Mandya | ತಮಿಳುನಾಡಿಗೆ ನೀರು ಹರಿಸಲು ಸೂಚನೆ ಖಂಡಿಸಿ ರೈತ, ಕನ್ನಡಪರ ಸಂಘಟನೆಗಳ ಕಾರ್ಯಕರ್ತರಿಂದ ಪ್ರತಿಭಟನೆ

Update: 2026-07-28 19:22 IST

ಮಂಡ್ಯ : ಮುಂದಿನ 15 ದಿನಗಳವರೆಗೆ ತಮಿಳುನಾಡಿಗೆ ನಿತ್ಯ 3,500 ಕ್ಯೂಸೆಕ್ ನೀರು ಹರಿಸಲು ಕಾವೇರಿ ನೀರು ನಿಯಂತ್ರಣ ಸಮಿತಿ ರಾಜ್ಯ ಸರಕಾರಕ್ಕೆ ಸೂಚನೆ ನೀಡರುವುದನ್ನು ಖಂಡಿಸಿ ರೈತ ಮತ್ತು ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದರು.

ಮಳೆ ಇಲ್ಲದೆ ರಾಜ್ಯದಲ್ಲಿ ಬರ ಭೀತಿ ಎದುರಾಗಿದೆ. ಕಾವೇರಿಕೊಳ್ಳದ ನಾಲ್ಕು ಜಲಾಶಯಗಳಲ್ಲಿ ಕುಡಿಯಲೂ ಸಾಕಾಗುವಷ್ಟು ನೀರು ಸಂಗ್ರಹವಿಲ್ಲ. ಇಂತಹ ಪರಿಸ್ಥಿತಿಯಲ್ಲೂ ತಮಿಳುನಾಡಿಗೆ ನೀರು ಹರಿಸುವಂತೆ ಸೂಚನೆ ನೀಡಿರುವುದು ಅತ್ಯಂತ ಖಂಡನೀಯ ಎಂದು ಸಂಜಯ ವೃತ್ತದಲ್ಲಿ ಒಣಗಿದ ಕಬ್ಬು ಪ್ರದರ್ಶಿಸಿ ಆಕ್ರೋಶ ವ್ಯಕ್ತಪಡಿಸಿದರು.

ಕಾವೇರಿ ನೀರು ನಿಯಂತ್ರಣ ಸಮಿತಿಯ ಆದೇಶ ನಮ್ಮ ಜನರಿಗೆ ಮರಣ ಶಾಸನವಾಗಿದೆ. ಪ್ರತಿ ಬಾರಿ ಕಾವೇರಿ ವಿಚಾರದಲ್ಲಿ ಕನ್ನಡಿಗರಿಗೆ ಅನ್ಯಾಯವಾಗುತ್ತಲೇ ಇದ್ದು, ಎಲ್ಲ ಶಾಸಕರು ಮತ್ತು ಸಂಸದರು ವಿವಾದ ಬಗೆಹರಿಸುವ ನಿಟ್ಟಿನಲ್ಲಿ ಬದ್ದತೆಯನ್ನು ಪ್ರದರ್ಶಿಸಬೇಕು ಎಂದು ಅವರು ಒತ್ತಾಯಿಸಿದರು.

ಕಾವೇರಿ ನೀರು ನಿಯಂತ್ರಣ ಸಮಿತಿ ಮತ್ತು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಗಳು ವಾಸ್ತವದ ನೆಲೆಗಟ್ಟಿನಲ್ಲಿ ತಮ್ಮ ಸೂಚನೆ, ಆದೇಶ ನೀಡಬೇಕು. ಆದರೆ, ಜಲಾಶಯಗಳಲ್ಲಿ ನೀರು ಇಲ್ಲದೆ ಇದ್ದಾಗಲೂ ನೀರು ಹರಿಸಲು ಆದೇಶಿಸುವುದು ಅವೈಜ್ಞಾನಿಕ ಕ್ರಮವಾಗಿದೆ ಎಂದು ಕಿಡಿಕಾರಿದರು.

ಕೃಷ್ಣರಾಜಸಾಗರ ಜಲಾಶಯದಲ್ಲಿ ಕೇವಲ 17.039 ಟಿಎಂಸಿ (ಗರಿಷ್ಠಮಟ್ಟ 49.452 ಟಿಎಂಸಿ) ನೀರು ಸಂಗ್ರಹವಿದೆ. ಒಳ ಹರಿವಿನ ಪ್ರಮಾಣವೂ ಕಡಿಮೆ ಇದೆ. ಬೆಳೆಗಳು ಒಣಗಿ ಹೋಗಿವೆ. ಇಂತಹ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ ನೀರು ಹರಿಸುವುದು ಹೇಗೆ ಸಾಧ್ಯ? ಎಂದು ಅವರು ಬೇಸರ ವ್ಯಕ್ತಪಡಿಸಿದರು.

ರಾಜ್ಯ ಸರಕಾರ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಹರಿಸಬಾರದು. ರಾಜ್ಯದ ಶಾಸಕರು, ಸಂಸದರು ಪಕ್ಷಾತೀತವಾಗಿ ರಾಜ್ಯದ ಪರವಾಗಿ ನಿಲ್ಲಬೇಕು. ರಾಜ್ಯಕ್ಕೆ ಆಗುತ್ತಿರುವ ಅನ್ಯಾಯವನ್ನು ಖಂಡಿಸಬೇಕು ಎಂದು ಅವರು ಆಗ್ರಹಿಸಿದರು.

ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ವೇದಿಕೆ ಅಧ್ಯಕ್ಷ ಎಲ್.ಸಂದೇಶ್, ಕರುನಾಡ ಸೇವಕರು ಸಂಘಟನೆಯ ಎಂ.ಬಿ.ನಾಗಣ್ಣಗೌಡ, ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಎಚ್.ಡಿ.ಜಯರಾಂ, ಆಟೋ ಸೋಮಶೇಖರ್, ಎಸ್.ಪಿ.ನಾರಾಯಣಸ್ವಾಮಿ, ಚಂದ್ರು ಹನಕೆರೆ, ಗೋವಿಂದರಾಜು, ರಮೇಶ್, ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News