ಎನ್.ರವಿಕುಮಾರ್

ಕಲಬುರಗಿ : ಕಲಬುರಗಿ ಜಿಲ್ಲಾಧಿಕಾರಿ ಫೌಝಿಯಾ ತರನ್ನುಮ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣದಲ್ಲಿ ಬಿಜೆಪಿ ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ವಿರುದ್ಧ ಬೆಂಗಳೂರಿನ 42ನೇ ಅಡಿಷನಲ್ ಚೀಫ್ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ (ACJM) ನ್ಯಾಯಾಲಯ ಜಾಮೀನುರಹಿತ ಬಂಧನ ವಾರಂಟ್ (NBW) ಹೊರಡಿಸಿದೆ ಎಂದು ವರದಿಯಾಗಿದೆ.

ಈ ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ನ್ಯಾಯಾಲಯ ಈಗಾಗಲೇ ಸಮನ್ಸ್ ಜಾರಿಗೊಳಿಸಿತ್ತು. ಆದರೆ, ಸಮನ್ಸ್‌ಗೆ ಸ್ಪಂದಿಸದೆ ವಿಚಾರಣೆಗೆ ಗೈರುಹಾಜರಾದ ಹಿನ್ನೆಲೆಯಲ್ಲಿ ನ್ಯಾಯಾಧೀಶ ಸಂದೀಪ್ ಪಾಟೀಲ್ ಅವರು ಜಾಮೀನುರಹಿತ ಬಂಧನ ವಾರಂಟ್ ಜಾರಿಗೊಳಿಸುವಂತೆ ಆದೇಶ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಕಳೆದ ವರ್ಷ ಕಲಬುರಗಿಯಲ್ಲಿ ನಡೆದ ಪ್ರತಿಭಟನೆ ವೇಳೆ ಜಿಲ್ಲಾಧಿಕಾರಿ ಫೌಝಿಯಾ ತರನ್ನಮ್ ವಿರುದ್ಧ ಎನ್.ರವಿಕುಮಾರ್ ಅವಹೇಳನಕಾರಿ ಹೇಳಿಕೆ ನೀಡಿದ್ದರು ಎಂಬ ಆರೋಪದಡಿ ಕಲಬುರಗಿಯ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು.

ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಎನ್.ರವಿಕುಮಾರ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಹೈಕೋರ್ಟ್ ಪ್ರಕರಣಕ್ಕೆ ಮಧ್ಯಂತರ ತಡೆ ನೀಡಲು ನಿರಾಕರಿಸಿತ್ತು. ಹೈಕೋರ್ಟ್‌ನಿಂದ ಯಾವುದೇ ಮಧ್ಯಂತರ ಪರಿಹಾರ ಸಿಗದಿದ್ದರೂ ಅಧೀನ ನ್ಯಾಯಾಲಯದ ಸಮನ್ಸ್‌ಗೆ ಹಾಜರಾಗದ ಕಾರಣ ಇದೀಗ 42ನೇ ಎಸಿಜೆಎಂ ನ್ಯಾಯಾಲಯವು ಅವರ ವಿರುದ್ಧ ಜಾಮೀನುರಹಿತ ಬಂಧನ ವಾರಂಟ್ ಹೊರಡಿಸಿದೆ ಎಂದು ವರದಿಯಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor