×
Ad

ಕಲಬುರಗಿಯಲ್ಲಿ ರೌಡಿ ಪರೇಡ್ : ರೌಡಿಶೀಟರ್‌ಗಳಿಗೆ ಪೊಲೀಸ್ ಆಯುಕ್ತರಿಂದ ಖಡಕ್ ಎಚ್ಚರಿಕೆ

Update: 2026-05-16 19:07 IST

ಕಲಬುರಗಿ: ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ನಗರದ ಸಿಎಆರ್ ಪರೇಡ್ ಮೈದಾನದಲ್ಲಿ ಡಾ. ಶರಣಪ್ಪ ಎಸ್.ಡಿ. ಅವರ ನೇತೃತ್ವದಲ್ಲಿ ರೌಡಿ ಪರೇಡ್ ನಡೆಸಲಾಯಿತು.

ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯ ರೌಡಿಶೀಟರ್‌ಗಳನ್ನು ಹಾಜರುಪಡಿಸಿ ಕಟ್ಟುನಿಟ್ಟಿನ ಎಚ್ಚರಿಕೆ ನೀಡಲಾಯಿತು.

ಪರೇಡ್ ಬಳಿಕ ಮಾತನಾಡಿದ ಪೊಲೀಸ್ ಆಯುಕ್ತರು, ಸಮಾಜದ ಶಾಂತಿ ಮತ್ತು ಸುವ್ಯವಸ್ಥೆ ಭಂಗಪಡಿಸುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು. ಅಪರಾಧ ಚಟುವಟಿಕೆಗಳಿಂದ ದೂರವಿದ್ದು ಸನ್ಮಾರ್ಗದಲ್ಲಿ ನಡೆಯುವಂತೆ ರೌಡಿಶೀಟರ್‌ಗಳಿಗೆ ಸೂಚನೆ ನೀಡಿದರು.

ಇತ್ತೀಚಿನ ದಿನಗಳಲ್ಲಿ ಕೆಲವು ರೌಡಿಶೀಟರ್‌ಗಳು ಮತ್ತೆ ಸಕ್ರಿಯರಾಗಿರುವ ಮಾಹಿತಿ ಹಿನ್ನೆಲೆಯಲ್ಲಿ ಬೆಳಗಿನ ಜಾವ 3ರಿಂದ 4 ಗಂಟೆಯವರೆಗೆ ಸರ್ಪ್ರೈಸ್ ಸರ್ಚ್ ಕಾರ್ಯಾಚರಣೆ ನಡೆಸಲಾಗಿದೆ ಎಂದು ತಿಳಿಸಿದರು.

ಸಿಎಆರ್ ಪರೇಡ್ ಮೈದಾನದಲ್ಲಿ ಒಟ್ಟು 327 ರೌಡಿಶೀಟರ್‌ಗಳನ್ನು ಹಾಜರುಪಡಿಸಿ ಎಚ್ಚರಿಕೆ ನೀಡಲಾಗಿದೆ. ಉತ್ತರ ಉಪವಲಯದಲ್ಲಿ 127, ದಕ್ಷಿಣ ಉಪವಿಭಾಗದಲ್ಲಿ 103 ಹಾಗೂ ಸಬ್ ಅರ್ಬನ್ ವಿಭಾಗದಲ್ಲಿ 97 ರೌಡಿಶೀಟರ್‌ಗಳ ಮನೆಗಳ ಮೇಲೆ ಪರಿಶೀಲನೆ ನಡೆಸಲಾಗಿದೆ ಎಂದು ಮಾಹಿತಿ ನೀಡಿದರು.

ಕಳೆದ ಎರಡು ವರ್ಷಗಳಲ್ಲಿ 31 ರೌಡಿಶೀಟರ್‌ಗಳನ್ನು ಗಡಿಪಾರು ಮಾಡಲಾಗಿದ್ದು, ನಾಲ್ವರನ್ನು ಗೂಂಡಾ ಕಾಯ್ದೆ ಅಡಿಯಲ್ಲಿ ಬಂಧಿಸಲಾಗಿದೆ. ಈಗಲೂ ಕೆಲವು ರೌಡಿಶೀಟರ್‌ಗಳನ್ನು ಗುರುತಿಸಲಾಗಿದ್ದು, ಮುಂದಿನ ಮೂರು ತಿಂಗಳಲ್ಲಿ ಮತ್ತಷ್ಟು ಗಡಿಪಾರು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಎಸಿಪಿ ಶಾಲೂ, ಡಿಸಿಪಿಗಳು ಸೇರಿದಂತೆ ನಗರ ಪೊಲೀಸ್ ಆಯುಕ್ತಾಲಯದ ವ್ಯಾಪ್ತಿಯ ಎಲ್ಲಾ ಪೊಲೀಸ್ ಠಾಣೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಜರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News