ಕಲಬುರಗಿ: ಮನೆಗಳ್ಳತನದ ಆರೋಪಿಯ ಸೆರೆ: 22.65 ಲಕ್ಷ ರೂ. ಮೌಲ್ಯದ ಸೊತ್ತು ವಶ

Update: 2026-08-19 16:01 IST

ಕಲಬುರಗಿ: ರಾಘವೇಂದ್ರ ನಗರ ಹಾಗೂ ಅಶೋಕ ನಗರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಕಳವು ಪ್ರಕರಣಗಳಿಗೆ ಸಂಬಂಧಿಸಿ ಆರೋಪಿಯೊಬ್ಬನನ್ನು ಬಂಧಿಸಿದ್ದಾರೆ. ಬಂಧಿತನಿಂದ ನಾಲ್ಕು ಮನೆ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿ ಒಟ್ಟು 22.65 ಲಕ್ಷ ರೂ. ಮೌಲ್ಯದ ಚಿನ್ನ ಹಾಗೂ ಬೆಳ್ಳಿ ಆಭರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಈ ಕುರಿತು ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ. ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿ, ಆಳಂದ ತಾಲೂಕಿನ ಧಂಗಾಪುರ ಗ್ರಾಮದ ಈಶ್ವರ ಗೋವಿಂದ ಜಾಧವ್ (20) ಬಂಧಿತ ಆರೋಪಿಯಾಗಿದ್ದಾನೆ ಎಂದು ತಿಳಿಸಿದ್ದಾರೆ.

ಇಲ್ಲಿನ ಎನ್ ಜಿಒ ಕಾಲನಿಯ ಉಗ್ರ ಹನುಮಾನ ಗುಡಿಯ ಕೊಠಡಿಯ ಬೀಗ ಮುರಿದು ಸುಮಾರು 1,100 ಗ್ರಾಂ ತೂಕದ ಬೆಳ್ಳಿ ಆಭರಣಗಳನ್ನು ಕಳವು ಮಾಡಿದ್ದ ಕುರಿತು ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಜುಲೈ 31ರಂದು ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಿದ್ದರು. ತನಿಖೆ ವೇಳೆ ದೊರೆತ ಖಚಿತ ಮಾಹಿತಿ ಆಧರಿಸಿ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ನಾಲ್ಕು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿರುವುದಾಗಿ ಆರೋಪಿ ಈಶ್ವರ ಜಾಧವ್ ಒಪ್ಪಿಕೊಂಡಿದ್ದಾನೆ ಎಂದು ತಿಳಿಸಿದ್ದಾರೆ.

ಆರೋಪಿಯಿಂದ ರಾಘವೇಂದ್ರ ನಗರ ಪೊಲೀಸ್ ಠಾಣೆಯ ಗುನ್ನೆ ನಂ. 02/2025 ಪ್ರಕರಣಕ್ಕೆ ಸಂಬಂಧಿಸಿದ 69 ಗ್ರಾಂ ಚಿನ್ನಾಭರಣ ಹಾಗೂ 210 ಗ್ರಾಂ ಬೆಳ್ಳಿ ಆಭರಣ, ಗುನ್ನೆ ನಂ. 100/2025 ಪ್ರಕರಣಕ್ಕೆ ಸಂಬಂಧಿಸಿದ 60 ಗ್ರಾಂ ಚಿನ್ನಾಭರಣ, ಗುನ್ನೆ ನಂ. 127/2024 ಪ್ರಕರಣಕ್ಕೆ ಸಂಬಂಧಿಸಿದ 7 ಗ್ರಾಂ ಚಿನ್ನಾಭರಣ ಹಾಗೂ 40 ಗ್ರಾಂ ಬೆಳ್ಳಿ ಆಭರಣ ಮತ್ತು ಅಶೋಕ ನಗರ ಠಾಣೆಯ ಗುನ್ನೆ ನಂ. 118/2026 ಪ್ರಕರಣಕ್ಕೆ ಸಂಬಂಧಿಸಿದ 750 ಗ್ರಾಂ ಬೆಳ್ಳಿ ಆಭರಣಗಳನ್ನು ಪತ್ತೆ ಹಚ್ಚಿದ್ದು, ಒಟ್ಟಾರೆಯಾಗಿ136 ಗ್ರಾಂ ಚಿನ್ನಾಭರಣ, 1,000 ಗ್ರಾಂ ಬೆಳ್ಳಿ ಆಭರಣ ಸೇರಿದಂತೆ 22,65,000 ರೂ. ಮೌಲ್ಯದ ಸ್ವತ್ತನ್ನು ಜಪ್ತಿ ಮಾಡಲಾಗಿದೆ ಎಂದು ಡಾ.ಶರಣಪ್ಪ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಡಿಸಿಪಿ ಪ್ರವೀಣ್ ನಾಯಕ್, ಎಸಿಪಿ ಶರಣಬಸಪ್ಪ ಸುಬೇದಾರ, ಪಿಐ ವಾಜೀದ್ ಪಟೇಲ್ ಮತ್ತಿತ್ತರರು ಇದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News