ಮಂಡ್ಯದಲ್ಲಿ ತೀವ್ರಗೊಂಡ ಕಾವೇರಿ ಹೋರಾಟ; ತಮಿಳುನಾಡು ಸಿಎಂ ಚಿತ್ರದ ಪೋಸ್ಟರ್ ಹರಿದು ಆಕ್ರೋಶ

ರೈತ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ರಸ್ತೆಯಲ್ಲಿ ಧರಣಿ

Update: 2026-07-30 18:54 IST

ಮಂಡ್ಯ : ತಮಿಳುನಾಡಿಗೆ ನೀರು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶದ ವಿರುದ್ಧ ಜಿಲ್ಲೆಯಲ್ಲಿ ಕಾವೇರಿ ಹೋರಾಟ ಮೂರನೇ ದಿನವಾದ ಗುರುವಾರವೂ ಮುಂದುವರಿದಿದ್ದು, ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಪ್ರತ್ಯೇಕವಾಗಿ ಪ್ರತಿಭಟನೆ ನಡೆಸಿದ ಕರುನಾಡ ವಿಜಯ ಸೇನೆ ಸಂಘಟನೆಯ ಕಾರ್ಯಕರ್ತರು, ಗುರುಶ್ರೀ ಚಿತ್ರಮಂದಿರಕ್ಕೆ ಮುತ್ತಿಗೆ ಹಾಕಿ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ನಾಯಕ ನಟನಾಗಿರುವ ‘ಜನನಾಯಗನ್' ಚಿತ್ರದ ಪ್ರದರ್ಶನವನ್ನು ರದ್ದುಪಡಿಸುವಂತೆ ಆಗ್ರಹಿಸಿದರು.

ಇದೇ ವೇಳೆ ಚಿತ್ರಮಂದಿರದ ಮುಂಭಾಗದ ಪ್ರದರ್ಶಿಸಿದ್ದ ಸಿನಿಮಾದ ಪೋಸ್ಟರ್ ಅನ್ನು ಹರಿದು ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಹೋರಾಟಗಾರರ ಮನವಿಗೆ ಸ್ಪಂದಿಸಿದ ಚಿತ್ರಮಂದಿರ ಆಡಳಿತ ಮಂಡಳಿ ಜೋಸೆಫ್ ವಿಜಯ್ ಅವರ ಚಿತ್ರಪ್ರದರ್ಶವನ್ನು ರದ್ದುಗೊಳಿಸಿದರು.

ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದ ಪ್ರತಿಭಟನಾಕಾರರು, ನಮ್ಮಲ್ಲಿ ಕುಡಿಯಲೂ ನೀರಿಲ್ಲದ ಕಾರಣ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಹರಿಸುವ ತೀರ್ಮಾನವನ್ನು ತೆಗೆದುಕೊಳ್ಳಬಾರದು. ಕಾವೇರಿ ನೀರು ನಿಯಂತ್ರಣಾ ಸಮಿತಿಯ ಶಿಫಾರಸ್ಸನ್ನು ಪಾಲಿಸಲು ಸಾಧ್ಯವಿಲ್ಲವೆಂದು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಸಮರ್ಥವಾಗಿ ಮಂಡಿಸಬೇಕು ಎಂದು ಒತ್ತಾಯಿಸಿದರು.

ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಕಾರ್ಯಕರ್ತರು ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಕುಳಿತು ಧರಣಿ ನಡೆಸಿ ವಾಹನ ಸಂಚಾರಕ್ಕೆ ಅಡ್ಡಿಪಡಿಸಿದರು. ಪೊಲೀಸರು ಆಗಮಿಸಿ ಪ್ರತಿಭಟನಾಕಾರರನ್ನು ರಸ್ತೆಯಿಂದ ಹೊತ್ತೊಯ್ದು ಬೇರೆ ಸ್ಥಳಕ್ಕೆ ಬಿಟ್ಟು, ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಸಂಘಟನಾ ಕಾರ್ಯದರ್ಶಿ ಸುನಂದಾ ಜಯರಾಂ ಮಾತನಾಡಿದರು.

ಶ್ರೀರಂಗಪಟ್ಟಣದಲ್ಲಿ ಭೂಮಿತಾಯಿ ಹೋರಾಟ ಸಮಿತಿ ಕಾರ್ಯಕರ್ತರು ಕಾವೇರಿ ನದಿಗೆ ಇಳಿದು ಪ್ರತಿಭಟನೆ ನಡೆಸಿದರು. ಕೆಆರ್‌ಎಸ್‌ನಿಂದ ತಮಿಳುನಾಡಿಗೆ ನೀರು ಬಿಡುಗಡೆ ಮಾಡಲಾಗುತ್ತಿದ್ದು, ಕೂಡಲೇ ನಿಲುಗಡೆ ಮಾಡಬೇಕು ಎಂದು ಒತ್ತಾಯಿಸಿದದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News