ಕಲಬುರಗಿ: ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಜೆನ್‌ಜಿ ಯುವಕರು ಅಟ್ಟಾಡಿಸಿ ಹೊಡೆಯುತ್ತಾರೆ ಎಂಬುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿರುವ ಹೇಳಿಕೆ ಯುವಕರನ್ನು ಪ್ರಚೋದಿಸುವಂತಿದ್ದು, ಖಂಡನೀಯ ಎಂದು ಮಾಜಿ ಲೋಕಸಭಾ ಸದಸ್ಯ ಡಾ.ಉಮೇಶ್ ಜಾಧವ್ ಆರೋಪಿಸಿದರು.

ಚಿತ್ತಾಪುರ ತಾಲೂಕಿನ ವಾಡಿಯ ಬಿಜೆಪಿ ಕಚೇರಿಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ಕಲಬುರಗಿಯಲ್ಲಿ ನಡೆದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಖರ್ಗೆ ಅವರು ಪ್ರಧಾನಿ ಹಾಗೂ ಗೃಹ ಸಚಿವರ ಕುರಿತು ಪ್ರಚೋದನಾತ್ಮಕ ಹೇಳಿಕೆ ನೀಡಿದ್ದಾರೆ. ಹಿರಿಯ ರಾಜಕಾರಣಿಯಾಗಿ ಇಂತಹ ಹೇಳಿಕೆ ನೀಡುವುದು ಅವರ ಘನತೆಗೆ ತಕ್ಕದ್ದಲ್ಲ ಎಂದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ರಾಜಕೀಯ ಭಿನ್ನಾಭಿಪ್ರಾಯಗಳಿದ್ದರೂ ಸಾರ್ವಜನಿಕವಾಗಿ ಮಾತನಾಡುವಾಗ ಸಂಯಮ ಕಾಯ್ದುಕೊಳ್ಳಬೇಕು. ಯುವಕರಿಗೆ ಸಂಘರ್ಷದ ಸಂದೇಶ ನೀಡುವಂತಹ ಹೇಳಿಕೆಗಳನ್ನು ನೀಡಬಾರದು. ಖರ್ಗೆ ಅವರು ತಮ್ಮ ಹೇಳಿಕೆಯನ್ನು ಹಿಂಪಡೆಯಬೇಕು ಎಂದು ಜಾಧವ್ ಒತ್ತಾಯಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಅಭಿವೃದ್ಧಿ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತದ ಸ್ಥಾನವನ್ನು ಬಲಪಡಿಸುವ ನಿಟ್ಟಿನಲ್ಲಿ ಹಲವು ಕ್ರಮಗಳನ್ನು ಕೈಗೊಂಡಿದ್ದಾರೆ. ಅಮಿತ್ ಶಾ ಅವರು ಭಯೋತ್ಪಾದನೆ ನಿರ್ಮೂಲನೆ ಸೇರಿದಂತೆ ದೇಶದ ಭದ್ರತೆಗೆ ಸಂಬಂಧಿಸಿದ ಹಲವು ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ. ಇಂತಹ ನಾಯಕರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡುವುದು ಸರಿಯಲ್ಲ ಎಂದು ಅವರು ಹೇಳಿದರು.

ಇದೇ ವೇಳೆ ಚಿತ್ತಾಪುರ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ವಿಚಾರವನ್ನೂ ಪ್ರಸ್ತಾಪಿಸಿದ ಜಾಧವ್, ಕ್ಷೇತ್ರದಲ್ಲಿ ಸಮರ್ಪಕ ರಸ್ತೆಗಳಿಲ್ಲದೆ ಜನರು ತೊಂದರೆ ಅನುಭವಿಸುತ್ತಿದ್ದಾರೆ. ಗಣಿಗಾರಿಕೆ ಚಟುವಟಿಕೆಗಳು ಸ್ಥಗಿತಗೊಂಡಿರುವುದರಿಂದ ಉದ್ಯೋಗಾವಕಾಶಗಳ ಕೊರತೆಯಿದ್ದು, ಜನರು ಉದ್ಯೋಗಕ್ಕಾಗಿ ವಲಸೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಿಸಿದರು.

ಚಿತ್ತಾಪುರ ಕ್ಷೇತ್ರದ ಶಾಸಕರು ಕ್ಷೇತ್ರದ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಶಾಸಕ ಪ್ರಿಯಾಂಕ್ ಖರ್ಗೆ ಅವರು ಕ್ಷೇತ್ರಕ್ಕೆ ಭೇಟಿ ನೀಡಿ ಜನರ ಸಮಸ್ಯೆಗಳನ್ನು ಖುದ್ದಾಗಿ ಆಲಿಸಿ ಪರಿಹಾರ ಕಲ್ಪಿಸಬೇಕು ಎಂದು ಡಾ. ಉಮೇಶ್ ಜಾಧವ್ ಆಗ್ರಹಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ,ಜಿಲ್ಲಾ ಎಸ್ ಸಿ. ಮೋರ್ಚಾ ಉಪಾಧ್ಯಕ್ಷ ರಾಜು ಮುಕ್ಕಣ್ಣ, ಪುರಸಭೆ ಮಾಜಿ ಅಧ್ಯಕ್ಷ ಭಗವತ್ ಸುಳೆ, ಯುವ ಮುಖಂಡ ವಿಠಲ ವಾಲ್ಮೀಕ ನಾಯಕ, ಯುವ ಮೋರ್ಚಾ ಅಧ್ಯಕ್ಷ ಭಾಗಣ್ಣ ದೊರೆ, ಮುಖಂಡರಾದ ಅಶೋಕ ಪವಾರ, ರವಿಕುಮಾರ ರಾಠೋಡ ಮಳಖೇಡ, ರಿಚರ್ಡ್ ಮಾರೆಡ್ಡಿ, ವಿನೋದ ಚವ್ಹಾಣ ಯಾಗಾಪುರ, ಮಲ್ಲಿಕಾರ್ಜುನ ಸಾತಖೇಡ ಮತ್ತಿತರರು ಇದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor