Kalaburagi | ಶರಣಬಸವೇಶ್ವರ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ
ಕಲಬುರಗಿ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಶರಣಬಸವೇಶ್ವರ ವಿಜ್ಞಾನ ಮಹಾವಿದ್ಯಾಲಯದ ಸಸ್ಯಶಾಸ್ತ್ರ, ಪ್ರಾಣಿಶಾಸ್ತ್ರ ಹಾಗೂ ಇಕೋ ಕ್ಲಬ್ ವತಿಯಿಂದ ಗುರುವಾರ ಪರಿಸರ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ಹಿಂಗುಲಾಂಬಿಕ ಆಯುರ್ವೇದಿಕ್ ಮೆಡಿಕಲ್ ಕಾಲೇಜಿನ ಪ್ರಾಧ್ಯಾಪಕಿ ಪ್ರೊ.ನಿರ್ಮಲ ಕೆಳಮನಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ವಿಶ್ವ ಪರಿಸರ ದಿನಾಚರಣೆಯ ಈ ವರ್ಷದ ಧ್ಯೇಯವಾಕ್ಯದ ಕುರಿತು ವಿವರವಾಗಿ ತಿಳಿಸಿದ ಅವರು, ಪರಿಸರ ಸಂರಕ್ಷಣೆ ಇಂದಿನ ಅಗತ್ಯವಾಗಿದ್ದು, ಪ್ರತಿಯೊಬ್ಬರೂ ದಿನನಿತ್ಯದ ಬದುಕಿನಲ್ಲಿ ಪರಿಸರದ ಬಗ್ಗೆ ಕಾಳಜಿ ವಹಿಸಬೇಕು ಎಂದು ಕರೆ ನೀಡಿದರು.
ಪರಿಸರವನ್ನು ಕಾಪಾಡುವುದು ಕೇವಲ ಇಂದಿನ ಅಗತ್ಯವಲ್ಲ, ಮುಂದಿನ ಪೀಳಿಗೆಯ ಭವಿಷ್ಯವನ್ನು ಸುರಕ್ಷಿತಗೊಳಿಸುವ ಜವಾಬ್ದಾರಿಯೂ ಆಗಿದೆ. ಹವಾಮಾನ ಬದಲಾವಣೆ, ಮಾಲಿನ್ಯ ಹಾಗೂ ನೈಸರ್ಗಿಕ ಸಂಪನ್ಮೂಲಗಳ ಕ್ಷೀಣತೆ ತಡೆಯಲು ಎಲ್ಲರೂ ಪರಿಸರ ಸ್ನೇಹಿ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ.ಲತಾದೇವಿ ಕರೆಕಲ್, ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಹೇಳಿದರು. ಪರಿಸರ ಸ್ನೇಹಿ ವಸ್ತುಗಳ ಬಳಕೆಯನ್ನು ಹೆಚ್ಚಿಸುವ ಮೂಲಕ ಸುಸ್ಥಿರ ಅಭಿವೃದ್ಧಿಯ ಗುರಿಯನ್ನು ಸಾಧಿಸಲು ಎಲ್ಲರೂ ಕೈಜೋಡಿಸಬೇಕು ಎಂದು ಅವರು ಅಭಿಪ್ರಾಯಪಟ್ಟರು.
ಕಾರ್ಯಕ್ರಮದ ಅಂಗವಾಗಿ ‘ಪಂಚವಟಿ’ ಪರಿಕಲ್ಪನೆಯಡಿ ಅರಳಿ, ಆಲ, ಶಮಿ, ಬೇವು ಹಾಗೂ ಬಿಲ್ವಪತ್ರೆ ಸಸಿಗಳನ್ನು ನೆಡುವ ಮೂಲಕ ಪರಿಸರ ಸಂರಕ್ಷಣೆಯ ಮಹತ್ವವನ್ನು ಸಾರಲಾಯಿತು. ಸಸಿ ನೆಡುವುದರ ಜೊತೆಗೆ ಅವುಗಳನ್ನು ಪೋಷಿಸುವ ಸಂಕಲ್ಪವನ್ನೂ ವಿದ್ಯಾರ್ಥಿಗಳು ಕೈಗೊಂಡರು.