Kuknoor | ಕ್ರೀಡೆ ವಿದ್ಯಾರ್ಥಿಗಳಲ್ಲಿ ನಾಯಕತ್ವ, ಶಿಸ್ತು ಬೆಳೆಸುತ್ತದೆ: ಈರಣ್ಣ ಹಳ್ಳಿಕೇರಿ

Update: 2026-08-05 20:31 IST

ಕುಕನೂರು : ಕ್ರೀಡೆ ವಿದ್ಯಾರ್ಥಿಗಳಲ್ಲಿ ನಾಯಕತ್ವ, ಆತ್ಮವಿಶ್ವಾಸ ಹಾಗೂ ಶಿಸ್ತಿನ ಗುಣಗಳನ್ನು ಬೆಳೆಸುತ್ತದೆ. ಯುವಜನರು ದುಶ್ಚಟಗಳಿಂದ ದೂರವಿದ್ದು ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಮಾಜಿ ಎಪಿಎಂಸಿ ಅಧ್ಯಕ್ಷ ಈರಣ್ಣ ಹಳ್ಳಿಕೇರಿ ಹೇಳಿದರು.

ತಾಲೂಕಿನ ಮಂಗಳೂರಿನ ಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆಪಿಎಸ್)ನಲ್ಲಿ ಬುಧವಾರ ನಡೆದ 2026–27ನೇ ಸಾಲಿನ ಮಗಳೂರು ವಲಯ ಮಟ್ಟದ ಪ್ರೌಢಶಾಲೆಗಳ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಯಲಬುರ್ಗಾ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀನಿವಾಸ್ ಬನ್ನಿಗೋಳ ಮಾತನಾಡಿ, ಶಿಕ್ಷಣ ಇಲಾಖೆಯ ಕಾರ್ಯಕ್ರಮಗಳ ಯಶಸ್ಸಿಗೆ ಸ್ಥಳೀಯ ಸಮುದಾಯದ ಸಹಕಾರ ಅತ್ಯಗತ್ಯವಾಗಿದೆ. ಗ್ರಾಮಸ್ಥರು, ಹಿರಿಯರು ಹಾಗೂ ಯುವಕರು ನೀಡಿದ ಸಹಕಾರದಿಂದ ಕ್ರೀಡಾಕೂಟ ಯಶಸ್ವಿಯಾಗಿ ನಡೆಯುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕ್ರೀಡೆ ಕೇವಲ ಮನರಂಜನೆಗೆ ಸೀಮಿತವಲ್ಲ. ಅದು ಶಿಸ್ತು, ಸಂಯಮ, ಸವಾಲುಗಳನ್ನು ಎದುರಿಸುವ ಸಾಮರ್ಥ್ಯ ಹಾಗೂ ಸರಿ-ತಪ್ಪಿನ ಅರಿವನ್ನು ಬೆಳೆಸುತ್ತದೆ. ಕ್ರೀಡಾಪಟುಗಳು ಅಂಪೈರ್‌ಗಳ ತೀರ್ಪನ್ನು ಗೌರವಿಸಿ, ಸೋಲು-ಗೆಲುವಿಗಿಂತ ಭಾಗವಹಿಸುವಿಕೆಗೆ ಹೆಚ್ಚಿನ ಮಹತ್ವ ನೀಡಬೇಕು ಎಂದು ಸಲಹೆ ನೀಡಿದರು.

ವಲಯ ಮಟ್ಟದಲ್ಲಿ ಉತ್ತಮ ಸಾಧನೆ ಮಾಡುವ ಕ್ರೀಡಾಪಟುಗಳು ತಾಲೂಕು, ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲೂ ಸಾಧನೆ ಮಾಡಿ ಶಾಲೆ ಹಾಗೂ ಗ್ರಾಮದ ಕೀರ್ತಿಯನ್ನು ಹೆಚ್ಚಿಸಬೇಕು ಎಂದು ಗಣ್ಯರು ಹಾರೈಸಿದರು.

ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಯಲಬುರ್ಗಾ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯದ ಸಂಯುಕ್ತ ಆಶ್ರಯದಲ್ಲಿ ಕ್ರೀಡಾಕೂಟ ಆಯೋಜಿಸಲಾಗಿತ್ತು.

ಮುಖ್ಯ ಶಿಕ್ಷಕ ಹನುಮಂತಪ್ಪ ಎ.ಎಚ್., ಪ್ರಭಾರಿ ದೈಹಿಕ ಶಿಕ್ಷಣಾಧಿಕಾರಿ ಶರಣಪ್ಪ ವೀರಾಪುರ, ಎಸ್‌ಡಿಎಂಸಿ ಉಪಾಧ್ಯಕ್ಷ ಅನಿಲ್ ಕುಮಾರ್ ಕಲ್ಬಾವಿ, ಪಿಎಸ್‌ಐ ಸಂಗನಗೌಡ, ಪಿಡಿಓ ನೀಲಂ ಚಳ್ಳಗೆರೆ, ಉಮೇಶ್ ಕಂಬಳಿ, ಬಸವರಾಜ ಮೇಟಿ, ಸಕ್ರಪ್ಪ ಚಿನ್ನೂರು ಸೇರಿದಂತೆ ಹಲವರು ಉಪಸ್ಥಿತರಿದ್ದರು. ಮಗಳೂರು ವಲಯದ 9 ಶಾಲೆಗಳ ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News