ಕುಕನೂರು: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದಲ್ಲಿ ಸಾಲು ಸಾಲು ಹಗರಣಗಳು ನಡೆಯುತ್ತಿವೆ ಎಂದು ಮಾಜಿ ಸಚಿವ ಹಾಲಪ್ಪ ಆಚಾರ್ ಆರೋಪಿಸಿದರು.

ತಾಲೂಕಿನ ಮಸಬಹಂಚಿನಾಳ ಗ್ರಾಮದ ಗ್ರಾನೈಟ್ ಫ್ಯಾಕ್ಟರಿಯಲ್ಲಿ ಶನಿವಾರ ಬಿಜೆಪಿ ತಾಲೂಕು ಮಂಡಲದ ವತಿಯಿಂದ ಆಯೋಜಿಸಿದ್ದ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್‌) ಎರಡನೇ ಹಂತದ ಕಾರ್ಯಕರ್ತರ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿಯೊಬ್ಬ ನಾಗರಿಕರೂ ಪ್ರಾಮಾಣಿಕವಾಗಿ ಮತದಾನದ ಹಕ್ಕು ಚಲಾಯಿಸಬೇಕು ಎಂಬ ಉದ್ದೇಶದಿಂದ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಕೈಗೊಂಡಿದ್ದಾರೆ. ನಕಲಿ ಹಾಗೂ ಸುಳ್ಳು ಮತದಾರರ ಹೆಸರುಗಳನ್ನು ತೆಗೆದುಹಾಕುವ ಪ್ರಕ್ರಿಯೆಯಲ್ಲಿ ಬಿಎಲ್‌ಎ–2 ಕಾರ್ಯಕರ್ತರ ಪಾತ್ರ ಮಹತ್ವದ್ದಾಗಿದೆ. ಈ ಮೂಲಕ ಪರಿಷ್ಕೃತ ಮತದಾರರ ಪಟ್ಟಿ ಸಿದ್ಧವಾಗಲಿದೆ ಎಂದು ಹೇಳಿದರು.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಸೇರಿದಂತೆ ಹಲವು ಹಗರಣಗಳು ನಡೆದಿವೆ. ಜವಾಬ್ದಾರಿಯಿಲ್ಲದ ನಾಗೇಂದ್ರ ಅವರಿಗೆ ಸಚಿವ ಸ್ಥಾನ ನೀಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಂಡತನದ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಜಿಲ್ಲೆ ಈ ಬಾರಿ ತೀವ್ರ ಬರಗಾಲಕ್ಕೆ ತುತ್ತಾಗಿದ್ದರೂ ಕ್ಷೇತ್ರದ ಶಾಸಕರು ಸಾರ್ವಜನಿಕರ ಸಂಕಷ್ಟವನ್ನು ನಿರ್ಲಕ್ಷಿಸಿದ್ದಾರೆ. ಬಿಜೆಪಿ ಆಡಳಿತದ ಅವಧಿಯಲ್ಲಿ ಕ್ಷೇತ್ರದ ಕೆರೆಗಳನ್ನು ತುಂಬಿಸಿ ರೈತರ ಹಿತ ಕಾಪಾಡಲಾಗಿತ್ತು. ಆದರೆ ಪಕ್ಕದ ಬೇಣಕಲ್ ಕೆರೆಗೆ ನೀರು ಹರಿಸುವ ಸಣ್ಣ ಕೆಲಸವನ್ನೂ ಈಗಿನ ಸರ್ಕಾರಕ್ಕೆ ಮಾಡಲು ಸಾಧ್ಯವಾಗಿಲ್ಲ ಎಂದು ದೂರಿದರು.

ಕ್ಷೇತ್ರದ ಜನರು ತಮ್ಮ ಹಕ್ಕನ್ನು ಕೇಳಬೇಕು. ಮುಂಬರುವ ದಿನಗಳಲ್ಲಿ ಜನರೇ ಕಾಂಗ್ರೆಸ್‌ಗೆ ತಕ್ಕ ಉತ್ತರ ನೀಡಲಿದ್ದಾರೆ. ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನಾಯಕತ್ವದಲ್ಲಿ ನಡೆಯುತ್ತಿರುವ ಹೋರಾಟಗಳಲ್ಲಿ ಸಕ್ರಿಯವಾಗಿ ಭಾಗವಹಿಸಲಾಗುವುದು ಎಂದು ಹಾಲಪ್ಪ ಆಚಾರ್ ಹೇಳಿದರು.

ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಮಾರುತಿ ಹೊಸಮನಿ, ಮುಖಂಡರಾದ ಬಸಲಿಂಗಪ್ಪ ಭೂತೆ, ವಿಶ್ವನಾಥ ಮರಿಬಸಪ್ಪನವರ, ಶಿವಕುಮಾರ ನಾಗಲಾಪುರಮಠ, ವೀರಣ್ಣ ಹೊಂಬಾಳಿ, ಸುರಪುರ, ಜಿಲ್ಲಾ ಉಪಾಧ್ಯಕ್ಷ ಮಹೇಶ್, ಹಂಚಾಳಪ್ಪ ತಳವಾರ, ವೀರಣ್ಣ ಹುಬ್ಬಳ್ಳಿ, ಶರಣಪ್ಪ ಇಳಿಗೇರ ಸೇರಿದಂತೆ ಹಲವರು ಇದ್ದರು.

ಚಿತ್ರಶೀರ್ಷಿಕೆ: ಕುಕನೂರು ತಾಲ್ಲೂಕಿನ ಮಸಬಹಂಚಿನಾಳದಲ್ಲಿ ಶನಿವಾರ ನಡೆದ ಬಿಜೆಪಿ ಎಸ್‌ಐಆರ್‌ ಕಾರ್ಯಕರ್ತರ ಕಾರ್ಯಾಗಾರದಲ್ಲಿ ಮಾಜಿ ಸಚಿವ ಹಾಲಪ್ಪ ಆಚಾರ್ ಮಾತನಾಡಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor