ಕೊಪ್ಪಳ ವಿಶ್ವವಿದ್ಯಾಲಯವನ್ನು ಯಾವುದೇ ಕಾರಣಕ್ಕೂ ಮುಚ್ಚಬಾರದು : ಪೀರ್ ಲಟಗೇರಿ ಒತ್ತಾಯ
ಕೊಪ್ಪಳ : ಕಳೆದ ವರ್ಷ ಆರಂಭವಾದ ಹತ್ತು ಹೊಸ ವಿಶ್ವವಿದ್ಯಾನಿಲಯಗಳ ಪೈಕಿ 9 ವಿಶ್ವದ್ಯಾನಿಲಯಗಳನ್ನು ಮುಚ್ಚಲು ಸರ್ಕಾರ ನಿರ್ಧರಿಸಿದೆ ಎಂಬ ಮಾಹಿತಿಗಳಿದ್ದು, ಕೊಪ್ಪಳ ವಿಶ್ವವಿದ್ಯಾಲಯವನ್ನು ಯಾವುದೇ ಕಾರಣಕ್ಕೂ ಮುಚ್ಚಬಾರದು ಎಂದು ಎಸ್ಐಒ ( ಸ್ಟೂಡೆಂಟ್ ಇಸ್ಲಾಮಿಕ್ ಅಗ್ರನೈಜೇಶನ್ ಆಪ್ ಇಂಡಿಯಾ) ಸಂಘಟನೆಯ ರಾಜ್ಯ ಸಲಹಾ ಸಮಿತಿಯ ಸದ್ಯಸ್ಯ ಪೀರ್ ಲಟಗೇರಿ ಅವರು ಹೇಳಿದರು.
ಇಂದು ಕೊಪ್ಪಳದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ ಅವರು, ವಿದ್ಯಾರ್ಥಿ ಸಂಘಟನೆಯಾಗಿ ನಾವು ಈ ನಿರ್ಧಾರವನ್ನು ಖಂಡಿಸುತ್ತೇವೆ. ಈ ವಿಶ್ವವಿದ್ಯಾಲಯಗಳಲ್ಲಿ ನಮ್ಮ ಕೊಪ್ಪಳ ವಿಶ್ವವಿದ್ಯಾನಿಲಯವೂ ಸೇರಿದೆ, ವಿದ್ಯಾರ್ಥಿಗಳನ್ನು ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹಿಸಬೇಕಾದ ಸರ್ಕಾರಗಳು ವಿಶ್ವವಿದ್ಯಾನಿಲಯಗಳನ್ನು ಸ್ಥಗಿತಗೊಳಿಸುವ ನಿರ್ಧಾರಗಳನ್ನು ತೆಗೆದುಕೊಳ್ಳುವುದು ಉತ್ತಮ ಬೆಳವಣಿಗೆಯಲ್ಲ ಎಂದರು.
ಕೊಪ್ಪಳ ವಿಶ್ವವಿದ್ಯಾಲಯದಲ್ಲಿ ಸದ್ಯ 40ಕ್ಕೂ ಹೆಚ್ಚು ಮಹಾ ವಿದ್ಯಾಲಯಗಳು ಒಳಗೊಂಡಿದ್ದು, ಸುಮಾರು 14000 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ. ಉನ್ನತ ಶಿಕ್ಷಣದಲ್ಲಿ ಹಿಂದುಳಿದಿರುವ ಕೊಪ್ಪಳ ಜಿಲ್ಲೆಯು ಸರ್ಕಾರದ ಈ ನಿರ್ಧಾರದಿಂದ ಮತ್ತಷ್ಟು ಹಿಂದೆ ಉಳಿಯುವ ಸಾಧ್ಯತೆಯಿದೆ ಎಂದು ಹೇಳಿದರು.
ಈ ಹಿಂದೆ ಬಳ್ಳಾರಿ ವಿಶ್ವವಿದ್ಯಾನಿಲಯ ಇದ್ದಾಗ ಸಣ್ಣ ಪುಟ್ಟ ಕೆಲಸಗಳಿಗೆ ಬಳ್ಳಾರಿಗೆ ಹೋಗಬೇಕಾಗಿತ್ತು. ಆದರೆ ಕೊಪ್ಪಳ ವಿಶ್ವವಿದ್ಯಾನಿಲಯ ಆದಾಗ ಆ ತೊಂದರೆ ಇರಲಿಲ್ಲ. ಒಂದು ವೇಳೆ ವಿಶ್ವವಿದ್ಯಾನಿಲಯ ಮುಚ್ಚಿದರೆ ವಿದ್ಯಾರ್ಥಿಗಳಿಗೆ ವಿಶೇಷವಾಗಿ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ತೊಂದರೆಯಾಗುತ್ತದೆ. ಹೀಗಾಗಿ ಸರ್ಕಾರ ತಕ್ಷಣ ಈ ನಿರ್ಧಾರವನ್ನು ಕೈಬಿಡಬೇಕು ಮತ್ತು ಕೊಪ್ಪಳ ವಿಶ್ವವಿದ್ಯಾನಿಲಯವನ್ನು ಸಶಕ್ತಗೊಳಿಸಲು ಅಗತ್ಯ ಅನುದಾನ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿ ಅಬೂಬಕ್ಕರ್, ಜಿಲ್ಲಾಧ್ಯಕ್ಷ ಪುರ್ಕಾನ್ ಅಲಿ, ಘಟಕಾದ್ಯಕ್ಷ ನಬೀಲ್ ಉಮ್ರಿ, ಜಿಲ್ಲಾ ಕಾರ್ಯದರ್ಶಿ ಖಜಹುಸೇನ್ ಡಂಬಲ್ ಉಪಸ್ಥಿತರಿದ್ದರು.