ಕೊಪ್ಪಳ|ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರಿಗೆ ಸ್ಪರ್ಧಾ ಕಾರ್ಯಕ್ರಮ
ಯಲಬುರ್ಗಾ: ತಾಲೂಕು ಮಟ್ಟದ ಸರಕಾರಿ ಹಾಗೂ ಅನುದಾನಿತ, ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರಿಗಾಗಿ ಸಹಪಠ್ಯ ಚಟುವಟಿಕೆಗಳ ಸ್ಪರ್ಧಾ ಕಾರ್ಯಕ್ರಮವು ಹೊಸಳ್ಳಿಯ ಕಿತ್ತೂರು ಚೆನ್ನಮ್ಮ ವಸತಿ ಶಾಲೆಯಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಪ್ರಬಂಧ ಸ್ಪರ್ಧೆ, ಭಾಷಣ ಸ್ಪರ್ಧೆ, ಚಿತ್ರ ಬಿಡಿಸುವ ಸ್ಪರ್ಧೆ, ಪಾಠೋಪಕರಣ ತಯಾರಿಕಾ ಸ್ಪರ್ಧೆ, ಆಶುಭಾಷಣ, ಭಕ್ತಿ ಗೀತೆ, ರಸಪ್ರಶ್ನೆ ಸಾಮಾನ್ಯ ಜ್ಞಾನ ಹಾಗೂ ವಿಜ್ಞಾನ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ತಾಲೂಕಿನ ವಿವಿಧ ಶಾಲೆಗಳ ಶಿಕ್ಷಕರು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ್ ಗೌಡ, "ಶಿಕ್ಷಕರಲ್ಲಿ ಅಡಗಿರುವ ಪ್ರತಿಭೆಯನ್ನು ವೇದಿಕೆಗೆ ತರುವುದು ಈ ಸ್ಪರ್ಧೆಗಳ ಉದ್ದೇಶ. ಇಂತಹ ಚಟುವಟಿಕೆಗಳು ವಿದ್ಯಾರ್ಥಿಗಳಿಗೆ ಕೂಡ ಸ್ಫೂರ್ತಿ ಆಗುತ್ತವೆ" ಎಂದು ಹೇಳಿದರು.
ತಾಲೂಕು ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸುರೇಶ ಅಬ್ಬಿಗೇರಿ, ಪ್ರಾಥಮಿಕ ಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಎಸ್.ವಿ. ಧರಣ ಸೇರಿದಂತೆ ಹಲವರು ಈ ವೇಳೆ ಉಪಸ್ಥಿತರಿದ್ದರು.