ಸಾಮಾಜಿಕ ನ್ಯಾಯದ ಮೌಲ್ಯಗಳನ್ನು ಎತ್ತಿ ಹಿಡಿಯುವುದು ನಮ್ಮ ಜವಾಬ್ದಾರಿ: ಗೃಹ ಸಚಿವ ಪರಮೇಶ್ವರ್

Update: 2023-08-15 12:22 GMT

ತುಮಕೂರು.ಆ.15:ನಮ್ಮ ಸಂವಿಧಾನದ ಮೂಲಾಧಾರವಾಗಿರುವ ಪ್ರಜಾಪ್ರಭುತ್ವ, ಜಾತ್ಯತೀತತೆ ಮತ್ತು ಸಾಮಾಜಿಕ ನ್ಯಾಯದ ಮೌಲ್ಯಗಳನ್ನು ಎತ್ತಿಹಿಡಿಯುವುದು ನಮ್ಮ ಜವಾಬ್ದಾರಿಯಾಗಿದೆ ಎಂದು ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ: ಜಿ. ಪರಮೇಶ್ವರ್ ತಿಳಿಸಿದ್ದಾರೆ.

ನಗರದ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ನಡೆದ 77ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡು, ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ್ಯೋತ್ಸವದ ಸಂದೇಶ ನೀಡುತ್ತಾ ಮಾತನಾಡಿದ ಸಚಿವರು,ದೇಶದ ರಕ್ಷಣೆಗೆ ಹಗಲಿರುಳು ದುಡಿಯುತ್ತಿರುವ ಸೈನಿಕರ ಸೇವೆಯನ್ನು ಸ್ಮರಿಸುತ್ತಾ, ಶಾಂತಿ-ಸಹನೆ, ಸಹಿಷ್ಣುತೆಯ ಮಹತ್ವವನ್ನು ಎಲ್ಲರಿಗೂ ಮನವರಿಕೆ ಮಾಡಿಕೊಡಬೇಕಾಗಿದೆ ಎಂದರು.

ಬ್ರಿಟಿಷರಿಂದ ಸ್ವಾತಂತ್ರ್ಯಗೊಂಡ ನಂತರ ಭಾರತ ದೇಶವು ಹಲವು ಮೈಲಿಗಲ್ಲುಗಳನ್ನು ಕಂಡಿದೆ. ಆರ್ಥಿಕತೆ, ರಾಜಕೀಯ, ತಂತ್ರಜ್ಞಾನ, ವಿಜ್ಞಾನ, ಮೂಲಸೌಕರ್ಯಗಳು ಹೀಗೆ ಎಲ್ಲಾ ಕ್ಷೇತ್ರಗಳಲ್ಲೂ ಸಹ ಅನೇಕ ಸಾಧನೆಗಳಿಗೆ ಸಾಕ್ಷಿಯಾಗಿದೆ. ಈ ಸಾಧನೆ, ಅಭಿವೃದ್ಧಿಗಳ ಸಂಖ್ಯೆ ಸ್ವಾತಂತ್ರ್ಯ ಭಾರತದಲ್ಲಿ ಹೆಚ್ಚುತ್ತಲೇ ಇರುತ್ತದೆ ಹೊರತು,ಎಂದಿಗೂ ಇದಕ್ಕೆ ಅಂತ್ಯ ಎನ್ನುವುದಿಲ್ಲ. ಎಲ್ಲಿ ಪ್ರಜೆಗಳಿಗೆ ಸ್ವಾತಂತ್ರ್ಯ ಇರುತ್ತದೋ, ಯಾವ ದೇಶದ ಪ್ರಜೆಗಳಿಗೆ ಸ್ವಾತಂತ್ರ್ಯ ಇರುತ್ತದೋ, ಎಲ್ಲಿಯವರೆಗೆ ಪ್ರಜೆಗಳು ಸ್ವಾತಂತ್ರ್ಯರಾಗಿರುತ್ತಾರೋ ಅಲ್ಲಿಯವರೆಗೆ ದೇಶದ ಅಭಿವೃದ್ಧಿ, ಪ್ರಜೆಗಳ ಅಭಿವೃದ್ಧಿ, ನಾಡಿನ ಅಭಿವೃದ್ಧಿ, ಒಂದು ಕುಟುಂಬದ ಅಭಿವೃದ್ಧಿ ನಿರಂತರವಾಗಿ ಸಾಗುತ್ತಿರುತ್ತದೆ. ಅದಕ್ಕೆ ಕೊನೆ ಎಂಬುದು ಇಲ್ಲ. ಅದಕ್ಕೆ ಇಂದಿನ ಭಾರತವೇ ಸಾಕ್ಷಿ ಎಂದು ತಿಳಿಸಿದರು.

‘ಗೃಹಲಕ್ಷ್ಮಿ’ ಯೋಜನೆಯು ಕರ್ನಾಟಕ ಸರಕಾರದ ಮಹತ್ವಕಾಂಕ್ಷಿ ಯೋಜನೆಯಾಗಿದ್ದು, ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ರೂ.2000 ಗಳನ್ನು ನೇರ ನಗದು ವರ್ಗಾವಣೆ ಮೂಲಕ ನೀಡಲಾಗುವುದು.ಜಿಲ್ಲೆಯಲ್ಲಿ ಈಗಾಗಲೇ 5.50 ಲಕ್ಷ ಫಲಾನುಭವಿಗಳು ಗೃಹಲಕ್ಷ್ಮಿ ಯೋಜನೆಯಡಿ ನೋಂದಾಯಿಸಿಕೊಂಡಿದ್ದಾರೆ.ಕಡು ಬಡ ಕುಟುಂಬಗಳು ಹಸಿವಿನಿಂದ ಬಳಲಬಾರದು ಎಂಬ ಸದುದ್ದೇಶದಿಂದ ‘ಅನ್ನಭಾಗ್ಯ’ ಯೋಜನೆಯನ್ನು ಜಾರಿಗೆ ತರಲಾಗಿದ್ದು, ಬಿಪಿಎಲ್ ಪಡಿತರ ಚೀಟಿದಾರರಿಗೆ ಪ್ರತಿ ಫಲಾನುಭವಿಗೆ 10 ಕೆ.ಜಿ. ಅಕ್ಕಿ ಪೈಕಿ 5 ಕೆ.ಜಿ. ಆಹಾರ ಧಾನ್ಯವನ್ನು ಉಚಿತವಾಗಿ ಪ್ರತಿ ಮಾಹೆ ವಿತರಿಸಲಾಗುತ್ತಿದೆ. ಜಿಲ್ಲೆಯಲ್ಲಿ ಒಟ್ಟು ಪ್ರತಿ ಮಾಹೆ 10,789 ಮೆಟ್ರಿಕ್ ಟನ್ (ಅಕ್ಕಿ) ಆಹಾರಧಾನ್ಯಗಳನ್ನು ವಿತರಿಸಲಾಗುತ್ತಿದೆ. ಇನ್ನುಳಿದ 5 ಕೆ.ಜಿ. ಅಕ್ಕಿಯ ಬದಲಿಗೆ ಪ್ರತಿ ಫಲಾನುಭವಿಗೆ ಮಾಹೆಯಾನ 170 ರೂ.ಹಣವನ್ನು ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ನೇರ ನಗದು ಮುಖಾಂತರ ವರ್ಗಾವಣೆ ಮಾಡಲಾಗಿದೆ. ಜುಲೈ 2023ನೇ ಮಾಹೆಯಲ್ಲಿ ಜಿಲ್ಲೆಯ 5,29,515 ಅರ್ಹ ಪಡಿತರ ಚೀಟಿದಾರರಿಗೆ 30,43,28,220 ರೂ.ಗಳನ್ನು ಜಮೆ ಮಾಡಲಾಗಿದೆ ಎಂದು ತಿಳಿಸಿದರು.

ಜಿಲ್ಲೆಯಾದ್ಯಂತ 384 ಗ್ರಾಮಒನ್ ಕೇಂದ್ರಗಳಿದ್ದು,ಸಾರ್ವಜನಿಕರು 1565467 ಸಂಖ್ಯೆಯ ಸೇವೆಯನ್ನು ಅವರ ಗ್ರಾಮದಲ್ಲಿ ಪಡೆದಿರುತ್ತಾರೆ. ತುಮಕೂರು ಜಿಲ್ಲೆಯಲ್ಲಿ ವೃದ್ಧಾಪ್ಯ ವೇತನದಡಿ 1,01,707, ಸಂಧ್ಯಾ ಸುರಕ್ಷಾ ಯೋಜನೆಯಡಿ 2,65,724, ವಿಧವಾ ವೇತನದಡಿ 1,05,273, ವಿಕಲಚೇತರ ಮಾಶಾಸನ ಯೋಜನೆಯಡಿ 57,422, ಮೈತ್ರಿ ಯೋಜನೆಯಡಿ 99, ಮನಸ್ವಿನಿ ಯೋಜನೆಯಡಿ 12,575, ಆಸಿಡ್ ದಾಳಿಗೆ ತುತ್ತಾದವರು 06, ರೈತ ವಿಧವಾ ವೇತನ 252 ಜನ ಫಲಾನುಭವಿಗಳನ್ನು ಸೇರಿ ಒಟ್ಟು 5,44,270 ಫಲಾನುಭವಿಗಳಿದ್ದು, ಮಾಹೆಯಾನ ಒಟ್ಟು ರೂ.46.75 ಕೋಟಿ ಮಾಶಾಸನವನ್ನು ವಿತರಿಸಲಾಗುತ್ತಿದೆ ಎಂದು ತಿಳಿಸಿದರು.

ತುಮಕೂರು ಜಿಲ್ಲೆಯಲ್ಲಿ ದಾಖಲೆ ರಹಿತ ಜನವಸತಿ ಪ್ರದೇಶಗಳನ್ನು ಕಂದಾಯ ಗ್ರಾಮಗಳಾಗಿಸಲು 542 ಪ್ರದೇಶಗಳನ್ನು ಗುರುತಿಸಲಾಗಿದ್ದು, ಹೊಸ ಗ್ರಾಮಗಳಾಗಿ 253 ಪ್ರದೇಶಗಳಿಗೆ ಅಂತಿಮ ಅಧಿಸೂಚನೆ ಹೊರಡಿಸಲಾಗಿರುತ್ತದೆ ಹಾಗೂ 5870 ಹಕ್ಕುಪತ್ರಗಳನ್ನು ವಿತರಿಸಲಾಗಿದೆ.ಗುರುತಿಸಿರುವ 542 ಪ್ರದೇಶಗಳಲ್ಲಿ 95 ಗೊಲ್ಲರಹಟ್ಟಿಗಳನ್ನು 27 ಲಂಬಾಣಿ ತಾಂಡಗಳನ್ನು ಹೊಸ ಗ್ರಾಮರಚನೆ ಮಾಡಲು ಉದ್ದೇಶಿಸಿ ಕ್ರಮವಹಿಸಿದ್ದು,ಈಗಾಗಲೇ ಗೊಲ್ಲರಹಟ್ಟಿಗಳಲ್ಲಿ 48 ಗ್ರಾಮಗಳನ್ನು ಹೊಸ ಗ್ರಾಮಗಳಾಗಿ ಪರಿವರ್ತಿಸಿ ಅಂತಿಮ ಅಧಿಸೂಚನೆ ಹೊರಡಿಸಿದೆ.ಜಿಲ್ಲೆಯಲ್ಲಿ ಒಟ್ಟು 542 ಗ್ರಾಮಗಳ ಪೈಕಿ 268 ಗ್ರಾಮಗಳಿಗೆ 2ಇ ಅಧಿಸೂಚನೆ ಹಾಗೂ 453 ಗ್ರಾಮಗಳಿಗೆ ಪ್ರಾಥಮಿಕ ಅಧಿಸೂಚನೆ ಹೊರಡಿಸಲಾಗಿದೆ ಎಂದು ತಿಳಿಸಿದರು.

ಜಿಲ್ಲೆಯ ಕೈಗಾರಿಕಾ ಬೆಳವಣಿಗೆ ಹಾಗೂ ಬೇಡಿಕೆಗಳ ಪೂರೈಕೆಗನುಗುಣವಾಗಿ ಹಾಲಿ ಅಭಿವೃದ್ಧಿಯಾಗಿರುವ ವಸಂತನರಸಾಪುರ ಕೈಗಾರಿಕಾ ಪ್ರದೇಶಕ್ಕೆ ಹೊಂದಿಕೊಂಡಂತೆ,ವಸಂತನರಸಾಪುರ 4ನೇ ಹಂತದ ಕೈಗಾರಿಕಾ ಪ್ರದೇಶ ರಚನೆಗೆ ತೀರ್ಮಾನಿಸಲಾಗಿದೆ.ಈ ಕೈಗಾರಿಕಾ ಪ್ರದೇಶವನ್ನು ವಿಭಿನ್ನವಾಗಿ ಹಾಗೂ ಕೈಗಾರಿಕಾ ಸ್ನೇಹಿ ಕೈಗಾರಿಕಾ ಪ್ರದೇಶ ವಾಗಿ ಅಭಿವೃದ್ಧಿಪಡಿಸುವ ದೂರದೃಷ್ಟಿಯಿಂದ “ತುಮಕೂರು ಇಂಡಸ್ಟ್ರೀಯಲ್ ಟೌನ್‍ಶಿಪ್ ಲಿಮಿಟೆಡ್” ಹೆಸರಿನಲ್ಲಿ ಅಭಿವೃದ್ಧಿಪಡಿಸಲು ಯೋಜಿಸಲಾಗಿದೆ.ಅಂತೆಯೇ 16ನೇ ಸೆಪ್ಟೆಂಬರ್-2023 ರಂದು ಜಿಲ್ಲಾ ಮಟ್ಟದ ಪ್ರತಿಷ್ಠಿತ ಕೈಗಾರಿಕೆಗಳ, ಕೈಗಾರಿಕಾ ಮಾಲೀಕರ ಸಮಾವೇಶವನ್ನು ಹಮ್ಮಿಕೊಳ್ಳಲು ಯೋಜಿಸಲಾಗಿದೆ.ಈ ಸಮಾವೇಶದಲ್ಲಿ ರಾಜ್ಯ ಪ್ರತಿಷ್ಠಿತ ಕೈಗಾರಿಕೆಗಳ ಮುಖ್ಯಸ್ಥರು,ಜಿಲ್ಲೆಯ ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಮುಖ್ಯಸ್ಥರನ್ನು ಆಹ್ವಾನಿಸಲು ತೀರ್ಮಾನಿಸ ಲಾಗಿರುತ್ತದೆ ಎಂದು ಡಾ.ಜಿ.ಪರಮೇಶ್ವರ್ ತಿಳಿಸಿದರು.

ತುಮಕೂರು ಮಹಾನಗರಪಾಲಿಕೆ ಸೇರಿದಂತೆ 11 ನಗರ ಸ್ಥಳೀಯ ಸಂಸ್ಥೆಗಳಲ್ಲಿ ದಿನಗೂಲಿ, ಸಮಾನ ವೇತನ, ಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸಿದಂತಹ ಒಟ್ಟು 275 ಸಂಖ್ಯೆಯ ಪೌರ ಕಾರ್ಮಿಕರು ಹಾಗೂ ಲೋಡರ್ಸ್‍ಗಳ ಸೇವೆಯನ್ನು ಖಾಯಂಗೊಳಿಸಲಾಗಿರುತ್ತದೆ ಎಂದು ಹರ್ಷ ವ್ಯಕ್ತಿಪಡಿಸಿದರು.

ಕಾರ್ಯಕ್ರಮದಲ್ಲಿ ಶಾಸಕರಾದ ಜಿ.ಬಿ. ಜ್ಯೋತಿಗಣೇಶ್, ಮೇಯರ್ ಪ್ರಭಾವತಿ ಸುಧೀಶ್ವರ್, ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಜಿಲ್ಲಾ ಪಂಚಾಯತ್ ಸಿಇಓ ಜಿ.ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಪೂರ್ ವಾಡ್, ಪಾಲಿಕೆ ಆಯುಕ್ತೆ ಆಶ್ವಿಜ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಾರ್ವಜನಿಕರು, ವಿವಿಧ ಶಾಲಾ-ಕಾಲೇಜು ಮಕ್ಕಳು ಭಾಗವಹಿಸಿದ್ದರು

 

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News