ಕಲಬುರಗಿ: ಕ್ರೀಡೆಯು ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಅತ್ಯಗತ್ಯವಾಗಿದ್ದು, ಶಿಸ್ತು, ನಾಯಕತ್ವ, ತಂಡದ ಸಹಕಾರ, ದೃಢತೆ ಹಾಗೂ ಉತ್ತಮ ವ್ಯಕ್ತಿತ್ವ ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಟ್ಟು ಸತ್ಯನಾರಾಯಣ ಹೇಳಿದರು.

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ (ಸಿಯುಕೆ) ಆವರಣದಲ್ಲಿ ರಾಷ್ಟ್ರೀಯ ಕ್ರೀಡಾ ದಿನ–2026ರ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಭಾರತೀಯ ಹಾಕಿ ದಂತಕಥೆ ಹಾಗೂ ‘ಹಾಕಿಯ ಮಾಂತ್ರಿಕ’ ಎಂದೇ ಖ್ಯಾತರಾದ ಮೇಜರ್ ಧ್ಯಾನ್ ಚಂದ್ ಅವರ ಜನ್ಮದಿನದ ಸ್ಮರಣಾರ್ಥ ರಾಷ್ಟ್ರೀಯ ಕ್ರೀಡಾ ದಿನ ಆಚರಿಸಲಾಯಿತು. ಕಾರ್ಯಕ್ರಮವು ‘ವಂದೇ ಮಾತರಂ’ ಗಾಯನದೊಂದಿಗೆ ಆರಂಭಗೊಂಡಿದ್ದು, ಬಳಿಕ ಮೇಜರ್ ಧ್ಯಾನ್ ಚಂದ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.

ವಿದ್ಯಾರ್ಥಿಗಳು ಕ್ರೀಡೆ ಹಾಗೂ ದೈಹಿಕ ವ್ಯಾಯಾಮವನ್ನು ತಮ್ಮ ದೈನಂದಿನ ಜೀವನದ ಅವಿಭಾಜ್ಯ ಅಂಗವನ್ನಾಗಿ ಮಾಡಿಕೊಳ್ಳಬೇಕು. ಶೈಕ್ಷಣಿಕ ಚಟುವಟಿಕೆಗಳ ಜತೆಗೆ ದೈಹಿಕ ಕ್ಷಮತೆಗೂ ಆದ್ಯತೆ ನೀಡಬೇಕು. ವಿಶ್ವವಿದ್ಯಾಲಯದಲ್ಲಿ ಲಭ್ಯವಿರುವ ಕ್ರೀಡಾ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ವಿವಿಧ ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಕುಲಪತಿ ಕರೆ ನೀಡಿದರು.

ವಿದ್ಯಾರ್ಥಿಗಳೊಂದಿಗೆ ಬಾಸ್ಕೆಟ್‌ಬಾಲ್ ಆಡಿದ ಕುಲಪತಿ :

ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿ ಕುಲಪತಿ ಪ್ರೊ. ಬಟ್ಟು ಸತ್ಯನಾರಾಯಣ ಅವರು ವಿದ್ಯಾರ್ಥಿಗಳೊಂದಿಗೆ ಸೌಹಾರ್ದಯುತ ಬಾಸ್ಕೆಟ್‌ಬಾಲ್ ಪಂದ್ಯದಲ್ಲಿ ಉತ್ಸಾಹದಿಂದ ಪಾಲ್ಗೊಂಡರು. ವಿದ್ಯಾರ್ಥಿಗಳೊಂದಿಗೆ ಸ್ವತಃ ಕ್ರೀಡೆಯಲ್ಲಿ ಭಾಗವಹಿಸುವ ಮೂಲಕ ಅವರು ಕ್ರೀಡಾ ಚಟುವಟಿಕೆಗಳಿಗೆ ಉತ್ತೇಜನ ನೀಡಿದರು.

ಕುಲಪತಿಯವರ ಈ ಭಾಗವಹಿಸುವಿಕೆ ವಿದ್ಯಾರ್ಥಿಗಳಲ್ಲಿ ಉತ್ಸಾಹ ಮೂಡಿಸುವುದರ ಜತೆಗೆ ಆರೋಗ್ಯಕರ ಹಾಗೂ ಸಕ್ರಿಯ ಜೀವನಶೈಲಿಯನ್ನು ಅಳವಡಿಸಿಕೊಳ್ಳುವ ಮಹತ್ವದ ಸಂದೇಶ ಸಾರಿತು.

ಕುಲಸಚಿವ ಪ್ರೊ. ಆರ್.ಆರ್. ಬಿರಾದಾರ್ ಮಾತನಾಡಿ, ಕ್ರೀಡೆಯು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ, ಪರಿಶ್ರಮ ಹಾಗೂ ಸಕಾರಾತ್ಮಕ ಮನೋಭಾವವನ್ನು ಬೆಳೆಸುತ್ತದೆ. ಆದ್ದರಿಂದ ಶೈಕ್ಷಣಿಕ ಚಟುವಟಿಕೆಗಳೊಂದಿಗೆ ದೈಹಿಕ ಚಟುವಟಿಕೆಗಳಿಗೂ ಸಮಾನ ಆದ್ಯತೆ ನೀಡಬೇಕು. ವಿದ್ಯಾರ್ಥಿಗಳು ವಿವಿಧ ಕ್ರೀಡಾಕೂಟಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ತಮ್ಮ ಪ್ರತಿಭೆಯನ್ನು ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ವಿವಿಧ ಕ್ರೀಡಾಕೂಟ ಆಯೋಜನೆ :

ರಾಷ್ಟ್ರೀಯ ಕ್ರೀಡಾ ದಿನದ ಅಂಗವಾಗಿ ವಿಶ್ವವಿದ್ಯಾಲಯದಲ್ಲಿ ವಾಲಿಬಾಲ್, ಬಾಸ್ಕೆಟ್‌ಬಾಲ್ ಹಾಗೂ ಫುಟ್‌ಬಾಲ್ ಸೇರಿದಂತೆ ವಿವಿಧ ಕ್ರೀಡಾಕೂಟಗಳನ್ನು ಆಯೋಜಿಸಲಾಗುವುದು ಎಂದು ತಿಳಿಸಲಾಯಿತು.

ಈ ಕ್ರೀಡಾಕೂಟಗಳ ಮೂಲಕ ವಿದ್ಯಾರ್ಥಿಗಳಲ್ಲಿ ಆರೋಗ್ಯಕರ ಸ್ಪರ್ಧಾ ಮನೋಭಾವ, ತಂಡದ ಸಹಕಾರ, ನಾಯಕತ್ವ ಗುಣ ಹಾಗೂ ಕ್ರೀಡಾ ಸಂಸ್ಕೃತಿಯನ್ನು ಬೆಳೆಸುವ ಉದ್ದೇಶ ಹೊಂದಲಾಗಿದೆ.

ಕಾರ್ಯಕ್ರಮದಲ್ಲಿ ಕಾನೂನು ಅಧ್ಯಯನ ಮತ್ತು ವಿದ್ಯಾರ್ಥಿ ಕಲ್ಯಾಣ ವಿಭಾಗದ ಡೀನ್ ಪ್ರೊ. ಬಸವರಾಜ ಎಂ. ಕುಬಕಡ್ಡಿ, ರಸಾಯನಿಕ ವಿಜ್ಞಾನಗಳ ನಿಕಾಯದ ಡೀನ್ ಪ್ರೊ. ಪಲ್ಲೇಪೋಗು ರಾಘವಯ್ಯ, ಪ್ರೊ. ವೆಂಕಟ ರಮಣ ದೊಡ್ಡಿ, ಡಾ. ನಲ್ಲಂ ಬಾಬು, ಕ್ರೀಡಾ ಸಂಯೋಜಕ ಡಾ. ಸಾಯಿ ಅಭಿನವ ಸೇರಿದಂತೆ ಬೋಧಕ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಕಾರ್ಯಕ್ರಮವು ರಾಷ್ಟ್ರಗೀತೆಯೊಂದಿಗೆ ಮುಕ್ತಾಯಗೊಂಡಿತು. ಕ್ರೀಡಾ ವಿದ್ಯಾರ್ಥಿ ಆರ್ಯ ವಂದನಾರ್ಪಣೆ ಸಲ್ಲಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor