Koppal | ಬರ ಪರಿಸ್ಥಿತಿ ಅವಲೋಕಿಸಿದ ಸಚಿವರು; ರೈತರಿಗೆ ನ್ಯಾಯಯುತ ಪರಿಹಾರದ ಭರವಸೆ

ಕುಷ್ಟಗಿ, ಕುಕನೂರ, ಯಲಬುರ್ಗಾ, ಕೊಪ್ಪಳ ತಾಲೂಕುಗಳಲ್ಲಿ ಸಂಚಾರ

Update: 2026-08-06 19:21 IST

ಕೊಪ್ಪಳ : ರಾಜ್ಯ ಸರ್ಕಾರದ ಸಂಪುಟ ದರ್ಜೆ ಸಚಿವರಾದ ಶಿವರಾಜ ಎಸ್. ತಂಗಡಗಿ ಹಾಗೂ ಬಸವರಾಜ ರಾಯರೆಡ್ಡಿ ಅವರು ಗುರುವಾರ ತವರು ಜಿಲ್ಲೆಯಲ್ಲಿ ವಿವಿಧ ತಾಲೂಕುಗಳಿಗೆ ಭೇಟಿ ನೀಡಿ ಬರ ಪರಿಸ್ಥಿತಿಯನ್ನು ಪರಿಶೀಲಿಸಿದರು. ಮಾಜಿ ಸಂಸದ ಸಂಗಣ್ಣ ಕರಡಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕೆ.ಪಿ. ಮೋಹನರಾಜ್, ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ದಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವರ್ಣಿತ್ ನೇಗಿ ಹಾಗೂ ಕೃಷಿ, ತೋಟಗಾರಿಕೆ, ಪಶುಪಾಲನೆ ಮತ್ತು ಮೀನುಗಾರಿಕೆ ಇಲಾಖೆಯ ಅಧಿಕಾರಿಗಳೊಂದಿಗೆ ಕುಷ್ಟಗಿ, ಕುಕನೂರು, ಯಲಬುರ್ಗಾ ಹಾಗೂ ಕೊಪ್ಪಳ ತಾಲೂಕುಗಳಲ್ಲಿ ಬೆಳೆಹಾನಿಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ ರೈತರ ಅಹವಾಲು ಆಲಿಸಿದರು.

ಕುಷ್ಟಗಿ ತಾಲೂಕಿನ ನವಲಹಳ್ಳಿಯಲ್ಲಿ ಮೆಕ್ಕೆಜೋಳ, ತೊಗರಿ ಹಾಗೂ ಸಜ್ಜೆ ಬೆಳೆಗಳ ಹಾನಿಯನ್ನು ಪರಿಶೀಲಿಸಿದ ಸಚಿವರು, ಬಳಿಕ ಕುಕನೂರು ತಾಲೂಕಿನ ಸಂಗನಹಾಳ ಗ್ರಾಮದಲ್ಲಿ ರೈತ ಸೋಮಶೇಖರಯ್ಯ ಗಣಾಚಾರಿ ಅವರ ಹೆಸರು ಬೆಳೆ, ರೈತ ಸಂಗಪ್ಪ ಶಿವರೆಡ್ಡಿ ಅವರ ಸೂರ್ಯಕಾಂತಿ ಬೆಳೆ ಹಾಗೂ ರಾಜೂರ ಗ್ರಾಮದಲ್ಲಿ ಸಫಿಯಾಬೇಗಂ ನದಾಫ ಅವರ ಹೆಸರು ಬೆಳೆ ಮಳೆಯ ಕೊರತೆಯಿಂದ ಹಾನಿಗೀಡಾಗಿರುವುದನ್ನು ವೀಕ್ಷಿಸಿದರು.

ಯಲಬುರ್ಗಾ ಮತ್ತು ಕುಕನೂರು ತಾಲೂಕುಗಳ ಪ್ರವಾಸದ ವೇಳೆ ರಾಜೂರ ಗ್ರಾಮದಲ್ಲಿ ರೈತರೊಂದಿಗೆ ಸಮಾಲೋಚನಾ ಸಭೆ ನಡೆಸಲಾಯಿತು.

ಸಭೆಯಲ್ಲಿ ಮಾತನಾಡಿದ ಸಚಿವ ಬಸವರಾಜ ರಾಯರೆಡ್ಡಿ, ಮಳೆಯ ಕೊರತೆಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ರಾಜ್ಯದಲ್ಲಿ ಶೇ.32 ಹಾಗೂ ಕೊಪ್ಪಳ ಜಿಲ್ಲೆಯಲ್ಲಿ ಶೇ.40ರಷ್ಟು ಮಳೆ ಕೊರತೆಯಾಗಿದೆ. ಬಿತ್ತನೆ ಪ್ರಮಾಣವೂ ಗಣನೀಯವಾಗಿ ಕುಸಿದಿದ್ದು, ಸರ್ಕಾರ ಪರಿಸ್ಥಿತಿಯನ್ನು ಸಮೀಪದಿಂದ ಗಮನಿಸುತ್ತಿದೆ. ರೈತರಿಗೆ ನ್ಯಾಯಯುತ ಪರಿಹಾರ ಒದಗಿಸಲಾಗುವುದು ಎಂದು ಭರವಸೆ ನೀಡಿದರು.

ಸಚಿವ ಶಿವರಾಜ ಎಸ್. ತಂಗಡಗಿ ಮಾತನಾಡಿ, ತೊಗರಿ, ಹೆಸರು, ಸಜ್ಜೆ ಸೇರಿದಂತೆ ವಿವಿಧ ಬೆಳೆಗಳು ಹಾನಿಗೀಡಾಗಿರುವುದು ಪರಿಶೀಲನೆ ವೇಳೆ ಕಂಡುಬಂದಿದೆ. ಜಿಲ್ಲೆಯಿಂದ ವಸ್ತುನಿಷ್ಠ ವರದಿ ಸರ್ಕಾರಕ್ಕೆ ಸಲ್ಲಿಸಲಾಗುವುದು. ಸಚಿವ ಸಂಪುಟದಲ್ಲಿ ಈ ಕುರಿತು ಚರ್ಚಿಸಿ, ವಾಸ್ತವ ಸ್ಥಿತಿಯನ್ನು ಆಧರಿಸಿ ಬರ ಘೋಷಣೆ ಸೇರಿದಂತೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳ ಮಾತನಾಡಿ, ಜಿಲ್ಲೆಯಲ್ಲಿ ಇದುವರೆಗೆ ಶೇ.40ರಷ್ಟು ಮಳೆ ಕೊರತೆಯಾಗಿದ್ದು, ಕೇವಲ ಶೇ.63ರಷ್ಟು ಮಾತ್ರ ಬಿತ್ತನೆಯಾಗಿದೆ. ಅಧಿಕಾರಿಗಳು ಕ್ಷೇತ್ರ ಭೇಟಿ ನಡೆಸಿ ಬೆಳೆಹಾನಿಯ ಕುರಿತು ಛಾಯಾಚಿತ್ರ ಹಾಗೂ ವಿಡಿಯೊ ದಾಖಲೆಗಳೊಂದಿಗೆ ವರದಿ ಸಿದ್ಧಪಡಿಸಿ ಸರ್ಕಾರಕ್ಕೆ ಕಳುಹಿಸಲಿದ್ದಾರೆ. ಈಗಾಗಲೇ ಜಿಲ್ಲೆಯ 1.56 ಲಕ್ಷ ರೈತರು ಬೆಳೆ ವಿಮೆ ಪ್ರೀಮಿಯಂ ಪಾವತಿಸಿದ್ದು, ಪರ್ಯಾಯ ಕೃಷಿ ಕುರಿತು ರೈತರಿಗೆ ಜಾಗೃತಿ ಮೂಡಿಸಲಾಗುತ್ತಿದೆ ಎಂದು ತಿಳಿಸಿದರು.

ಸಭೆಯಲ್ಲಿ ಜಂಟಿ ಕೃಷಿ ನಿರ್ದೇಶಕರು ಮಾಹಿತಿ ನೀಡಿ, ಜಿಲ್ಲೆಯಲ್ಲಿ ವಾಡಿಕೆಯಂತೆ 158 ಮಿ.ಮೀ. ಮಳೆಯಾಗಬೇಕಿದ್ದರೆ ಕೇವಲ 98 ಮಿ.ಮೀ. ಮಳೆಯಾಗಿದೆ. ಯಲಬುರ್ಗಾ ತಾಲೂಕಿನಲ್ಲಿ ಶೇ.35 ಹಾಗೂ ಕುಕನೂರು ತಾಲೂಕಿನಲ್ಲಿ ಶೇ.24ರಷ್ಟು ಮಳೆ ಕೊರತೆ ದಾಖಲಾಗಿದೆ ಎಂದು ವಿವರಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ರೆಡ್ಡಿ ಶ್ರೀನಿವಾಸ, ಕೊಪ್ಪಳ ಸಹಾಯಕ ಆಯುಕ್ತರಾದ ಮೆಹಬೂಬ ಜಿಲಾನಿ, ಜಿಪಂ ಉಪ ಕಾರ್ಯದರ್ಶಿ ಕೃಷ್ಣಮೂರ್ತಿ, ಜಂಟಿ ತೋಟಗಾರಿಕಾ ನಿರ್ದೇಶಕರಾದ ಕೃಷ್ಣ ಉಕ್ಕುಂದ, ಮೀನುಗಾರಿಕಾ ಇಲಾಖೆಯ ಉಪ ನಿರ್ದೇಶಕರಾದ ಶ್ರೀನಿವಾಸ ಕುಲಕರ್ಣಿ, ಪಶುಪಾಲನಾ ಇಲಾಖೆಯ ಉಪ ನಿರ್ದೇಶಕರಾದ ಮಲ್ಲಯ್ಯ, ಕೃಷಿ ಇಲಾಖೆಯ ತಾಲೂಕು ಅಧಿಕಾರಿಗಳಾದ ಪ್ರಮೋದ ತುಂಬಳ, ಶಿವಪ್ಪ ಕೊಂಡಗುರಿ, ಎಸ್ ಸಿ ಚಿಂಚಲಿ ಸೇರಿದಂತೆ ಇತರರು ಇದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News