×
Ad

ಕೊಡಗಿನಲ್ಲಿ ಬಿರುಗಾಳಿ ಸಹಿತ ವ್ಯಾಪಕ ಮಳೆ: ಧರೆಗುರುಳಿದ ನೂರಾರು ಮರಗಳು, ವಿದ್ಯುತ್ ಕಂಬಗಳು

Update: 2025-07-26 20:17 IST

ಮಡಿಕೇರಿ : ಕೊಡಗು ಜಿಲ್ಲೆಯಾದ್ಯಂತ ಬಿರುಗಾಳಿ ಸಹಿತ ವ್ಯಾಪಕ ಮಳೆಯಾಗುತ್ತಿದ್ದು, ಸಾವು ನೋವು ಸಂಭವಿಸಿದೆ. ಗೋಡೆ ಕುಸಿದು ಮಹಿಳೆಯೊಬ್ಬರು ಮೃತಪಟ್ಟಿದ್ದರೆ, ಚಲಿಸುತ್ತಿದ್ದ ಆಟೋರಿಕ್ಷಾದ ಮೇಲೆ ಮರ ಬಿದ್ದು ಚಾಲಕ ಹಾಗೂ ವಿದ್ಯಾರ್ಥಿನಿ ಗಾಯಗೊಂಡಿದ್ದಾರೆ. ಕಳೆದ ಎರಡು ದಿನಗಳಿಂದ ಗಾಳಿಯ ವೇಗ ಹೆಚ್ಚುತ್ತಲೇ ಇರುವುದರಿಂದ ಜಿಲ್ಲೆಯ ಜನ ಆತಂಕಗೊಂಡಿದ್ದಾರೆ.

ಭಾರೀ ಗಾಳಿಮಳೆಗೆ ಮನೆಯ ಗೋಡೆ ಕುಸಿದ ಪರಿಣಾಮ ಸೋಮವಾರಪೇಟೆ ತಾಲ್ಲೂಕಿನ ಹಾನಗಲ್ಲು ಗ್ರಾಮದ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಕಲಬುರ್ಗಿ ಜಿಲ್ಲೆಯ ನಿವಾಸಿ ರವಿ ಎಂಬುವವರ ಪತ್ನಿ ಸುಷ್ಮಾ (37) ಮೃಪಟ್ಟಿದ್ದಾರೆ. ಮೃತರ ಸಹೋದರ ಅಕ್ಷಯ್ ಗೆ ಭುಜ ಭಾಗಕ್ಕೆ ಪೆಟ್ಟಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಮಡಿಕೇರಿಯ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂವರು ಮಕ್ಕಳು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.

ಆಟೋದ ಮೇಲೆ ಬಿದ್ದ ಮರ :

ಸೋಮವಾರಪೇಟೆ ತಾಲ್ಲೂಕಿನಲ್ಲಿ ಭಾರೀ ಗಾಳಿ ಸಹಿತ ಧಾರಾಕಾರ ಮಳೆಯಾಗುತ್ತಿದ್ದು, ಕುಂಬೂರು ಗ್ರಾಮದಲ್ಲಿ ಚಲಿಸುತ್ತಿದ್ದ ಆಟೋರಿಕ್ಷಾದ ಮೇಲೆ ಮರ ಬಿದ್ದು ಹಾನಿಯಾಗಿದೆ. ಆಟೋ ಚಾಲಕ ಕುಂಬೂರು ಗ್ರಾಮದ ನಿವಾಸಿ ಪ್ರವೀಣ್ ಹಾಗೂ ಆಟೋದಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಗೆ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.

ದೇವಾಲಯಕ್ಕೆ ಹಾನಿ :

ವಿರಾಜಪೇಟೆ ತಾಲ್ಲೂಕಿನ ಕೆದಮುಳ್ಳೂರು ಗ್ರಾಮದ ಚುರಿಯಾಲ್‍ನಲ್ಲಿರುವ ಪನ್ನಂಗಾಲತ್ತಮ್ಮೆ ದೇವಾಲಯದ ಮೇಲೆ ಮರ ಬಿದ್ದು ಹಾನಿಯಾಗಿದೆ. ದೇವಾಲಯದ ಅರ್ಧ ಭಾಗದಷ್ಟು ಹಾನಿಗೀಡಾಗಿದ್ದು, ಯಾರೂ ಇಲ್ಲದ್ದರಿಂದ ಅನಾಹುತ ತಪ್ಪಿದೆ. ಸ್ಥಳಕ್ಕೆ ವಿರಾಜಪೇಟೆ ತಹಶೀಲ್ದಾರ್‌ ಹಾಗೂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.

ಶನಿವಾರಸಂತೆ ಹೋಬಳಿ ಕೊರಲಳ್ಳಿ ಗ್ರಾಮದ ಸುಕನ್ಯಾ ಎಂಬುವವರ ಮನೆಯ ಮೇಲೆ ಮರ ಬಿದ್ದು ಹಾನಿಯಾಗಿದೆ. ಸಂಪಾಜೆ ವ್ಯಾಪ್ತಿಯ ಮೇಕೇರಿ ಗ್ರಾಮದ ಸುಭಾಷ್ ನಗರದ ನಸೀಮಾ ಎಂಬುವವರ ಮನೆಯ ಮೇಲೆ ಮರ ಬಿದ್ದು ಭಾಗಶಃ ಹಾನಿ ಉಂಟಾಗಿದೆ. ಡಬ್ಬಡ್ಕ ಗ್ರಾಮದ ಮುಕ್ಕಾಟಿ ತಮ್ಮಯ್ಯ ಎಂಬುವವರ ಮನೆಯ ಕೊಟ್ಟಿಗೆ ಮೇಲೆ ಮರ ಬಿದ್ದು ಹಾನಿಯಾಗಿದ್ದು, ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.

ಅಮ್ಮತ್ತಿ ಹೋಬಳಿ ಬಿಳುಗುಂದ ಗ್ರಾಮದ ಹೆಚ್.ಟಿ.ಗಣೇಶ್ ಎಂಬುವವರ ವಾಸದ ಮನೆಯ ಹಿಂಬದಿಯ ಗೋಡೆ ಮತ್ತು ಮೇಲ್ಚಾವಣಿ ಮಳೆಯಿಂದ ಕುಸಿದು ಬಿದ್ದು ತೀವ್ರ ಹಾನಿಯಾಗಿದೆ. ನಾಪೊಕ್ಲು ಹೋಬಳಿ ಎಮ್ಮೆಮಾಡು ಗ್ರಾಮದ ಅಬ್ದುಲ್ ರಹೆಮಾನ್ ಎಂಬುವರ ಮನೆಯ ಹಿಂಭಾಗದಲ್ಲಿ ಮರಬಿದ್ದು ಹಾನಿಯಾಗಿದೆ. ಎಮ್ಮೆಮಾಡು ಗ್ರಾಮದ ಅಬ್ದುಲ್ ಅಫೀಲ್ ಅವರ ವಾಸದ ಮನೆಯ ಪಕ್ಕದಲ್ಲಿ ಬರೆ ಕುಸಿತಗೊಂಡಿದೆ.

ದೊಡ್ಡಕೂಡ್ಲಿ ಗ್ರಾಮದ ಕೃಷ್ಣಚಾರ್ಯ ಎಂಬುವರ ಮನೆ ಮೇಲೆ ಮರ ಬಿದ್ದು ಭಾಗಶಃ ಹಾನಿಯಾಗಿದೆ. ಕುಶಾಲನಗರ ತಾಲ್ಲೂಕು ಕೂಡಿಗೆ ಗ್ರಾಮ ಪಂಚಾಯಿತಿಯ ಬ್ಯಾಡಗೊಟ್ಟ ಗ್ರಾಮದ ನಿವಾಸಿ ಪಾಂಡುರಂಗ ಎಂಬುವರ ಮನೆಗೆ ಮರ ಬಿದ್ದು ಮನೆಯ 2 ಶೀಟ್ ಹಾಗೂ ಮನೆಗೆ ಹೊಂದಿಕೊಂಡಂತೆ ಇರುವ ಕೊಟ್ಟಿಗೆಗೆ ಹಾನಿಯಾಗಿದೆ. ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು. ಭಾಗಮಂಡಲ ಹೋಬಳಿ ಕರಿಕೆ ಗ್ರಾಮದ ಸುಮತಿ ಎಂಬುವವರ ವಾಸದ ಮನೆಯ ಮೇಲೆ ಮರ ಬಿದ್ದು ಹಾನಿಯಾಗಿದೆ. ಸ್ಥಳಕ್ಕೆ ಗ್ರಾ.ಪಂ ಅಧ್ಯಕ್ಷರು, ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.

ರಸ್ತೆಗೆ ಬಿದ್ದ ಮರಗಳು :

ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗುತ್ತಿದ್ದು, ಗ್ರಾಮೀಣ ಪ್ರದೇಶಗಳು ಮಾತ್ರವಲ್ಲದೆ ಹೆದ್ದಾರಿಗಳಲ್ಲೂ ಬೃಹತ್ ಮರಗಳು ಬಿದ್ದು, ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು.

ಸುಂಟಿಕೊಪ್ಪ ಸಮೀಪ ಹೆದ್ದಾರಿಯಲ್ಲಿ ಮರ ಬಿದ್ದು ವಿದ್ಯುತ್ ಹಾನಿ ಉಂಟಾಯಿತ್ತಲ್ಲದೆ, ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು. ಚೆಟ್ಟಳ್ಳಿ, ಸಿದ್ದಾಪುರ ರಸ್ತೆಯಲ್ಲೂ ಮರಗಳು ಬಿದ್ದಿವೆ. ಸೋಮವಾರಪೇಟೆಯ ಕಾಜೂರು ಬಳಿ ರಸ್ತೆಗೆ ಮರ ಬಿದ್ದು ಸಂಚಾರ ಬಂದ್ ಆಗಿತ್ತು.

ಗ್ರಾಮೀಣ ಪ್ರದೇಶಗಳಲ್ಲಿ ಹಲವು ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಜಿಲ್ಲೆಯ ನಗರ, ಪಟ್ಟಣ ಸೇರಿದಂತೆ ಬಹುತೇಕ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದೆ.

ಜಿಲ್ಲೆಯಾದ್ಯಂತ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಗಾಳಿಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಗಳಿದೆ. ಎತ್ತರ ಮತ್ತು ತಗ್ಗು ಪ್ರದೇಶ ಹಾಗೂ ನದಿತೀರದ ನಿವಾಸಿಗಳು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಮನವಿ ಮಾಡಿದೆ. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News