ಕೊಪ್ಪಳ ಜಿಲ್ಲಾಧಿಕಾರಿಗೆ ಉತ್ತಮ ಜಿಲ್ಲಾ ಚುನಾವಣಾಧಿಕಾರಿ ಪ್ರಶಸ್ತಿ
ಕೊಪ್ಪಳ: 2025-26ನೇ ಸಾಲಿನಲ್ಲಿ ಆಚರಿಸಲಿರುವ 16ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಜ.19ರಂದು ಭಾರತ ಚುನಾವಣಾ ಆಯೋಗದಿಂದ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದ್ದು, ಕೊಪ್ಪಳ ಜಿಲ್ಲೆಯ ಜಿಲ್ಲಾಧಿಕಾರಿಗಳಾದ ಡಾ.ಸುರೇಶ ಬಿ.ಇಟ್ನಾಳ ಅವರಿಗೆ ಉತ್ತಮ ಜಿಲ್ಲಾ ಚುನಾವಣಾಧಿಕಾರಿ ಪ್ರಶಸ್ತಿಯನ್ನು ನೀಡಲಾಗಿದೆ.
ಭಾರತ ಚುನಾವಣಾ ಆಯೋಗದಿಂದ ಪ್ರತಿ ವರ್ಷ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಚುನಾವಣಾ ಕಾರ್ಯಗಳಲ್ಲಿ ಹಾಗೂ ಮತದಾರರ ಪಟ್ಟಿಗಳ ಪರಿಷ್ಕರಣಾ ಕಾರ್ಯಗಳಲ್ಲಿ ಉತ್ತಮ ಕೆಲಸ ನಿರ್ವಹಿಸಿದ ಜಿಲ್ಲಾ ಚುನಾವಣಾಧಿಕಾರಿಗಳಿಗೆ, ಅಪರ ಜಿಲ್ಲಾ ಚುನಾವಣಾಧಿಕಾರಿಗಳಿಗೆ, ಮತದಾರರ ನೋಂದಣಾಧಿಕಾರಿಗಳಿಗೆ, ಸಹಾಯಕ ಮತದಾರರ ನೋಂದಣಾಧಿಕಾರಿಗಳಿಗೆ, ಬಿಎಲ್ಓ ಮೇಲ್ವಿಚಾರಕರಿಗೆ ಮತ್ತು ಬೂತ್ ಮಟ್ಟದ ಅಧಿಕಾರಿಗಳಿಗೆ ಪ್ರಶಸ್ತಿಯನ್ನು ನೀಡಲಾಗುತ್ತದೆ.
ಇದರೊಂದಿಗೆ 64-ಕೊಪ್ಪಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮತಗಟ್ಟೆ ಸಂಖ್ಯೆ : 208ರ ಬೂತ್ ಮಟ್ಟದ ಅಧಿಕಾರಿಯಾದ ಹಿರೇಬಗನಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಾಯಕ ಶಿಕ್ಷಕರಾದ ಸತೀಶಚಂದ್ರ ಇವರಿಗೆ ಉತ್ತಮ ಬೂತ್ ಮಟ್ಟದ ಅಧಿಕಾರಿ ಪ್ರಶಸ್ತಿಯನ್ನು ನೀಡಲಾಗಿದೆ.
ಪ್ರಶಸ್ತಿಗೆ ಆಯ್ಕೆಯಾದ ಅಧಿಕಾರಿ, ಸಿಬ್ಬಂದಿಗಳಿಗೆ ಜ.25 ರಂದು ಬೆಂಗಳೂರಿನ ಶ್ರೀ ಪುಟ್ಟಣ್ಣಚೆಟ್ಟಿ ಟೌನ್ಹಾಲ್ ನಲ್ಲಿ ನಡೆಯಲಿರುವ 16ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಸಂದರ್ಭದಲ್ಲಿ ಕರ್ನಾಟಕದ ರಾಜ್ಯಪಾಲರು ಪ್ರಶಸ್ತಿ ಪ್ರಧಾನ ಮಾಡುವರು ಎಂದು ಪ್ರಕಟಣೆ ತಿಳಿಸಿದೆ.