×
Ad

Sedam | ಆಂಗ್ಲ ಮಾಧ್ಯಮ ಪ್ರೌಢಶಾಲೆ ಆರಂಭಕ್ಕೆ ಕ್ರಮ : ಸಚಿವ ಡಾ.ಶರಣಪ್ರಕಾಶ ಪಾಟೀಲ್

ವಿದ್ಯಾನಗರ ನಂ.2 ಸರ್ಕಾರಿ ಶಾಲೆಗೆ 5 ನೂತನ ಕೊಠಡಿಗಳ ಉದ್ಘಾಟನೆ

Update: 2026-07-15 22:34 IST

ಸೇಡಂ : ಜಿಲ್ಲಾ ಪಂಚಾಯತ್ ಹಾಗೂ ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯ ಡಿಡಿಪಿಐ ಯೋಜನೆಯಡಿ ಪಟ್ಟಣದ ವಿದ್ಯಾನಗರ ನಂ.2 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಿರ್ಮಿಸಿರುವ ಐದು ನೂತನ ಕೊಠಡಿಗಳನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಉದ್ಘಾಟಿಸಿದರು. ಇದೇ ವೇಳೆ ಐದು ಶೌಚಾಲಯಗಳ ನಿರ್ಮಾಣ ಕಾಮಗಾರಿಗೂ ಅಡಿಗಲ್ಲು ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಆಂಗ್ಲ ಮಾಧ್ಯಮ ಶಿಕ್ಷಣಕ್ಕೆ ಹೆಚ್ಚುತ್ತಿರುವ ಬೇಡಿಕೆಯನ್ನು ಗಮನಿಸಿ ವಿದ್ಯಾನಗರ ನಂ.2 ಶಾಲೆಯನ್ನು ಆಂಗ್ಲ ಮಾಧ್ಯಮ ಪ್ರೌಢಶಾಲೆಯಾಗಿ ಮೇಲ್ದರ್ಜೆಗೇರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಶಿಕ್ಷಣ ಕ್ಷೇತ್ರಕ್ಕೆ ರಾಜ್ಯ ಸರ್ಕಾರ ಹೆಚ್ಚಿನ ಆದ್ಯತೆ ನೀಡಿದ್ದು, ಕೆಕೆಆರ್‌ಡಿಬಿ ಅನುದಾನದ ಶೇ.25ರಷ್ಟನ್ನು ಶಿಕ್ಷಣ ಅಭಿವೃದ್ಧಿಗೆ ಮೀಸಲಿರಿಸಲಾಗಿದೆ. ಸೇಡಂ ತಾಲೂಕಿನಲ್ಲಿ ಶೇ.100 ಫಲಿತಾಂಶ ಸಾಧಿಸುವ ಗುರಿಯೊಂದಿಗೆ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ 15 ಸಾವಿರ ಶಿಕ್ಷಕರ ನೇಮಕಾತಿ ನಡೆಯುತ್ತಿದ್ದು, ಅದರಲ್ಲಿ 9 ಸಾವಿರ ಹುದ್ದೆಗಳು ಕಲ್ಯಾಣ ಕರ್ನಾಟಕ ಭಾಗಕ್ಕೆ ಮೀಸಲಾಗಿವೆ. ಸೇಡಂ ತಾಲೂಕಿನಲ್ಲಿ ಈಗಾಗಲೇ 9 ಕರ್ನಾಟಕ ಪಬ್ಲಿಕ್ ಶಾಲೆಗಳು ಆರಂಭಗೊಂಡಿದ್ದು, ಪ್ರತಿ ಶಾಲೆಗೆ ₹2 ಕೋಟಿ ಅನುದಾನ ನೀಡಲಾಗಿದೆ. ಜೊತೆಗೆ ಮೂರು ಜೂನಿಯರ್ ಕಾಲೇಜು ಆರಂಭಿಸಲು ಸಿದ್ಧತೆ ನಡೆದಿದೆ ಎಂದು ಮಾಹಿತಿ ನೀಡಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಮಾರುತಿ ಹುಜರಾತಿ ಮಾತನಾಡಿ, ವಿದ್ಯಾನಗರ ನಂ.2 ಶಾಲೆಯನ್ನು ಆಂಗ್ಲ ಮಾಧ್ಯಮ ಪ್ರೌಢಶಾಲೆಯಾಗಿ ಮೇಲ್ದರ್ಜೆಗೇರಿಸಲು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗುವುದು. ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿ, ಹಿಂದುಳಿದ ವಿದ್ಯಾರ್ಥಿಗಳಿಗೆ ವಿಶೇಷ ತರಗತಿಗಳನ್ನು ನಡೆಸಲಾಗುವುದು ಎಂದು ಹೇಳಿದರು.

ಕುಡಿಯುವ ನೀರಿಗೆ ಮುನ್ನೆಚ್ಚರಿಕೆ ಕ್ರಮಕ್ಕೆ ಸೂಚನೆ

ಸೇಡಂ ಕ್ಷೇತ್ರದಲ್ಲಿ ಮಳೆ ಕೊರತೆಯಿಂದ ಬರ ಪರಿಸ್ಥಿತಿ ಎದುರಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಪಟ್ಟಣ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ಸಚಿವ ಡಾ. ಶರಣಪ್ರಕಾಶ ಪಾಟೀಲ್ ತಿಳಿಸಿದರು.

ಕಾರ್ಯಕ್ರಮದಲ್ಲಿ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ವಿಶ್ವನಾಥ ಪಾಟೀಲ್ ಬೊಮ್ಮನಳ್ಳಿ, ಕಾಂಗ್ರೆಸ್ ಮುಖಂಡ ಸತೀಶರೆಡ್ಡಿ ಪಾಟೀಲ್, ಸೇಡಂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವಶರಣರೆಡ್ಡಿ ಪಾಟೀಲ್, ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಲಲಿತಾ ಯಾಕಪೂರ್, ಬಸ್ಸಮ್ಮ ಪಾಟೀಲ್, ಜಗನ್ನಾಥ್ ಚಿಂತಪಳ್ಳಿ, ಹಾಜಿ ನಾಡೆಪಲ್ಲಿ, ಜಿಂಜಾನಿಜನ ಜಾಗೀರದಾರ್, ಪಂಚಾಯತ್ ರಾಜ್ ಇಲಾಖೆಯ ಎಇಇ ವಿಶ್ವನಾಥ ಎಂ., ಸಿಆರ್‌ಪಿ ರಾಜಶೇಖರ, ಶಾಲೆಯ ಮುಖ್ಯಶಿಕ್ಷಕಿ ಚಂದುಬಾಯಿ ಕುಲಕರ್ಣಿ, ಎಸ್‌ಡಿಎಂಸಿ ಅಧ್ಯಕ್ಷ ಭೀಮರಾಯ ದೊಡ್ಡಮನಿ, ಸದಸ್ಯರಾದ ಚಂದ್ರಯ್ಯ ಹಿರೇಮಠ, ಬಸವರಾಜ ಸಾಗರ್, ರಾಜು ಚವ್ಹಾಣ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News