×
Ad

ಕೊಪ್ಪಳ| ಬಿಸಿಯೂಟದಲ್ಲಿ ಹಲ್ಲಿ ಬಿದ್ದು 14ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ: ಶಾಲಾ ಮುಖ್ಯ ಶಿಕ್ಷಕರು, ಸಿಬ್ಬಂದಿಗಳ ವಿರುದ್ಧ ಪೋಷಕರ ಆಕ್ರೋಶ

Update: 2026-02-01 18:56 IST

ಯಲಬುರ್ಗಾ: ತಾಲೂಕಿನ ಚಿಕ್ಕಬನ್ನಿಗೋಳ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಬಿಸಿಯೂಟದಲ್ಲಿ ಹಲ್ಲಿ ಬಿದ್ದ ಆಹಾರ ಸೇವಿಸಿ 14ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಈ ಘಟನೆ ಗುರುವಾರ ಮಧ್ಯಾಹ್ನ ನಡೆದಿದ್ದು, ಶಾಲಾ ಮುಖ್ಯ ಶಿಕ್ಷಕರು ಹಾಗೂ ಅಡುಗೆ ಸಿಬ್ಬಂದಿಗಳ ವಿರುದ್ಧ ಗ್ರಾಮಸ್ಥರು ಹಾಗೂ ಪಾಲಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಾಲೆಯಿಂದ ಸಂಜೆ ಮನೆಗೆ ಬಂದ ಮಕ್ಕಳು ಅಸ್ವಸ್ಥಗೊಂಡಿದ್ದಾರೆ. ಇದನ್ನು ಗಮನಿಸಿದ ಪಾಲಕರು ಮಕ್ಕಳನ್ನು ವಿಚಾರಿಸಿದಾಗ ಮಧ್ಯಾಹ್ನದ ಊಟದಲ್ಲಿ ಹಲ್ಲಿ ಬಿದ್ದಿರುವ ಬಗ್ಗೆ ತಿಳಿಸಿದ್ದಾರೆ. ಘಟನೆ ಬಳಿಕ ಸಮೀಪದ ವಜ್ರಬಂಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರ ತಂಡ ವಿದ್ಯಾರ್ಥಿಗಳ ಆರೋಗ್ಯ ಪರಿಶೀಲಿಸಿದೆ. ಘಟನೆಯಲ್ಲಿ 14 ಮಕ್ಕಳಿಗೆ ತೀವ್ರ ಹೊಟ್ಟೆ ನೋವು, ವಾಂತಿ ಹಾಗೂ ಭೇದಿ ಕಾಣಿಸಿಕೊಂಡಿದ್ದು ಅವರನ್ನು ಯಲಬುರ್ಗಾದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

ಈ ವಿಷಯವನ್ನು ಪಾಲಕರಿಗೆ ಹೇಳಬಾರದೆಂದು ಶಿಕ್ಷಕರು ಹೆದರಿಸಿದ್ದಾರೆ. ಇದಲ್ಲದೆ ರಾತ್ರಿ 10 ಗಂಟೆಯಾದರೂ ಶಾಲೆಯ ಮುಖ್ಯಶಿಕ್ಷಕರು ಗ್ರಾಮಕ್ಕೆ ಬಂದು ಮಕ್ಕಳ ಬಗ್ಗೆ ವಿಚಾರಿಸಲಿಲ್ಲ. ಕರೆಗಳನ್ನು ಸ್ವೀಕರಿಸಲಿಲ್ಲ ಎಂದು ಪಾಲಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸ್ಥಳಕ್ಕೆ ಅಕ್ಷರ ದಾಸೋಹ ಅಧಿಕಾರಿ ಹಾಗೂ ಬಿಆರ್‌ಸಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಎಲ್ಲಾ ಮಕ್ಕಳು ಆರೋಗ್ಯದಿಂದಿದ್ದಾರೆ ಎಂದು ತಿಳಿದು ಬಂದಿದೆ.

ಈ ಕುರಿತು ಪ್ರತಿಕ್ರಿಯಿಸಿದ ಯಲಬುರ್ಗಾ ಬಿಇಒ ಅಶೋಕ್ ಗೌಡರ್, ಊಟದಲ್ಲಿ ಹಲ್ಲಿ ಕಾಣಿಸಿಕೊಂಡ ನಂತರ ಅನ್ನವನ್ನು ಬಿಸಾಕಿ ಬೇರೆ ಅಹಾರವನ್ನು ಸಿದ್ದಪಡಿಸಿ ಮಕ್ಕಳಿಗೆ ನೀಡಲಾಗಿದೆ. ಕೆಲವೊಂದು ಮಕ್ಕಳಿಗೆ ವಾಂತಿ-ಬೇದಿ ಕಾಣಿಸಿಕೊಂಡ ಕೂಡಲೆ ಎಲ್ಲಾ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಿ ರಕ್ತ ಪರೀಕ್ಷೆ ಮಾಡಿಸಿದ್ದೇವೆ. ಈಗ ಎಲ್ಲಾ ಮಕ್ಕಳು ಆರೋಗ್ಯವಾಗಿದ್ದಾರೆ. ಶಾಲೆಯ ಮುಖ್ಯ ಶಿಕ್ಷಕ ಮತ್ತು ಅಡುಗೆ ಸಿಬ್ಬಂದಿಗಳ ವಿರುದ್ಧ ಕ್ರಮಕ್ಕೆ ಮೇಲಾಧಿಕಾರಿಗಳಿಗೆ ವರದಿ ಸಲ್ಲಿಸಿದ್ದೇವೆ ಎಂದು ಹೇಳಿದ್ದಾರೆ.  

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News