ ರಾಮಲೀಲಾ ಮೈದಾನದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಮಾತನಾಡಿದ ಸ್ಥಳವನ್ನು ಬಳಿಕ ಗಂಗಾಜಲದಿಂದ ಶುದ್ಧೀಕರಿಸಿ, ಹೋಮ-ಹವನ ನಡೆಸಿರುವ ಆರೋಪದ ಘಟನೆ ಖಂಡನೀಯವಾಗಿದೆ ಎಂದು ಕರ್ನಾಟಕ ಪ.ಜಾ./ಪ.ಪಂ. ವಕೀಲರ ಕಾನೂನು ಜಾಗೃತ ಸಂಘ ಆಕ್ರೋಶ ವ್ಯಕ್ತಪಡಿಸಿದೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಸಂಘದ ಜಿಲ್ಲಾಧ್ಯಕ್ಷ ವಿನೋದಕುಮಾರ ಕಾಂಬಳೆ, 2026ರ ಆಗಸ್ಟ್ 8ರಂದು ಉತ್ತರಾಖಂಡದ ರಾಮಲೀಲಾ ಮೈದಾನದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಭಾಗವಹಿಸಿ ಮಾತನಾಡಿದ್ದರು. ಇದಾದ ಎರಡು ದಿನಗಳ ಬಳಿಕ ಕೆಲವರು ಅವರು ನಿಂತು ಮಾತನಾಡಿದ ಸ್ಥಳಕ್ಕೆ ಗಂಗಾಜಲ ಸಿಂಪಡಿಸಿ ‘ಶುದ್ಧೀಕರಣ’ ನಡೆಸಿರುವುದು ಜಾತೀಯ ಮನೋಭಾವವನ್ನು ಪ್ರತಿಬಿಂಬಿಸುತ್ತದೆ ಎಂದು ಆರೋಪಿಸಿದ್ದಾರೆ.
ಇಂತಹ ಕೃತ್ಯಗಳು ಪ್ರಜಾಪ್ರಭುತ್ವ, ಸಾಮಾಜಿಕ ಸಮಾನತೆ ಹಾಗೂ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿವೆ. ದೇಶ ಸ್ವಾತಂತ್ರ್ಯ ಪಡೆದು ಹಲವು ದಶಕಗಳು ಕಳೆದರೂ ಜಾತೀಯತೆ ಹಾಗೂ ಅಸ್ಪೃಶ್ಯತೆಯ ಮನೋಭಾವಗಳು ಮುಂದುವರಿದಿರುವುದು ವಿಷಾದನೀಯ ಎಂದು ತಿಳಿಸಿದ್ದಾರೆ.
ಇಂತಹ ಘಟನೆಗಳು ಸಂವಿಧಾನ ಪ್ರತಿಪಾದಿಸುವ ಸಮಾನತೆ, ಘನತೆ ಹಾಗೂ ಅಸ್ಪೃಶ್ಯತೆ ನಿರ್ಮೂಲನೆಯ ಆಶಯಗಳಿಗೆ ಧಕ್ಕೆ ತರುತ್ತವೆ. ಹೀಗಾಗಿ ಘಟನೆಯಲ್ಲಿ ಭಾಗಿಯಾಗಿರುವವರ ವಿರುದ್ಧ ಅನ್ವಯವಾಗುವ ಕಾನೂನುಗಳ ಅಡಿಯಲ್ಲಿ ಪ್ರಕರಣ ದಾಖಲಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಂಘ ಒತ್ತಾಯಿಸಿದೆ.
ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸುವುದರ ಜತೆಗೆ, ಕಾನೂನಿನ ವ್ಯಾಪ್ತಿಯಲ್ಲಿ ಅಗತ್ಯ ಕ್ರಮ ಕೈಗೊಂಡು ಇಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಬೇಕು ಎಂದು ವಿನೋದಕುಮಾರ ಕಾಂಬಳೆ ಆಗ್ರಹಿಸಿದ್ದಾರೆ.
ಈ ವೇಳೆ ಸಂಘದ ಉಪಾಧ್ಯಕ್ಷರಾದ ಸೀತಾರಾಮ ಓಮಲಾ ರಾಠೋಡ, ಭಾವಿಮನಿ ಆಶಾ ಮಂಗೇಶ, ಪ್ರಧಾನ ಕಾರ್ಯದರ್ಶಿ ಕುಸುಮಾಕರ್ ಎಸ್. ಮಹಾಗಾಂವಿ, ಜಂಟಿ ಕಾರ್ಯದರ್ಶಿಗಳಾದ ವಿಶ್ವನಾಥ ಎಂ. ಸಿಂಗೆ ಹಾಗೂ ಧೂಳಪ್ಪ ಬಿ. ದ್ಯಾಮನಕರ್ ಇದ್ದರು.