ಕಲಬುರಗಿ | ಹೆಲ್ಮೆಟ್ ಧರಿಸಿ – ಜೀವ ಉಳಿಸಿ: ಜನಜಾಗೃತಿ ಬೈಕ್ ರ‍್ಯಾಲಿ

Update: 2026-07-25 19:54 IST

ಕಲಬುರಗಿ: ರಸ್ತೆ ಅಪಘಾತಗಳ ತಡೆ ಹಾಗೂ ಯುವಜನರಲ್ಲಿ ಹೆಚ್ಚುತ್ತಿರುವ ಡ್ರಗ್ಸ್ ಮತ್ತು ಮಾದಕ ವ್ಯಸನದ ವಿರುದ್ಧ ಜನಜಾಗೃತಿ ಮೂಡಿಸುವ ಉದ್ದೇಶದಿಂದ ಜಯ ಕರ್ನಾಟಕ ಜನಪರ ವೇದಿಕೆಯ ಜಿಲ್ಲಾ ಘಟಕದ ವತಿಯಿಂದ ಶನಿವಾರ "ಹೆಲ್ಮೆಟ್ ಧರಿಸಿ – ಜೀವ ಉಳಿಸಿ" ಹಾಗೂ "ಡ್ರಗ್ಸ್‌ಗೆ ನಕಾರ ನೀಡಿ. ಆರೋಗ್ಯಕರ ಸಮಾಜ ನಿರ್ಮಿಸಿ" ಎಂಬ ಘೋಷಣೆಯಡಿ ಬೃಹತ್ ಜನಜಾಗೃತಿ ಬೈಕ್ ರ‍್ಯಾಲಿ ಯಶಸ್ವಿಯಾಗಿ ನಡೆಯಿತು.

ನಗರದ ನಾಗರೇಶ್ವರ ಶಾಲೆಯಿಂದ ಆರಂಭವಾದ ಬೈಕ್ ರ‍್ಯಾಲಿಯು ಸೂಪರ್ ಮಾರ್ಕೆಟ್, ಜಗತ್ ವೃತ್ತ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಸಮಾಪ್ತಿಯಾಯಿತು.

ರ‍್ಯಾಲಿಯಲ್ಲಿ ಭಾಗವಹಿಸಿದ ಕಾರ್ಯಕರ್ತರು ಮತ್ತು ಯುವಕರು ಹೆಲ್ಮೆಟ್ ಧಾರಣೆಯ ಮಹತ್ವ, ಸಂಚಾರ ನಿಯಮಗಳ ಕಟ್ಟುನಿಟ್ಟಿನ ಪಾಲನೆ ಹಾಗೂ ಡ್ರಗ್ಸ್ ಮತ್ತು ಮಾದಕ ವ್ಯಸನದಿಂದ ದೂರವಿರುವ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು. ರ‍್ಯಾಲಿಗೆ ಸಾರ್ವಜನಿಕರು ಹಾಗೂ ವಾಹನ ಸವಾರರಿಂದ ಉತ್ತಮ ಸ್ಪಂದನೆ ವ್ಯಕ್ತವಾಯಿತು.

ಕಾರ್ಯಕ್ರಮಕ್ಕೆ ಅಗತ್ಯ ಅನುಮತಿ ನೀಡಿ, ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸಿ, ಭದ್ರತೆ ಒದಗಿಸಿದ ಕಲಬುರಗಿ ನಗರ ಪೊಲೀಸ್ ಇಲಾಖೆ, ಸಂಚಾರ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಜಯ ಕರ್ನಾಟಕ ಜನಪರ ವೇದಿಕೆ ವತಿಯಿಂದ ಕೃತಜ್ಞತೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಜಯ ಕರ್ನಾಟಕ ಜನಪರ ವೇದಿಕೆ ಕಲಬುರಗಿ ಜಿಲ್ಲಾಧ್ಯಕ್ಷ ಅರುಣಕುಮಾರ್ ಎಂ. ನಾಮದಾರ್, ರಸ್ತೆ ಸುರಕ್ಷತೆ ಮತ್ತು ಡ್ರಗ್ಸ್ ಮುಕ್ತ ಸಮಾಜ ನಿರ್ಮಾಣವು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ. ಯುವಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಇಂತಹ ಸಾಮಾಜಿಕ ಅಭಿಯಾನಗಳನ್ನು ಮುಂದಿನ ದಿನಗಳಲ್ಲಿಯೂ ನಿರಂತರವಾಗಿ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

ರ‍್ಯಾಲಿಯಲ್ಲಿ ಜಿಲ್ಲಾ ಉಪಾಧ್ಯಕ್ಷ ಸದಾಶಿವ ಕ್ಷತ್ರಿಯ, ಅಫಜಲಪುರ ತಾಲೂಕು ಅಧ್ಯಕ್ಷ ಮುತ್ತು ಕುರಿಮನಿ, ಯಡ್ರಾಮಿ ಮುಖಂಡ ಜಗದೀಶ್ ಮಡಿವಾಳ, ಜೇವರ್ಗಿ ಅಧ್ಯಕ್ಷ ಸತೀಶ್ ಜೆ, ಜಿಲ್ಲಾ, ತಾಲೂಕು ಹಾಗೂ ನಗರ ಘಟಕದ ಪದಾಧಿಕಾರಿಗಳು, ಕಾರ್ಯಕರ್ತರು, ಯುವಕರು ಮತ್ತು ಸಾರ್ವಜನಿಕರು ಭಾಗವಹಿಸಿದ್ದರು.


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News