Napoklu | ಕಾರ್ಯಕರ್ತನ ಮೇಲೆ ಹಲ್ಲೆ ಆರೋಪ; ಸಂಘ ಪರಿವಾರದಿಂದ ರಸ್ತೆ ತಡೆ ಪ್ರತಿಭಟನೆ
ಮಡಿಕೇರಿ : ಹಿಂದುತ್ವ ಸಂಘಟನೆಯ ಕಾರ್ಯಕರ್ತನೊಬ್ಬನ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿ ಮತ್ತು ಹಲ್ಲೆ ಮಾಡಿದವರನ್ನು ತಕ್ಷಣ ಬಂಧಿಸಬೇಕೆಂದು ಆಗ್ರಹಿಸಿ ಸಂಘ ಪರಿವಾರ ಕಾರ್ಯಕರ್ತರು ಇಂದು ನಾಪೋಕ್ಲುವಿನಲ್ಲಿ ರಸ್ತೆ ತಡೆ ಪ್ರತಿಭಟನೆ ನಡೆಸಿದರು.
ಬಲ್ಲಮಾವಟಿಯಲ್ಲಿ ಫೆ.28 ರಂದು ನಡೆಯಲಿದ್ದ ಹಿಂದೂ ಸಂಗಮ ಕಾರ್ಯಕ್ರಮದ ಹಿನ್ನೆಲೆ ಪ್ರಚಾರ ಕಾರ್ಯದಲ್ಲಿ ತೊಡಗಿದ್ದ ಅಪ್ಪಚ್ಚಿರ ಗೌತಮ್ ಎಂಬುವವರ ಮೇಲೆ ಕೆಲವರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದ್ದು, ಗೌತಮ್ ರನ್ನು ಮಡಿಕೇರಿಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತು ಎಂದು ಹೇಳಲಾಗಿದೆ.
ಹಲ್ಲೆ ನಡೆಸಿದವರನ್ನು ತಕ್ಷಣ ಬಂಧಿಸಬೇಕೆಂದು ಒತ್ತಾಯಿಸಿ ಸಂಘ ಪರಿವಾರ ಸಂಘಟನೆಗಳ ಕಾರ್ಯಕರ್ತರು ರಸ್ತೆ ತಡೆ ಪ್ರತಿಭಟನೆ ನಡೆಸಿದರು.
ದೊಡ್ಡಪುಲಿಕೋಟು ಗ್ರಾಮದ ಕರವಂಡ ಪಿ.ಲವ ನಾಣಯ್ಯ ಅವರು ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಸುಹೇಲ್, ಸಿದ್ದಿಕ್, ಶಾಫಿ ಹಾಗೂ ರಾಶಿದ್ ಪಿ.ಎ ಎಂಬುವವರ ವಿರುದ್ಧ ಹಲ್ಲೆ ಆರೋಪದ ದೂರು ದಾಖಲಿಸಿದ್ದಾರೆ. ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮಾಜಿ ಶಾಸಕ ಕೆ.ಜಿ.ಬೋಪಯ್ಯ, ಬಿಜೆಪಿ ಪ್ರಮುಖ ಮನು ಮುತ್ತಪ್ಪ, ವಿಶ್ವ ಹಿಂದೂ ಪರಿಷತ್ ಕಾರ್ಯದರ್ಶಿ ಪಿ.ರಮೇಶ್ ಹಾಗೂ ವಿವಿಧ ಸಂಘಪರಿವಾರ ಸಂಘಟನೆಗಳ ಪ್ರಮುಖರು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ಅವರು ಘಟನೆಯನ್ನು ಖಂಡಿಸಿದ್ದು, ಶಾಂತಿ ಕಾಪಾಡುವಂತೆ ಜನರಲ್ಲಿ ಮನವಿ ಮಾಡಿದ್ದಾರೆ. ಹಲ್ಲೆ ನಡೆಸಿದವರನ್ನು ಪೊಲೀಸರು ಶೀಘ್ರ ಬಂಧಿಸಲಿದ್ದಾರೆ ಎಂದು ತಿಳಿಸಿದ್ದಾರೆ.