ಕಲಬುರಗಿ | ಮಾದಕ ದ್ರವ್ಯ ದುಷ್ಪಪರಿಣಾಮಗಳ ಕುರಿತು ಯುವ ಸಮೂಹಕ್ಕೆ ಅರಿವು ಅಗತ್ಯ : ಬಿ.ಫೌಝಿಯಾ ತರನ್ನುಮ್
ಕಲಬುರಗಿ : ಮಾದಕ ದ್ರವ್ಯ ಮುಕ್ತ ಜಿಲ್ಲೆಯನ್ನಾಗಿಸಲು ಸುಲಭವಾಗಿ ನಶೆಗೆ ಮಾರು ಹೋಗುವ ವಿದ್ಯಾರ್ಥಿ ಸಮೂಹಕ್ಕೆ ಅರಿವು ಮೂಡಿಸುವ ಅಗತ್ಯವಿದ್ದು, ಮುಂಬರುವ ಜೂನ್ ತಿಂಗಳಲ್ಲಿ ಪ್ರೌಢ ಶಾಲೆ, ಪಿ.ಯು. ಕಾಲೇಜು, ಪದವಿ ಕಾಲೇಜು, ಇಂಜಿನಿಯರಿಂಗ್ ಮತ್ತು ಮೆಡಿಕಲ್ ಕಾಲೇಜುಗಳಲ್ಲಿ ಮಾದಕ ದ್ರವ್ಯಗಳ ದುಷ್ಪರಿಣಾಮಗಳ ಕುರಿತು ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಬುಧವಾರ ಸಂಜೆ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಾದಕ ದ್ರವ್ಯ ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾ ಮಟ್ಟದ ಮಾದಕ ದ್ರವ್ಯ ಸಮನ್ವಯ ಸಮಿತಿಯ (NCORD) ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಾದಕ ದ್ರವ್ಯ ಮುಕ್ತ ಜಿಲ್ಲೆಯನ್ನಾಗಿಸಲು ಅಬಕಾರಿ, ಆರೋಗ್ಯ, ಪೊಲೀಸ್ ಸೇರಿದಂತೆ ಸಂಬಂಧಿತ ಇಲಾಖೆಗಳ ಸಂಯೋಗದಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು, ಸಮಾಜಿಕ ಜಾಲತಾಣದಲ್ಲಿ ವ್ಯಾಪಕ ಪ್ರಚಾರ ಕಾರ್ಯ ಕೈಗೊಳ್ಳಬೇಕು ಎಂದರು.
ಕಳೆದ NCORD ಸಭೆಯಲ್ಲಿ ಮಾದಕ ವಸ್ತುಗಳ ಸೇವನೆ ದುಷ್ಪಾರಿಣಾಮಗಳ ಬಗ್ಗೆ ಎಲ್ಲಾ ತಾಲೂಕುಗಳಲ್ಲಿ ಅರಿವು ಮೂಡಿಸುವ ಕಿಟ್ ಲಭ್ಯವಿರುವಂತೆ ನಿರ್ದೇಶಿಸಲಾಗಿತ್ತು, ಪ್ರಸ್ತುತ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಕಿಟ್ ಗಳು ಲಭ್ಯವಿರುವ ಬಗ್ಗೆ ಕ್ರಮಕೈಗೊಳ್ಳಲು ತಿಳಿಸಿದರು.
ಅಬಕಾರಿ ಇಲಾಖೆಯಲ್ಲಿ ಮಾದಕ ವಸ್ತುಗಳ ಮಾರಾಟ ನಿಯಂತ್ರಣ ಕುರಿತು ವಿಶೇಷ ಜಾಗೃತಿ ದಳವನ್ನು ಸ್ಥಾಪನೆ ಮಾಡಿ ಹೆಚ್ಚೆಚ್ಚು ಪ್ರಕರಣಗಳನ್ನು ದಾಖಲಿಸಬೇಕು. ಅರಣ್ಯ ಇಲಾಖೆಯ ವ್ಯಾಪ್ತಿಯಲ್ಲಿ ಮಾದಕ ವಸ್ತುಗಳ ಅಕ್ರಮ ಸಾಗಾಟ ಮಾಡುವವರ ಬಗ್ಗೆ ಮಾಹಿತಿ ಕಲೆಹಾಕಿ ಅಂತವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಡಿ.ಸಿ ಅವರು ತಿಳಿಸಿದರು.
ಸಭೆಯಲ್ಲಿ ಎಸ್.ಪಿ. ಅಡ್ಡೂರು ಶ್ರೀನಿವಾಸಲು, ಡಿ.ಸಿ.ಪಿ ಕನಿಕಾ ಸಿಕ್ರಿವಾಲ್ ಡಿ.ಸಿ.ಎಫ್ ಸುಮಿತ್ ಪಾಟೀಲ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳಿದ್ದರು.