ಜೈವಿಕ ಇಂಧನ ಬಳಕೆಯಿಂದ ಪರಿಸರ ಮಾಲಿನ್ಯ ನಿಯಂತ್ರಣ ಸಾಧ್ಯ: ಸಾಗರ್ ತಾವಡೆ

Update: 2026-08-10 20:03 IST

ಕಲಬುರಗಿ: ಜೈವಿಕ ಇಂಧನದ ಬಳಕೆಗೆ ದೇಶದಲ್ಲಿ ಹೆಚ್ಚಿನ ಅವಕಾಶಗಳಿದ್ದು, ಪ್ರಸ್ತುತ ವಾಹನಗಳ ಇಂಧನ ಕ್ಷೇತ್ರದಲ್ಲಿಯೂ ಇದರ ವಾಣಿಜ್ಯ ಬಳಕೆ ಹೆಚ್ಚಾಗುತ್ತಿದೆ. ಪೆಟ್ರೋಲಿಯಂ ಉತ್ಪನ್ನಗಳ ಜೊತೆಗೆ ಜೈವಿಕ ಇಂಧನ ಬಳಕೆಗೆ ಕರ್ನಾಟಕದಲ್ಲಿ ಹೆಚ್ಚಿನ ಪ್ರೋತ್ಸಾಹ ನೀಡಲಾಗುತ್ತಿದ್ದು, ಇದರಿಂದ ವಾಯು ಮಾಲಿನ್ಯ ಕಡಿಮೆ ಮಾಡುವುದರೊಂದಿಗೆ ಪರಿಸರ ಸ್ನೇಹಿ ಸಾರಿಗೆ ವ್ಯವಸ್ಥೆ ಬೆಳೆಸಲು ಸಾಧ್ಯವಾಗಲಿದೆ ಎಂದು ಜಿಲ್ಲಾ ಜೈವಿಕ ಇಂಧನ ಉಸ್ತುವಾರಿ ಸಮಿತಿ ಸಮಾವೇಶಕ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ ಸಾಗರ್ ಎಸ್. ತಾವಡೆ ಹೇಳಿದರು.

ನಗರದ ಆಳಂದ ರಸ್ತೆಯ ಕೃಷಿ ಮಹಾವಿದ್ಯಾಲಯದಲ್ಲಿ ಸೋಮವಾರ ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ, ಜಿಲ್ಲಾ ಪಂಚಾಯತ್, ಕಲಬುರಗಿ, ಸಾಮಾಜಿಕ ಅರಣ್ಯ ವಿಭಾಗ, ಕೃಷಿ ಮಹಾವಿದ್ಯಾಲಯ ಹಾಗೂ ಸಹಾರಾ ಸೇವಾ ಸಂಸ್ಥೆ ಸಹಯೋಗದಲ್ಲಿ ಆಯೋಜಿಸಿದ್ದ ಅಂತರರಾಷ್ಟ್ರೀಯ ಜೈವಿಕ ಇಂಧನ ದಿನಾಚರಣೆ–2026 ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಜೈವಿಕ ಇಂಧನದ ಬಳಕೆಯಿಂದ ಪೆಟ್ರೋಲಿಯಂ ಆಧಾರಿತ ಇಂಧನದ ಮೇಲಿನ ಅವಲಂಬನೆ ಕಡಿಮೆ ಮಾಡುವುದರ ಜೊತೆಗೆ ಪರಿಸರ ಸಂರಕ್ಷಣೆಗೆ ಹೆಚ್ಚಿನ ಕೊಡುಗೆ ನೀಡಬಹುದು. ಜೈವಿಕ ಇಂಧನ ಕ್ಷೇತ್ರವನ್ನು ಮತ್ತಷ್ಟು ಅಭಿವೃದ್ಧಿಪಡಿಸುವ ಅಗತ್ಯವಿದೆ ಎಂದು ಅವರು ಹೇಳಿದರು.

ನಿವೃತ್ತ ಭೌತಶಾಸ್ತ್ರ ಪ್ರಾಧ್ಯಾಪಕ ಡಾ. ಎಂ.ಎಸ್. ಜೋಗದ ಮಾತನಾಡಿ, ಜೈವಿಕ ಇಂಧನ ಕ್ಷೇತ್ರದಲ್ಲಿ ಕೃಷಿ, ಅರಣ್ಯ, ತಂತ್ರಜ್ಞಾನ ಸೇರಿದಂತೆ ವಿವಿಧ ಕ್ಷೇತ್ರಗಳ ವಿದ್ಯಾರ್ಥಿಗಳು ಹಾಗೂ ಸಂಶೋಧಕರಿಗೆ ವಿಪುಲ ಅವಕಾಶಗಳಿವೆ. ಉತ್ತಮ ಪರಿಸರ ಹಾಗೂ ಪರ್ಯಾಯ ಇಂಧನದ ದೃಷ್ಟಿಯಿಂದ ಸಕ್ಕರೆ ಕಾರ್ಖಾನೆಗಳು ಕಬ್ಬು ಮತ್ತು ಮೆಕ್ಕೆಜೋಳದಿಂದ ಇಥೇನಾಲ್ ಉತ್ಪಾದನೆಗೆ ಮುಂದಾಗಿವೆ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕೃಷಿ ಮಹಾವಿದ್ಯಾಲಯದ ಡೀನ್ ಡಾ. ಬಿ.ಎಂ. ದೊಡಮನಿ ಮಾತನಾಡಿ, ಕೃಷಿ ವಿಶ್ವವಿದ್ಯಾಲಯ, ರಾಯಚೂರು ವ್ಯಾಪ್ತಿಯ ತಿಂಥಣಿಯಲ್ಲಿರುವ ಜೈವಿಕ ಇಂಧನ ಉದ್ಯಾನವನದಲ್ಲಿ ಸಂಶೋಧನೆಗೆ ಉತ್ತಮ ಅವಕಾಶಗಳಿವೆ. ಭವಿಷ್ಯದ ಇಂಧನ ಅಗತ್ಯತೆಗಳನ್ನು ಗಮನದಲ್ಲಿಟ್ಟುಕೊಂಡು ಜೈವಿಕ ಇಂಧನ ಕ್ಷೇತ್ರದಲ್ಲಿ ಹೆಚ್ಚಿನ ಸಂಶೋಧನೆ ನಡೆಯಬೇಕಿದೆ ಎಂದು ಹೇಳಿದರು.

ಕಾರ್ಯಕ್ರಮದ ಅಂಗವಾಗಿ ಜೈವಿಕ ಇಂಧನಕ್ಕೆ ಸಂಬಂಧಿಸಿದ ಸಸ್ಯಗಳಾದ ಹೊಂಗೆ ಹಾಗೂ ಬೇವಿನ ಸಸಿಗಳನ್ನು ನೆಡಲಾಯಿತು.

ಕಾರ್ಯಕ್ರಮದಲ್ಲಿ ಸಾಮಾಜಿಕ ಅರಣ್ಯ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮಂಜುಳಾ ಎಸ್. ನಿಲಜಗಿ, ವಲಯ ಅರಣ್ಯಾಧಿಕಾರಿ ಸಂಜೀವ ಪವಾರ, ಉಪ ವಲಯ ಅರಣ್ಯಾಧಿಕಾರಿ ಸಂತೋಷಕುಮಾರ ನಿಪ್ಪಾಣಿ, ತುಕ್ಕಪ್ಪ ಕಾಳೆ ಹಾಗೂ ಸಹಾರಾ ಸೇವಾ ಸಂಸ್ಥೆಯ ನಿರ್ದೇಶಕ ಮಸ್ತಾನ ಬಿರಾದಾರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಕೃಷಿ ಮಹಾವಿದ್ಯಾಲಯದ ತೃತೀಯ ವರ್ಷದ ವಿದ್ಯಾರ್ಥಿನಿಯರಾದ ನವ್ಯಾ ಹಾಗೂ ಪ್ರಗತಿ ಪ್ರಾರ್ಥನಾ ಗೀತೆ ಹಾಡಿದರು. ಸಹಾಯಕ ಪ್ರಾಧ್ಯಾಪಕ ಡಾ. ಗುರುರಾಜ ಪಾಟೀಲ ಕಾರ್ಯಕ್ರಮ ನಿರೂಪಿಸಿದರು. ಸಹಾಯಕ ಪ್ರಾಧ್ಯಾಪಕ ಡಾ. ಗಜೇಂದ್ರ ಸಿ.ವಿ. ಸ್ವಾಗತಿಸಿದರು. ಉಪ ವಲಯ ಅರಣ್ಯಾಧಿಕಾರಿ ಸಂತೋಷಕುಮಾರ ನಿಪ್ಪಾಣಿ ವಂದಿಸಿದರು.

ಡಾ. ಎಸ್.ಬಿ. ಬೆಲ್ಲದ್, ಡಾ. ಬಿ.ಎಸ್. ರೆಡ್ಡಿ, ಡಾ. ಜಹೀರ ಅಹ್ಮದ್, ಡಾ. ಹಸನ್ ಖಾನ್, ಡಾ. ರಾಚಪ್ಪ ವಿ., ಡಾ. ಸಿದ್ಧರಾಮ ವಾಡೇದ್, ಡಾ. ಸ್ಟೀಫನ್‌ರಾಜ್ ಸೇರಿದಂತೆ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಮತ್ತು ಬಿ.ಎಸ್ಸಿ. ಕೃಷಿ ವಿಭಾಗದ ತೃತೀಯ ಹಾಗೂ ಅಂತಿಮ ವರ್ಷದ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News