ಕೊಪ್ಪಳ: ಗವಿಸಿದ್ದಪ್ಪ ನಾಯಕ್ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಆಗ್ರಹಿಸಿ ರಾಜ್ಯಪಾಲರಿಗೆ ಮನವಿ
ಕೊಪ್ಪಳ: ಕೆಲ ದಿನಗಳ ಹಿಂದೆ ಕೊಪ್ಪಳದಲ್ಲಿ ಹತ್ಯೆಯಾದ ವಾಲ್ಮೀಕಿ ಸಮುದಾಯದ ಯುವಕ ಗವಿಸಿದ್ದಪ್ಪ ನಾಯಕನ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಬೇಕೆಂದು ಆಗ್ರಹಿಸಿ ಮೃತ ಯುವಕನ ಕುಟುಂಬದವರೊಂದಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ನೇತೃತ್ವ ಬಿಜೆಪಿ ಮತ್ತು ಜೆಡಿಎಸ್ ಶಾಸಕರ ನಿಯೋಗವು ಬುಧವಾರ ರಾಜ್ಯಪಾಲರಿಗೆ ಮನವಿ ಸಲ್ಲಿಸಿತು.
ಬುಧವಾರ ರಾಜಭವನಕ್ಕೆ ತೆರಳಿ ರಾಜ್ಯಪಾಲ ಡಾ.ಥಾವರ್ ಚಂದ್ ಗೆಲ್ಲೋಟ್ ಅವರನ್ನು ಭೇಟಿಯಾಗಿ, ಗವಿಸಿದ್ದಪ್ಪ ಹತ್ಯೆ ಪ್ರಕರಣದಲ್ಲಿ ಸರ್ಕಾರದ ಮೇಲೆ ಒತ್ತಡವನ್ನು ಹಾಕಿ ಸಮಗ್ರ ಮತ್ತು ನ್ಯಾಯಸಮ್ಮತ ತನಿಖೆ ನಡೆಸಿ, ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಿ, ಯುವಕನ ಕುಟುಂಬಕ್ಕೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿ ಮನವಿ ಸಲ್ಲಿಸಲಾಯಿತು.
ಗವಿಸಿದ್ದಪ್ಪ ನಾಯಕ ಅವರು ಮುಸ್ಲಿಂ ಯುವತಿಯನ್ನು ಪ್ರೀತಿಸಿದ್ದ ಕಾರಣಕ್ಕಾಗಿ ದುಷ್ಕರ್ಮಿಗಳಿಂದ ಅಮಾನುಷವಾಗಿ ಕೊಲೆಯಾಗಿರುವ ಪ್ರಕರಣದ ತನಿಖೆ ಪಾರದರ್ಶಕವಾಗಿ ನಡೆಯುತ್ತಿಲ್ಲ. ಮತಬ್ಯಾಂಕ್ ಓಲೈಕೆಯ ರಾಜಕಾರಣ ಮಾಡುವ ಕಾಂಗ್ರೆಸ್ ನೇತೃತ್ವದ ಸರ್ಕಾರದಿಂದ ಯುವಕನ ಸಾವಿಗೆ ನ್ಯಾಯ ಸಿಗುವುದಿಲ್ಲ ಎನ್ನುವುದು ಮೃತನ ಕುಟುಂಬ, ಸ್ಥಳೀಯರು ಹಾಗೂ ವಾಲ್ಮೀಕಿ ಸಮುದಾಯದ ಅಭಿಪ್ರಾಯವಾಗಿದ್ದು, ಇದಕ್ಕೆ ಪೂರಕವೆಂಬಂತೆ ಪೊಲೀಸ್ ತನಿಖೆ ಮಂದಗತಿಯಲ್ಲಿ ಸಾಗುತ್ತಿದ್ದು, ಕೊಲೆಗಡುಕನನ್ನು ಬಂಧಿಸುವಲ್ಲಿಯೂ ಉದ್ದೇಶಪೂರ್ವಕವಾಗಿ ವಿಳಂಬ ಮಾಡಿರುವುದು ತನಿಖೆಯನ್ನು ದುರ್ಬಲಗೊಳಿಸುವ ಉದ್ದೇಶದಿಂದ ಕೂಡಿದೆ ಎಂಬುದು ಸ್ಥಳೀಯರ ಬಲವಾದ ಶಂಕೆಯಾಗಿದೆ. ಈ ಹಿನ್ನೆಲೆಯಲ್ಲಿ ನಿಷ್ಪಕ್ಷಪಾತ ತನಿಖೆ ನಡೆಯಬೇಕಿದೆ. ಈ ಕೊಲೆಯ ಹಿಂದೆ ದೇಶವಿದ್ರೋಹಿ ಮನಸ್ಥಿತಿಯ ಜಾಲದ ಕೈವಾಡವಿರುವ ಅನುಮಾನವೂ ಇದೆ, ಆದ್ದರಿಂದ ರಾಷ್ಟ್ರೀಯ ತನಿಖಾ ದಳದಿಂದ (ಎನ್ ಐ ಎ) ತನಿಖೆ ನಡೆಸುವುದು ಅತ್ಯಾವಶ್ಯಕವಾಗಿದ್ದು, ರಾಜ್ಯಪಾಲರು ಮಧ್ಯಪ್ರವೇಶಿಸಿ ಎನ್ಐಎ ತನಿಖೆ ಕೈಗೆತ್ತಿಕೊಳ್ಳಲು ಕ್ರಮ ವಹಿಸುವಂತೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಶಾಸಕ ಗಾಲಿ ಜನಾರ್ಧನ ರೆಡ್ಡಿ, ಮಾಜಿ ಸಚಿವ ಬಿ.ಶ್ರೀರಾಮುಲು, ವಿಧಾನ ಪರಿಷತ್ ಸದಸ್ಯ ಸಿಟಿ.ರವಿ ಹಾಗೂ ಪರಿಷತ್ ಸದಸ್ಯೆ ಹೇಮಲತಾ ನಾಯಕ್, ಶಾಸಕ ಡಾ. ಸಿಎನ್ ಅಶ್ವಥ್ ನಾರಾಯಣ್, ಎಸ್ಆರ್ ವಿಶ್ವನಾಥ್, ವಿರೋಧ ಪಕ್ಷ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ್, ಶಾಸಕ ಮುನಿರತ್ನ, ಬಿ.ಸುರೇಶ್ ಗೌಡ, ಶೈಲೇಂದ್ರ ಬೆಲ್ದಾಳೆ, ಮಾಜಿ ಸಚಿವ ಶಿವನಗೌಡ ನಾಯಕ್, ಪಕ್ಷದ ರಾಜ್ಯ ಉಪಾಧ್ಯಕ್ಷ ರಾಜುಗೌಡ ನಾಯಕ್, ಶರಣು ತಳ್ಳಿಕೆರಿ, ಕೊಪ್ಪಳ ಬಿಜೆಪಿ ಜಿಲ್ಲಾಧ್ಯಕ್ಷ ಬಸವರಾಜ್ ದಡೇಸೂಗೂರು, ಬಸವರಾಜ್ ಕ್ಯಾವಟರ್ ಹಾಗೂ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.