ಕಲಬುರಗಿ | ಪ್ರಿಯಾಂಕ್ ಖರ್ಗೆಗೆ ಡಿಸಿಎಂ, ಅಲ್ಲಮಪ್ರಭು ಪಾಟೀಲ್ಗೆ ಸಚಿವ ಸ್ಥಾನ ನೀಡುವಂತೆ ವಿಜಯಕುಮಾರ್ ಕಟ್ಟಿಮನಿ ಆಗ್ರಹ
ಕಲಬುರಗಿ: ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಹಾಗೂ ಕಲಬುರಗಿ ದಕ್ಷಿಣ ಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ್ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ಕಲ್ಪಿಸಬೇಕು ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ವಿಭಾಗದ ಉಪಾಧ್ಯಕ್ಷರು ಹಾಗೂ ಪಂಚ್ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಜಿಲ್ಲಾ ಉಪಾಧ್ಯಕ್ಷರಾದ ವಿಜಯಕುಮಾರ್ ಕಟ್ಟಿಮನಿ ಹೇಳಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಚಿತ್ತಾಪುರ ಕ್ಷೇತ್ರದ ಶಾಸಕ ಹಾಗೂ ರಾಜ್ಯ ಸಚಿವರಾಗಿರುವ ಪ್ರಿಯಾಂಕ್ ಖರ್ಗೆ ಅವರು ಕಲ್ಯಾಣ ಕರ್ನಾಟಕ ಭಾಗದ ಪ್ರಭಾವಿ ಮತ್ತು ದಕ್ಷ ನಾಯಕರಾಗಿದ್ದು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವರಾಗಿ ಜನಪರ ಆಡಳಿತ ನೀಡುತ್ತಿದ್ದಾರೆ. ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕೈಗೊಂಡಿರುವ ಕ್ರಮಗಳು, ತಂತ್ರಜ್ಞಾನ ಕ್ಷೇತ್ರದ ಅಭಿವೃದ್ಧಿಗೆ ನೀಡುತ್ತಿರುವ ಉತ್ತೇಜನ ಹಾಗೂ ಶೋಷಿತ ಸಮುದಾಯಗಳ ಪರ ಹೋರಾಟಗಳು ರಾಜ್ಯಕ್ಕೆ ಮಾದರಿಯಾಗಿವೆ ಎಂದು ಕಟ್ಟಿಮನಿ ಶ್ಲಾಘಿಸಿದ್ದಾರೆ.
ಇದೇ ವೇಳೆ, ಅಲ್ಲಮಪ್ರಭು ಪಾಟೀಲ್ ಅವರು ಕಳೆದ ಐದು ದಶಕಗಳಿಂದ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ, ಗ್ರಾಮ ಪಂಚಾಯತ್ ಹಾಗೂ ಮಂಡಲ್ ಪಂಚಾಯತ್ ಹಂತದಿಂದಲೇ ಪಕ್ಷ ಸಂಘಟನೆಗಾಗಿ ದುಡಿಯುತ್ತಿರುವ ಕಲಬುರಗಿ ದಕ್ಷಿಣ ಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ್ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಮನವಿ ಮಾಡಿದರು.