×
Ad

ಕಲಬುರಗಿಯಲ್ಲಿ ಎಸೆಸೆಲ್ಸಿ, ಪಿಯುಸಿ ಪರೀಕ್ಷೆಗಳ ಫಲಿತಾಂಶ ಸುಧಾರಣೆಗೆ ಅಗತ್ಯ ಕ್ರಮ: ಅಧಿಕಾರಿಗಳಿಗೆ ಪ್ರಿಯಾಂಕ್ ಖರ್ಗೆ ಸೂಚನೆ

Update: 2025-05-08 09:47 IST

ಕಲಬುರಗಿ: ಜಿಲ್ಲೆಯಲ್ಲಿ ಎಸೆಸೆಲ್ಸಿ, ಪಿಯುಸಿ ಪರೀಕ್ಷೆಗಳ ಫಲಿತಾಂಶದಲ್ಲಿ ಗಣನೀಯ ಇಳಿಕೆ ಕಂಡು ಬಂದಿರುವ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಅಗತ್ಯ ಕ್ರಮ ವಹಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಸೂಚಿಸಿದ್ದಾರೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ವಿ.ರಶ್ಮಿ ಹಾಗೂ ಹಾಗೂ ಶಿಕ್ಷಣ ಇಲಾಖೆಯ ಕಲಬುರಗಿ ವಿಭಾಗದ ಅಪರ ಆಯುಕ್ತ ಆಕಾಶ್ ಅವರೊಂದಿಗೆ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಬುಧವಾರ ಸಭೆ ನಡೆಸಿದ ಸಚಿವರು, ಕಲಬುರಗಿ ಜಿಲ್ಲೆಯ ಶೈಕ್ಷಣಿಕ ಗುಣಮಟ್ಟದ ಸುಧಾರಣೆಗೆ ಬೇಕಾದ ಅಗತ್ಯ ಕಾರ್ಯಕ್ರಮಗಳನ್ನು ರೂಪಿಸಲು ಸೂಚನೆ ನೀಡಿದರು.

ಈ ಬಾರಿಯ ಎಸೆಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಗಳ ಫಲಿತಾಂಶಗಳು ಶೈಕ್ಷಣಿಕವಾಗಿ ಕಲಬುರಗಿ ಜಿಲ್ಲೆ ಬಹಳಷ್ಟು ಸುಧಾರಣೆಗೊಳ್ಳಬೇಕಾಗಿದೆ ಎಂಬುದನ್ನು ತೋರಿಸುತ್ತಿದೆ, ಶಿಕ್ಷಣ ಸಮಾಜದ ಸ್ಥಿತಿಗತಿಗಳನ್ನು ಅಳೆಯುವ ಮಾನದಂಡವಾಗಿದ್ದು ಸಾಮಾಜಿಕ ಹಾಗೂ ಆರ್ಥಿಕ ಪರಿಸ್ಥಿತಿಗಳೂ ಸಹ ಶೈಕ್ಷಣಿಕ ಗುಣಮಟ್ಟದ ಮೇಲೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಪರಿಣಾಮ ಬೀರುತ್ತವೆ ಎನ್ನುವುದನ್ನೂ ಸಹ ಒಪ್ಪಿಕೊಳ್ಳಬೇಕಿದೆ. ಈ ಹಿನ್ನೆಲೆಯಲ್ಲಿ ಶೈಕ್ಷಣಿಕ ಪ್ರಗತಿಗೆ ಅಗತ್ಯ ಕ್ರಮವಹಿಸಬೇಕು ಎಂದು ಸಚಿವರು ಹೇಳಿದರು.

ಕಲಬುರಗಿ ಜಿಲ್ಲೆಯಲ್ಲಿನ ಶೈಕ್ಷಣಿಕ ಸ್ಥಿತಿಯನ್ನು ಉತ್ತಮಗೊಳಿಸುವ ಕೆಲಸ ನಾವು ಮಾಡಲೇಬೇಕಿದೆ ಎಂದು ಅಧಿಕಾರಿಗಳಿಗೆ ತಿಳಿಸಿದ ಸಚಿವರು, ಜಿಲ್ಲೆಯ ಶೈಕ್ಷಣಿಕ ಕ್ಷೇತ್ರದ ನ್ಯೂನತೆಗಳನ್ನು ಅಧ್ಯಯನ ಮಾಡಿ ಪರಿಹಾರಗಳ ಕುರಿತು ಗಂಭೀರವಾಗಿ ಚಿಂತನೆ ನಡೆಸಬೇಕು ಹಾಗೂ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸಬೇಕು ಎಂದು ಸಲಹೆ ನೀಡಿದರು.

ಈ ಶೈಕ್ಷಣಿಕ ವರ್ಷಕ್ಕೆ ಕಲಬುರಗಿ ಜಿಲ್ಲೆಗೆ ಸಂಬಂಧಿಸಿದಂತೆ ನೀಲನಕ್ಷೆಯನ್ನು ಸಿದ್ಧಪಡಿಸಲು ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News