ಕೈಗಾರಿಕಾ ಮಾಲಿನ್ಯ ಖಂಡಿಸಿ ಹುಮನಾಬಾದ್‌ನಲ್ಲಿ ರಸ್ತೆ ತಡೆದು ಪ್ರತಿಭಟನೆ; ಶಾಶ್ವತ ಪರಿಹಾರಕ್ಕೆ ಆಗ್ರಹ

Update: 2026-08-11 20:22 IST

ಹುಮನಾಬಾದ್: ಪಟ್ಟಣದ ಹೊರವಲಯದಲ್ಲಿರುವ ಕೈಗಾರಿಕಾ ಪ್ರದೇಶದಿಂದ ಜನಜೀವನಕ್ಕೆ ಹಾನಿಯಾಗುತ್ತಿದೆ ಎಂದು ಆರೋಪಿಸಿ ಹಾಗೂ ಮಾಲಿನ್ಯ ಉಂಟುಮಾಡುತ್ತಿರುವ ಕಂಪನಿಗಳ ವಿರುದ್ಧ ಕ್ರಮ ಕೈಗೊಂಡು ಸ್ವಚ್ಛ ಮತ್ತು ಆರೋಗ್ಯಕರ ವಾತಾವರಣ ನಿರ್ಮಿಸಬೇಕು ಎಂದು ಆಗ್ರಹಿಸಿ ಮಾಣಿಕನಗರದ ಆನಂದರಾಜ್ ಮಹಾರಾಜ್ ಅವರ ನೇತೃತ್ವದಲ್ಲಿ ಮಂಗಳವಾರ ಹುಮನಾಬಾದ್–ಕಲಬುರಗಿ ಮುಖ್ಯ ರಸ್ತೆ ತಡೆದು ಪ್ರತಿಭಟನೆ ನಡೆಸಲಾಯಿತು.

ಕೈಗಾರಿಕಾ ಪ್ರದೇಶದ ಸಮೀಪದ ಮುಖ್ಯ ರಸ್ತೆಯಲ್ಲಿ ಬೆಳಿಗ್ಗೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಪ್ರತಿಭಟನೆ ನಡೆಯಿತು. ಪ್ರತಿಭಟನಾಕಾರರು ರಾಸಾಯನಿಕ ಕಾರ್ಖಾನೆಗಳನ್ನು ಬಂದ್ ಮಾಡಬೇಕು ಎಂದು ಘೋಷಣೆ ಕೂಗಿದರು. ರಸ್ತೆ ತಡೆ ಹಿನ್ನೆಲೆಯಲ್ಲಿ ಕೆಲಕಾಲ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು.

ಕೈಗಾರಿಕಾ ಪ್ರದೇಶದ ಕಾರ್ಖಾನೆಗಳಿಂದ ವಾಯು ಹಾಗೂ ಜಲಮಾಲಿನ್ಯ ಉಂಟಾಗುತ್ತಿದ್ದು, ಇದರಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಚರ್ಮರೋಗ ಸೇರಿದಂತೆ ವಿವಿಧ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿವೆ. ಮಾಣಿಕನಗರದ ಗುರುಗಂಗೆ ಹಳ್ಳವೂ ಮಾಲಿನ್ಯದಿಂದ ಹಾಳಾಗಿದ್ದು, ಹಿಂದೆ ಭಕ್ತರು ಸ್ನಾನ ಮಾಡುತ್ತಿದ್ದ ಈ ಹಳ್ಳದಲ್ಲಿ ಇದೀಗ ನೀರಿನ ಗುಣಮಟ್ಟ ಹದಗೆಟ್ಟಿದೆ. ಮಾಲಿನ್ಯದಿಂದ ಕೃಷಿಗೂ ತೊಂದರೆಯಾಗುತ್ತಿದ್ದು, ರೈತರ ಬೆಳೆಗಳ ಮೇಲೂ ಪರಿಣಾಮ ಬೀರುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ನಿರಂತರ ಹೋರಾಟಗಳ ಹಿನ್ನೆಲೆಯಲ್ಲಿ ಈಗಾಗಲೇ ಮೂರು ಕಂಪನಿಗಳನ್ನು ಬಂದ್ ಮಾಡುವಂತೆ ಆದೇಶ ಹೊರಡಿಸಲಾಗಿದೆ. ಆದರೆ, ಇನ್ನೂ ಕೆಲವು ಕಂಪನಿಗಳಿಂದ ಜನಜೀವನಕ್ಕೆ ಹಾನಿಯಾಗುತ್ತಿದೆ. ಅಂತಹ ಘಟಕಗಳ ವಿರುದ್ಧವೂ ಸೂಕ್ತ ಕ್ರಮ ಕೈಗೊಂಡು ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಶಾಶ್ವತ ಪರಿಹಾರಕ್ಕೆ ಸಚಿವರ ಭರವಸೆ :

ಸಚಿವ ಈಶ್ವರ ಖಂಡ್ರೆ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿ, ಹುಮನಾಬಾದ್ ಕ್ಷೇತ್ರದ ಜನರಿಗೆ ನ್ಯಾಯ ದೊರಕಿಸಿಕೊಡುವ ಭರವಸೆ ನೀಡಿದರು.

ವಿಧಾನ ಪರಿಷತ್ ಸದಸ್ಯ ಭೀಮರಾವ್ ಪಾಟೀಲ್ ಮಾತನಾಡಿ, “ಪ್ರತಿಸಲ ಕಾರ್ಖಾನೆಗಳನ್ನು ಬಂದ್ ಮಾಡಲಾಗುತ್ತದೆ. ಆದರೆ ಕೆಲವೇ ದಿನಗಳಲ್ಲಿ ಮತ್ತೆ ಅವು ಕಾರ್ಯಾರಂಭಿಸುತ್ತವೆ. ಇದರಿಂದ ಜನಪ್ರತಿನಿಧಿಗಳ ಮೇಲಿನ ಜನರ ನಂಬಿಕೆ ಕಳೆದುಕೊಳ್ಳುವಂತಾಗಿದೆ. ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು. ಇಲ್ಲವಾದರೆ ನನ್ನ ಇನ್ನೂ ಒಂದೂವರೆ ವರ್ಷ ಬಾಕಿ ಇರುವ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ” ಎಂದು ಸಚಿವ ಈಶ್ವರ ಖಂಡ್ರೆ ಅವರಿಗೆ ಎಚ್ಚರಿಕೆ ನೀಡಿದರು.

ಈ ವೇಳೆ ಮಾಜಿ ಸಚಿವ ರಾಜಶೇಖರ್ ಪಾಟೀಲ್, ವಿಧಾನ ಪರಿಷತ್ ಸದಸ್ಯ ಚಂದ್ರಶೇಖರ್‌ ಪಾಟೀಲ್‌, ಯುವ ಕ್ರಾಂತಿ ಸಂಘಟನೆ ರಾಜ್ಯಧ್ಯಕ್ಷ ಗುಂಡು ರೆಡ್ಡಿ, ಆಪ್ ಪಕ್ಷದ ಮುಖಂಡ ಬ್ಯಾಂಕ್ ರೆಡ್ಡಿ ಬೆಂಬಲ ಸೂಚಿಸಿದರು. ಪ್ರತಿಭಟನೆಯಲ್ಲಿ ಹುಮನಾಬಾದ್, ಗಡವಂತಿ, ಮಾಣಿಕನಗರ, ಹುಡಗಿ ಸೇರಿದಂತೆ ಸುತ್ತಲಿನ ಹಲವಾರು ಹಳ್ಳಿಗಳ ಸಾವಿರಾರು ಗ್ರಾಮಸ್ಥರು ಭಾಗವಹಿಸಿದ್ದರು.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News