×
Ad

ವಿದ್ಯಾರ್ಥಿಗಳು ಆರೋಗ್ಯಕರ ಜೀವನಶೈಲಿ ಅಳವಡಿಸಿಕೊಳ್ಳಲಿ: ಡಾ. ಸಿ.ಆರ್. ಚಂದ್ರಶೇಖರ್

Update: 2026-05-07 19:32 IST

ಕಲಬುರಗಿ: ವಿದ್ಯಾರ್ಥಿಗಳು ತಮ್ಮ ಜೀವನದ ಬೆಳವಣಿಗೆಯ ಹಂತದಲ್ಲಿ ಮಾದಕ ದ್ರವ್ಯಗಳು ಹಾಗೂ ಇತರ ದುಶ್ಚಟಗಳ ಆಮಿಷಕ್ಕೆ ಒಳಗಾಗದೆ, ಒತ್ತಡರಹಿತ ಹಾಗೂ ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು ಎಂದು ಖ್ಯಾತ ಮನೋವೈದ್ಯ ಹಾಗೂ ಪದ್ಮಶ್ರೀ ಪುರಸ್ಕೃತ ಡಾ. ಸಿ. ಆರ್. ಚಂದ್ರಶೇಖರ್ ಅವರು ಕರೆ ನೀಡಿದರು.

ನಗರದ ಶರಣಬಸವ ವಿಶ್ವವಿದ್ಯಾಲಯದಲ್ಲಿ ಗುರುವಾರ ವಿದ್ಯಾರ್ಥಿ ಸಲಹಾ ಸಮಿತಿ ಹಾಗೂ ರ‍್ಯಾಗಿಂಗ್ ವಿರೋಧಿ ಸಮಿತಿ ಸಂಯುಕ್ತವಾಗಿ ಆಯೋಜಿಸಿದ್ದ “ಮಾನಸಿಕ ಆರೋಗ್ಯ, ಯೋಗಕ್ಷೇಮ ಮತ್ತು ರ‍್ಯಾಗಿಂಗ್ ಮುಕ್ತ ಕ್ಯಾಂಪಸ್” ಕಾರ್ಯಕ್ರಮದಲ್ಲಿ ಅವರು ಮುಖ್ಯ ಅತಿಥಿಯಾಗಿ ಮಾತನಾಡಿದರು.

ಭಾರತವು ವಿಶ್ವದ ಅತಿದೊಡ್ಡ ಯುವಜನಸಂಖ್ಯೆ ಹೊಂದಿರುವ ರಾಷ್ಟ್ರವಾಗಿದ್ದು, ದೇಶದ ಒಟ್ಟು 142 ಕೋಟಿ ಜನಸಂಖ್ಯೆಯಲ್ಲಿ ಸುಮಾರು 45 ಕೋಟಿ ಯುವಕರಿದ್ದಾರೆ. ಈ ಅಪಾರ ಮಾನವ ಸಂಪನ್ಮೂಲವನ್ನು ದೇಶದ ಅಭಿವೃದ್ಧಿಗೆ ಸಮರ್ಪಕವಾಗಿ ಬಳಸಿಕೊಳ್ಳುವ ಅಗತ್ಯವಿದೆ ಎಂದು ಅವರು ಹೇಳಿದರು. ಜಾಗತಿಕ ಮಟ್ಟದಲ್ಲಿ ಕೈಗಾರಿಕೆಗಳಿಗೆ ಅಗತ್ಯವಿರುವ ಮಾನವ ಸಂಪನ್ಮೂಲವನ್ನು ಪೂರೈಸುವ ಸಾಮರ್ಥ್ಯ ಭಾರತಕ್ಕಿದ್ದು, ಇಡೀ ಜಗತ್ತು ಭಾರತದತ್ತ ನಿರೀಕ್ಷೆಯಿಂದ ನೋಡುತ್ತಿದೆ ಎಂದರು.

ಯುವಕರು ತಮ್ಮ ಜೀವನದಲ್ಲಿ ಸ್ಪಷ್ಟ ಗುರಿಯನ್ನು ನಿಗದಿಪಡಿಸಿಕೊಂಡು, ಅದನ್ನು ಸಾಧಿಸಲು ಶ್ರಮಿಸಬೇಕು. ಇತ್ತೀಚಿನ ದಿನಗಳಲ್ಲಿ ಸುಲಭವಾಗಿ ಹಣ ಸಂಪಾದಿಸುವ ಉದ್ದೇಶದಿಂದ ಕೆಲವು ಯುವಕರು ಸೈಬರ್ ಅಪರಾಧಗಳಂತಹ ಚಟುವಟಿಕೆಗಳಲ್ಲಿ ತೊಡಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಅವರು ವಿಷಾದ ವ್ಯಕ್ತಪಡಿಸಿದರು.

ಮಾದಕ ದ್ರವ್ಯ ವ್ಯಸನ ಹಾಗೂ ಇತರ ಹಾನಿಕಾರಕ ಚಟುವಟಿಕೆಗಳಿಂದ ವಿದ್ಯಾರ್ಥಿಗಳನ್ನು ದೂರವಿಡುವಲ್ಲಿ ಪೋಷಕರು ಮತ್ತು ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ದಾರಿ ತಪ್ಪುತ್ತಿರುವ ವಿದ್ಯಾರ್ಥಿಗಳಿಗೆ ಸಮಯೋಚಿತ ಸಮಾಲೋಚನೆ ನೀಡಿ, ಅವರನ್ನು ಮತ್ತೆ ಸರಿಯಾದ ಹಾದಿಗೆ ತರುವ ಜವಾಬ್ದಾರಿ ಸಮಾಜದ ಮೇಲಿದೆ ಎಂದು ಹೇಳಿದರು.

ದೇಶದಲ್ಲಿ ಪದವೀಧರರ ನಿರುದ್ಯೋಗ ಸಮಸ್ಯೆ ಹೆಚ್ಚುತ್ತಿರುವುದರ ಬಗ್ಗೆ ಕಳವಳ ವ್ಯಕ್ತಪಡಿಸಿದ ಅವರು, “ದೇಶದಲ್ಲಿ ಶೇ.30ರಷ್ಟು ಯುವಕರು ಪದವೀಧರರಾಗಿರುವುದು ಹೆಮ್ಮೆಯ ಸಂಗತಿ. ಆದರೆ ಇವರಲ್ಲಿ ಶೇ.40ರಷ್ಟು ಮಂದಿ, ವಿಶೇಷವಾಗಿ ಇಂಜಿನಿಯರಿಂಗ್ ಪದವೀಧರರು ನಿರುದ್ಯೋಗಿಗಳಾಗಿರುವುದು ಗಂಭೀರ ಸಮಸ್ಯೆಯಾಗಿದೆ” ಎಂದು ಹೇಳಿದರು. ಅನೇಕ ಪದವೀಧರರು ತಮ್ಮ ಅರ್ಹತೆಗೆ ತಕ್ಕ ಉದ್ಯೋಗಗಳ ಬದಲಾಗಿ ಬೇರೆ ಕ್ಷೇತ್ರಗಳಲ್ಲಿ ಕೆಲಸ ಮಾಡುತ್ತಿರುವುದು ಶಿಕ್ಷಣ ಮತ್ತು ಉದ್ಯೋಗದ ನಡುವಿನ ಅಸಮತೋಲನವನ್ನು ತೋರಿಸುತ್ತದೆ ಎಂದು ಅಭಿಪ್ರಾಯಪಟ್ಟರು.

ವಿದ್ಯಾರ್ಥಿಗಳಿಗೆ ಮೊಬೈಲ್ ಬಳಕೆಯನ್ನು ಮಿತಿಗೊಳಿಸುವಂತೆ ಸಲಹೆ ನೀಡಿದ ಅವರು, ಇಂದಿನ ದಿನಗಳಲ್ಲಿ ಹೆಚ್ಚಿನ ಯುವಕರು ಮೊಬೈಲ್ ವ್ಯಸನಕ್ಕೆ ಒಳಗಾಗುತ್ತಿದ್ದಾರೆ. ಮೊಬೈಲ್ ಪರದೆ ಮುಂದೆ ಹೆಚ್ಚು ಸಮಯ ಕಳೆಯುವುದು ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂದು ಎಚ್ಚರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಶ್ವವಿದ್ಯಾಲಯದ ನಿರ್ದೇಶಕ ಪ್ರೊ. ವಿ. ಡಿ. ಮೈತ್ರಿ ವಹಿಸಿದ್ದರು. ವಿದ್ಯಾರ್ಥಿ ಸಮಾಲೋಚನಾ ಸಮಿತಿಯ ಅಧ್ಯಕ್ಷ ಡಾ. ಶರಣ ಶೇಗೇದಾರ ಸ್ವಾಗತಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News