ವಸತಿ ನಿಲಯದ ಸೌಲಭ್ಯದ ಸದುಪಯೋಗ ಪಡೆದುಕೊಳ್ಳಿ: ಸೋಮಶೇಖರ ವಾಯ್
ಕಲಬುರಗಿ: ವಸತಿ ನಿಲಯದಲ್ಲಿ ನೀಡುವ ಮೂಲಭೂತ ಸೌಕರ್ಯಗಳನ್ನು ಬಳಸಿಕೊಂಡು ವಿದ್ಯಾರ್ಥಿಗಳು ತಮ್ಮ ಗುರಿ ತಲುಪಿ, ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಸೋಮಶೇಖರ ವಾಯ್ ಕರೆ ನೀಡಿದ್ದಾರೆ.
ಗುಲ್ಬರ್ಗಾ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದ ಕಾವೇರಿ ವಸತಿ ನಿಲಯದಲ್ಲಿ (ವಸತಿ ನಿಲಯದ ಕೋಡ್ 2090 ಮತ್ತು 2093) 'ನಮ್ಮ ಬದುಕೆಂಬ ದೋಣಿಗೆ ನಾವೇ ನಾವಿಕರು' ಎಂಬ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.
ತಾಲೂಕು ಕಲ್ಯಾಣಾಧಿಕಾರಿಗಳಾದ ಶರಣಬಸಪ್ಪ ಪಾಟೀಲ್ ಮಾತನಾಡಿ, ವಸತಿ ನಿಲಯದ ವಿದ್ಯಾರ್ಥಿಗಳು ಹಮ್ಮಿಕೊಂಡಿರುವ ಈ ಕಾರ್ಯಕ್ರಮ ಶ್ಲಾಘನೀಯ. ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿ ಜೀವನದಲ್ಲಿ ಅರ್ಥಪೂರ್ಣವಾದವುಗಳು ಎಂದು ಹೇಳಿದರು.
ಮುಖ್ಯ ಭಾಷಣಕಾರರಾಗಿ ಆಗಮಿಸಿದ್ದ ಕೆ. ಎಂ. ವಿಶ್ವನಾಥ್ ಮರತೂರ ಮಾತನಾಡಿ, ನಮ್ಮ ಬದುಕನ್ನು ನಾವೇ ರೂಪಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಸ್ಫೂರ್ತಿ ತುಂಬಿದರು.
ಕಾವೇರಿ ವಸತಿ ನಿಲಯದ ಅಧ್ಯಕ್ಷ ಸಂತೋಷಕುಮಾರ ಎಸ್.ಪಿ. ಮಾತನಾಡಿ ಶುಭ ಹಾರೈಸಿದರು.
ಅತಿಥಿಗಳಾಗಿ ಎನ್.ಎಸ್.ಯು.ಐ ಜಿಲ್ಲಾಧ್ಯಕ್ಷ ಡಾ.ಗೌತಮ್ ಕರಿಕಲ್, ಗುಲ್ಬರ್ಗಾ ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಪದವಿ ಮತ್ತು ಸಂಶೋಧನಾ ವಿದ್ಯಾರ್ಥಿಗಳ ಒಕ್ಕೂಟದ ಪದಾಧಿಕಾರಿಗಳು ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ವಸತಿ ನಿಲಯದ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.