Ponnampet | ವಿದ್ಯುತ್ ಸ್ಪರ್ಶದಿಂದ ಕಾಡಾನೆ ಸಾವು
Update: 2026-08-05 22:21 IST
ಮಡಿಕೇರಿ : ಆಹಾರ ಅರಸಿ ತೋಟಕ್ಕೆ ಲಗ್ಗೆ ಇಟ್ಟಿದ್ದ ಗಂಡು ಕಾಡಾನೆಯೊಂದು ವಿದ್ಯುತ್ ಸ್ಪರ್ಶಗೊಂಡು ಸಾವನ್ನಪ್ಪಿರುವ ಘಟನೆ ಪೊನ್ನಂಪೇಟೆ ತಾಲ್ಲೂಕಿನ ಮಾಯಮುಡಿ ಗ್ರಾಮದಲ್ಲಿ ನಡೆದಿದೆ.
ಮಂಗಳವಾರ ರಾತ್ರಿ ಕಾಫಿ ತೋಟವನ್ನು ಪ್ರವೇಶಿಸಿದ ಕಾಡಾನೆಗೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿದೆ ಎಂದು ಹೇಳಲಾಗಿದೆ. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಚೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಅರಣ್ಯ ಇಲಾಖೆ ವೈದ್ಯಾಧಿಕಾರಿ ಡಾ.ಮುಜೀಬ್ ಕಾಡಾನೆಯ ಮರಣೋತ್ತರ ಪರೀಕ್ಷೆ ನಡೆಸಿದರು. ಮರಣೋತ್ತರ ಪರೀಕ್ಷೆ ವರದಿ ಬಂದ ನಂತರ ಕಾಡಾನೆ ಸಾವಿಗೆ ನಿಖರ ಕಾರಣ ತಿಳಿಯಲಿದೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.
ಸಿಎಫ್ ಸೋನಲ್ ವೃಷ್ಠಿ, ಡಿಎಫ್ಓ ಕಿರುಬ ನಂದನ್, ಎಸಿಎಫ್ ಮಂಜುನಾಥ್, ಆರ್ಎಫ್ಓ ರಾಕೇಶ್, ಗಂಗಾಧರ್, ಎಆರ್ಎಫ್ಓ ಪ್ರಶಾಂತ್ ಹಾಗೂ ಸಿಬ್ಬಂದಿಗಳು ಹಾಜರಿದ್ದರು.