ಬರ ಘೋಷಣೆಗೆ ಬಿಜೆಪಿಯವರು ಕೇಂದ್ರದ ಮೇಲೆ ಒತ್ತಡ ಹೇರಲಿ: ಸಚಿವ ಪ್ರಿಯಾಂಕ್ ಖರ್ಗೆ

Update: 2026-08-10 20:01 IST

ಕಲಬುರಗಿ: ಬರ ಘೋಷಣೆ ಮಾಡಬೇಕೆಂದು ರಾಜ್ಯ ಸರ್ಕಾರದ ವಿರುದ್ಧ ಟೀಕೆ ಮಾಡುವುದನ್ನು ಬಿಟ್ಟು, ರಾಜ್ಯಕ್ಕೆ ಅಗತ್ಯವಿರುವ ಪರಿಹಾರ ಹಾಗೂ ಅನುದಾನ ಬಿಡುಗಡೆ ಮಾಡುವಂತೆ ಬಿಜೆಪಿ ನಾಯಕರು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲಿ ಎಂದು ಗೃಹ ಸಚಿವ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಸವಾಲು ಹಾಕಿದ್ದಾರೆ.

ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬೆಳೆ ವಿಮೆ ಪಾವತಿಯಲ್ಲಿ ಕರ್ನಾಟಕ ದೇಶದಲ್ಲೇ ಮುಂಚೂಣಿಯಲ್ಲಿದ್ದು, ಹೆಚ್ಚು ಬೆಳೆ ವಿಮೆ ಪಾವತಿಸುವ ರಾಜ್ಯಗಳಲ್ಲಿ ಎರಡನೇ ಸ್ಥಾನದಲ್ಲಿದೆ. ಇದು ರಾಜ್ಯ ಸರ್ಕಾರದ ಕ್ರಮಗಳಿಂದ ಸಾಧ್ಯವಾಗಿದೆ ಎಂದರು.

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ಪಾಲು ಪಡೆಯಲು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಬಳಿ ಹಲವು ಬಾರಿ ಮನವಿ ಮಾಡಲಾಗಿದೆ. ಶಾಸಕರು ಹಾಗೂ ಸಚಿವರು ಪ್ರತಿಭಟನೆ ನಡೆಸಿದ್ದಾರೆ. ಕೊನೆಗೆ ಸುಪ್ರೀಂಕೋರ್ಟ್ ಮೂಲಕ ರಾಜ್ಯದ ಪಾಲನ್ನು ಪಡೆಯುವಲ್ಲಿ ಯಶಸ್ವಿಯಾಗಿದ್ದೇವೆ. ಪ್ರತಿ ಬಾರಿಯೂ ರಾಜ್ಯದ ಹಕ್ಕಿನ ಹಣಕ್ಕಾಗಿ ಸುಪ್ರೀಂ ಕೋರ್ಟ್ ಮೊರೆ ಹೋಗಲು ಸಾಧ್ಯವೇ? ಎಂದು ಪ್ರಶ್ನಿಸಿದರು.

ಹಿಂದೆ ರಾಜ್ಯಕ್ಕೆ 28 ಕೋಟಿ ಮಾತ್ರ ಪರಿಹಾರ ದೊರೆಯುತ್ತಿತ್ತು. ಇದೀಗ ನಮ್ಮ ಸರ್ಕಾರ ಬಂದಾಗಿನಿಂದ ಜಿಲ್ಲೆಯ ರೈತರಿಗೆ 650 ಕೋಟಿಗೂ ಹೆಚ್ಚು ಪರಿಹಾರ ದೊರೆತಿದೆ. ರಾಜ್ಯದ ರೈತರ ಬಗ್ಗೆ ಬಿಜೆಪಿಯವರಿಗೆ ನಿಜವಾದ ಕಾಳಜಿ ಇದ್ದರೆ, ಕೇಂದ್ರದ ಮೇಲೆ ಒತ್ತಡ ಹೇರಿ ರಾಜ್ಯಕ್ಕೆ ಬರಬೇಕಾದ ಅನುದಾನವನ್ನು ತರಿಸಿಕೊಡಲಿ ಎಂದು ವಾಗ್ದಾಳಿ ನಡೆಸಿದರು.

ಬರ ಘೋಷಣೆ ವಿಚಾರದಲ್ಲಿ ಸರ್ಕಾರವು ‘ಗ್ರೌಂಡ್ ಟ್ರುತ್’ ಪರಿಶೀಲನೆ ಹಾಗೂ ಎನ್‌ಡಿಆರ್‌ಎಫ್ ತಂಡದ ವೀಕ್ಷಣೆಯ ಬಳಿಕ ಸೂಕ್ತ ನಿರ್ಧಾರ ಕೈಗೊಳ್ಳಲಿದೆ. ರೈತರ ಸಾಲಮನ್ನಾ ಸೇರಿದಂತೆ ರೈತರ ಹಿತಾಸಕ್ತಿಗೆ ಸಂಬಂಧಿಸಿದ ವಿಷಯಗಳನ್ನೂ ಸರ್ಕಾರ ಗಂಭೀರವಾಗಿ ಪರಿಗಣಿಸುತ್ತಿದೆ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಶಾಸಕರಾದ ಅಲ್ಲಂಪ್ರಭು ಪಾಟೀಲ್, ಎಂ.ವೈ.ಪಾಟೀಲ್, ತಿಪ್ಪಣ್ಣಪ್ಪ ಕಮಕನೂರ್, ಜಗದೇವ ಗುತ್ತೇದಾರ್, ಪಾಲಿಕೆ ಮೇಯರ್ ವರ್ಷಾ ಜಾನೆ, ಮಜಹರ್ ಆಲಂ ಖಾನ್, ಪ್ರವೀಣ ಹರವಾಳ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News