×
Ad

Kalaburagi | ಸೋನಮ್ ವಾಂಗ್ಚುಕ್ ಉಪವಾಸ ಸತ್ಯಾಗ್ರಹಕ್ಕೆ ಬೆಂಬಲ; ರಾಷ್ಟ್ರಪತಿಗೆ ಮನವಿ

ಪರೀಕ್ಷಾ ಅಕ್ರಮಗಳ ತನಿಖೆ, ವಿದ್ಯಾರ್ಥಿಗಳ ಜೀವ ರಕ್ಷಣೆಗೆ ತಕ್ಷಣ ಮಧ್ಯಪ್ರವೇಶಿಸುವಂತೆ ಒತ್ತಾಯ

Update: 2026-07-16 22:12 IST

ಕಲಬುರಗಿ: ಸಾಮಾಜಿಕ ಹೋರಾಟಗಾರ ಸೋನಮ್ ವಾಂಗ್ಚುಕ್ ನೇತೃತ್ವದಲ್ಲಿ ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹಕ್ಕೆ ಬೆಂಬಲ ಸೂಚಿಸಿರುವ ಸೌಹಾರ್ದ ಕರ್ನಾಟಕ ಸಂಘಟನೆಯ ನೇತೃತ್ವದ ಕಲಬುರಗಿಯ ನಾಗರಿಕ ಸಮಾಜದ ಪ್ರತಿನಿಧಿಗಳು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಮನವಿ ಸಲ್ಲಿಸಿ ತಕ್ಷಣ ಮಧ್ಯಪ್ರವೇಶಿಸುವಂತೆ ಒತ್ತಾಯಿಸಿದರು.

ಸಾರ್ವಜನಿಕ ಪರೀಕ್ಷೆಗಳಲ್ಲಿ ನಡೆದಿರುವುದಾಗಿ ಆರೋಪಿಸಲಾಗಿರುವ ಪ್ರಶ್ನೆಪತ್ರಿಕೆ ಸೋರಿಕೆ, ಪರೀಕ್ಷಾ ಅಕ್ರಮಗಳು ಹಾಗೂ ಆಡಳಿತಾತ್ಮಕ ವೈಫಲ್ಯಗಳ ಕುರಿತು ಸ್ವತಂತ್ರ ಮತ್ತು ಪಾರದರ್ಶಕ ತನಿಖೆ ನಡೆಸಬೇಕು. ಈ ಅಕ್ರಮಗಳಿಂದ ಲಕ್ಷಾಂತರ ವಿದ್ಯಾರ್ಥಿಗಳು ಹಾಗೂ ಅವರ ಕುಟುಂಬಗಳು ಸಂಕಷ್ಟ ಅನುಭವಿಸಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಸೋನಮ್ ವಾಂಗ್ಚುಕ್ ಹಾಗೂ ಅವರೊಂದಿಗೆ ಉಪವಾಸ ನಿರತರಾಗಿರುವ ವಿದ್ಯಾರ್ಥಿಗಳ ಆರೋಗ್ಯ ಹದಗೆಡುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ ಅವರು, ತಕ್ಷಣ ಸೂಕ್ತ ವೈದ್ಯಕೀಯ ಸೌಲಭ್ಯ ಕಲ್ಪಿಸುವುದರೊಂದಿಗೆ ಕೇಂದ್ರ ಸರ್ಕಾರ ಪ್ರತಿಭಟನಾಕಾರರೊಂದಿಗೆ ಸದುದ್ದೇಶಪೂರ್ವಕ ಸಂವಾದ ಆರಂಭಿಸಬೇಕು ಎಂದು ಒತ್ತಾಯಿಸಿದರು.

ಪರೀಕ್ಷಾ ವ್ಯವಸ್ಥೆಯಲ್ಲಿನ ಅಕ್ರಮಗಳು ವಿದ್ಯಾರ್ಥಿಗಳ ಭವಿಷ್ಯ, ಸಾರ್ವಜನಿಕ ಸಂಸ್ಥೆಗಳ ಮೇಲಿನ ವಿಶ್ವಾಸ ಹಾಗೂ ಅವಕಾಶದ ಸಮಾನತೆಗೆ ಧಕ್ಕೆ ತರುತ್ತಿವೆ. ವಿಶೇಷವಾಗಿ ಬಡ, ಗ್ರಾಮೀಣ ಮತ್ತು ಮೊದಲ ತಲೆಮಾರಿನ ವಿದ್ಯಾರ್ಥಿಗಳ ಮೇಲೆ ಇದರ ದುಷ್ಪರಿಣಾಮ ಹೆಚ್ಚು ಬೀರುತ್ತಿದೆ ಎಂದು ಅಭಿಪ್ರಾಯಪಟ್ಟರು.

ಪರೀಕ್ಷಾ ಅಕ್ರಮಗಳ ಕುರಿತು ಸ್ವತಂತ್ರ ನ್ಯಾಯಾಂಗ ಅಥವಾ ನಿಷ್ಪಕ್ಷಪಾತ ತನಿಖೆ ನಡೆಸಿ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಸಚಿವರ ಹೊಣೆಗಾರಿಕೆಯ ತತ್ವದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಬೇಡಿಕೆಯನ್ನು ಪರಿಗಣಿಸಬೇಕು ಎಂದು ಒತ್ತಾಯಿಸಿದರು.

ಸೋನಮ್ ವಾಂಗ್ಚುಕ್ ಅವರು ನೀಟ್ ಪರೀಕ್ಷಾ ಅಕ್ರಮಗಳಿಂದ ಸಂಕಷ್ಟಕ್ಕೊಳಗಾದ ವಿದ್ಯಾರ್ಥಿಗಳ ಪರವಾಗಿ ಹೋರಾಟ ನಡೆಸುತ್ತಿದ್ದಾರೆ. ಇಂತಹ ಹಗರಣಗಳು ಕೊನೆಗೊಳ್ಳಬೇಕು. ಈ ಬಗ್ಗೆ ಕೇಂದ್ರ ಸರ್ಕಾರ ಸ್ಪಂದಿಸದಿರುವುದು ಖಂಡನೀಯ.

-ಪ್ರೊ.ಅರುಣಕುಮಾರ್ ಜೋಳದಕೂಡ್ಲಿಗಿ (ಪ್ರಾಧ್ಯಾಪಕ, ಚಿಂತಕ)

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಿಂದ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದ್ದು, ಈ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆ ತೀವ್ರ ಟೀಕೆಗೆ ಗುರಿಯಾಗಿದೆ.

-ಕೆ.ನೀಲಾ (ಮಹಿಳಾ ಹೋರಾಟಗಾರ್ತಿ)

ಉಪವಾಸ ಆರಂಭವಾದ ಕೆಲವೇ ದಿನಗಳಲ್ಲಿ ಸರ್ಕಾರ ಸಂವಾದ ಆರಂಭಿಸಬೇಕಾಗಿತ್ತು. 18 ದಿನಗಳಾದರೂ ಯಾವುದೇ ಪ್ರತಿನಿಧಿ ಭೇಟಿ ನೀಡದಿರುವುದು ಆತಂಕಕಾರಿ ಬೆಳವಣಿಗೆ.

-ಡಾ.ಮೀನಾಕ್ಷಿ ಬಾಳಿ (ಹಿರಿಯ ಲೇಖಕಿ, ಚಿಂತಕಿ)

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News