ಕೊಪ್ಪಳ, ಸೆ.14: ಜಿಲ್ಲೆಯಾದ್ಯಂತ ಗೌರಿ-ಗಣೇಶ ಹಬ್ಬವನ್ನು ಶಾಂತಿಯುತ ಹಾಗೂ ಸುವ್ಯವಸ್ಥಿತವಾಗಿ ಆಚರಿಸುವ ಉದ್ದೇಶದಿಂದ ಕೊಪ್ಪಳ ಜಿಲ್ಲಾ ಪೊಲೀಸ್ ಇಲಾಖೆ ವ್ಯಾಪಕ ಭದ್ರತಾ ಹಾಗೂ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಾಹಿಲ್ ಬಾಗ್ಲಾ ತಿಳಿಸಿದ್ದಾರೆ.

ಸೋಮವಾರ ಎಸ್ಪಿ ಕಚೇರಿ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಬ್ಬದ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಜಿಲ್ಲೆಯಾದ್ಯಂತ 4 ಡಿವೈಎಸ್‌ಪಿ, 14 ಪಿಐ/ಸಿಪಿಐ, 27 ಪಿಎಸ್‌ಐ, 59 ಎಎಸ್‌ಐ ಹಾಗೂ 395 ಹೆಡ್ ಕಾನ್ಸ್‌ಟೇಬಲ್ ಮತ್ತು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಜೊತೆಗೆ 3 ಕೆಎಸ್‌ಆರ್‌ಪಿ ತುಕಡಿಗಳು, 10 ಡಿಎಆರ್ ತುಕಡಿಗಳು ಹಾಗೂ 500 ಗೃಹರಕ್ಷಕ ಸಿಬ್ಬಂದಿಯನ್ನೂ ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜಿಸಲಾಗಿದೆ ಎಂದು ಹೇಳಿದರು.

ಮುಂಜಾಗ್ರತಾ ಕ್ರಮವಾಗಿ 15 ರೌಡಿ ಹಾಗೂ ರೂಢಿಗತ ಅಪರಾಧಿಗಳನ್ನು ಜಿಲ್ಲೆಯಿಂದ ಗಡೀಪಾರು ಮಾಡಲಾಗಿದೆ. ಶಾಂತಿ ಮತ್ತು ಸುವ್ಯವಸ್ಥೆಗೆ ಭಂಗ ತರುವ ಸಾಧ್ಯತೆ ಇರುವ ರೌಡಿಶೀಟರ್‌ಗಳು, ಕೋಮುಗೂಂಡಾಗಳು ಸೇರಿದಂತೆ ಒಟ್ಟು 1,177 ಮಂದಿಯಿಂದ ತಾಲೂಕು ದಂಡಾಧಿಕಾರಿಗಳ ಸಮಕ್ಷಮ ಮುಚ್ಚಳಿಕೆ ಬರೆಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಜಿಲ್ಲೆಯಾದ್ಯಂತ 8,282 ಸಿಸಿಟಿವಿ ಕ್ಯಾಮೆರಾಗಳ ಮೂಲಕ ನಿಗಾ ವಹಿಸಲಾಗುತ್ತಿದ್ದು, 735 ಸೂಕ್ಷ್ಮ ಪ್ರದೇಶಗಳನ್ನು ಕಮಾಂಡ್ ಸೆಂಟರ್‌ನಿಂದ 24 ಗಂಟೆಗಳ ಕಾಲ ಮೇಲ್ವಿಚಾರಣೆ ಮಾಡಲಾಗುತ್ತಿದೆ. ಹೆಚ್ಚುವರಿ ಗಸ್ತಿಗಾಗಿ 20 ವಾಹನಗಳನ್ನು ನಿಯೋಜಿಸಲಾಗಿದ್ದು, ಪ್ರಮುಖ ಗಣೇಶ ವಿಸರ್ಜನಾ ದಿನಗಳಲ್ಲಿ 3 ಡ್ರೋನ್ ಕ್ಯಾಮೆರಾಗಳ ಮೂಲಕವೂ ಕಣ್ಗಾವಲು ಇರಲಿದೆ.

ಹಬ್ಬದ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಅಧಿಕಾರಿಗಳ ನೇತೃತ್ವದಲ್ಲಿ ಹಾಗೂ ಬೀಟ್ ಮಟ್ಟದಲ್ಲಿ ಒಟ್ಟು 138 ಶಾಂತಿ ಸಭೆಗಳನ್ನು ನಡೆಸಲಾಗಿದೆ. ಗಣೇಶ ವಿಸರ್ಜನೆಯ ಪ್ರಮುಖ ದಿನಗಳಲ್ಲಿ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ಕೊಪ್ಪಳ, ಗಂಗಾವತಿ ಹಾಗೂ ಕನಕಗಿರಿ ಪಟ್ಟಣಗಳ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್ ಪಥಸಂಚಲನ (ಫ್ಲ್ಯಾಗ್ ಮಾರ್ಚ್) ನಡೆಸಲಾಗಿದೆ.

ಗೌರಿ-ಗಣೇಶ ಹಬ್ಬವನ್ನು ಶಾಂತಿಯುತವಾಗಿ ಆಚರಿಸಲು ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕು. ಯಾವುದೇ ತುರ್ತು ಪರಿಸ್ಥಿತಿ ಅಥವಾ ಪ್ರಮುಖ ಮಾಹಿತಿಗಾಗಿ ಸಾರ್ವಜನಿಕರು 112 ಸಹಾಯವಾಣಿಗೆ ಕರೆ ಮಾಡುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಾಹಿಲ್ ಬಾಗ್ಲಾ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಹೇಮಂತ್ ಕುಮಾರ್, ಪಿ.ಐ ಸುರೇಶ್ ಡಿ, ಪಿ.ಎಸ್.ಐ ರೇವಣ್ಣ ಗುರಿಕಾರ್ , ಸೇರಿದಂತೆ ಇತರೆ ಪೊಲೀಸ್ ಅಧಿಕಾರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor