ಉಪ್ಪಳ: ಕೆರೆಯಲ್ಲಿ ಮುಳುಗಿ ಪ್ರೌಢಶಾಲಾ ವಿದ್ಯಾರ್ಥಿ ಮೃತ್ಯು

Update: 2026-08-12 10:10 IST

ಕಾಸರಗೋಡು: ಗೆಳೆಯರೊಂದಿಗೆ ಕೆರೆಗೆ ಸ್ನಾನ ಕ್ಕಿಳಿದ 8ನೇ ತರಗತಿಯ ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ದಾರುಣ ಘಟನೆ ಉಪ್ಪಳದಲ್ಲಿ ನಡೆದಿದೆ.

ಉಪ್ಪಳ ಪೆರಿಂಗಡಿಯ ಅಲಿ ಮತ್ತು ದುಲೈಕಾ ದಂಪತಿಯ ಪುತ್ರ ಅಬೂಬಕರ್ ಅಸಾನ್ (13) ಮೃತಪಟ್ಟ ಬಾಲಕ. ಈತ ಮಂಗಲ್ಪಾಡಿ ಸರಕಾರಿ ಹೈಸ್ಕೂಲ್ನ ವಿದ್ಯಾರ್ಥಿಯಾಗಿದ್ದನು.

ಮಂಗಳವಾರ ಸಂಜೆ 5 ಗಂಟೆ ಸುಮಾರಿಗೆ ಮನೆಯ ಸಮೀಪದ ಕೆರೆಯಲ್ಲಿ ಈ ದುರ್ಘಟನೆ ನಡೆದಿದೆ.

ಅಬೂಬಕರ್ ತನ್ನ ಸ್ನೇಹಿತರೊಂದಿಗೆ ಸ್ನಾನ ಮಾಡಲು ತೆರಳಿದ್ದು, ಎಲ್ಲರೂ ಸ್ನಾನ ಮುಗಿಸಿ ವಾಪಸ್ ಬಂದರೂ ಅಬೂಬಕರ್ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದನು. ಆತನಿಗಾಗಿ ಆಸುಪಾಸಿನಲ್ಲಿ ಹುಡುಕಾಟ ನಡೆಸಿದರೂ ಯಾವುದೇ ಪ್ರಯೋಜನವಾಗಲಿಲ್ಲ.

ಕೊನೆಗೆ ಸಮೀಪದ ಸಿಸಿಟಿವಿ ಕ್ಯಾಮರಾದ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ, ಬಾಲಕ ಕೆರೆಯ ನೀರಿನಲ್ಲಿ ಮುಳುಗುತ್ತಿರುವುದು ಪತ್ತೆಯಾಗಿದೆ. ಸ್ಥಳೀಯರು ಮತ್ತು ಉಪ್ಪಳದಿಂದ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಶೋಧ ನಡೆಸಿ ತಡರಾತ್ರಿ ಬಾಲಕನನ್ನು ನೀರಿನಿಂದ ಮೇಲಕ್ಕೆತ್ತಿ ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಆತ ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು.

ಈ ಬಗ್ಗೆ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News