Mandya | ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯಕ್ಕೆ ಖಂಡನೆ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಪ್ರತಿಕೃತಿ ದಹಿಸಿ ಆಕ್ರೋಶ
ಮಂಡ್ಯ : ನೀಟ್ ಪರೀಕ್ಷಾ ಅಕ್ರಮದ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ವಿವಿಧ ಸಂಘಟನೆಗಳ ಕಾರ್ಯಕರ್ತರು ಗುರುವಾರ ಧರ್ಮೇಂದ್ರ ಪ್ರಧಾನ್ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.
ನಗರದ ಸಂಜಯ ವೃತ್ತದಲ್ಲಿ ಜಮಾವಣೆಗೊಂಡ ವಿವಿಧ ಸಂಘಟನೆಗಳ ಮುಖಂಡರು, ಕೇಂದ್ರ ಸರಕಾರ ಮತ್ತು ಸಚಿವರ ವಿರುದ್ಧ ಘೋಷಣೆ ಕೂಗಿದರು. ಅಸಂಖ್ಯಾತ ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಿದ್ದು, ಇದರ ಹೊಣೆ ಹೊತ್ತು ಸಚಿವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಪ್ರತಿಕೃತಿ ದಹನಕ್ಕೆ ಪೊಲೀಸರು ತಡೆಯೊಡ್ಡಿದಾಗ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆದು ತಳ್ಳಾಟ, ನೂಕಾಟ ಉಂಟಾಯಿತು. ಆದರೂ ಪ್ರತಿಭಟನಾಕಾರರು ಪ್ರತಿಕೃತಿಯನ್ನು ದಹಿಸಿದರು.
ನೀಟ್ ಪರೀಕ್ಷಾ ಅಕ್ರಮದಿಂದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಿದೆ. ಕೇಂದ್ರ ಸರಕಾರದ ಬೇಜವಾಬ್ದಾರಿ ಧೋರಣೆ ವಿರುದ್ಧ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸುವ ಮೂಲಕ ಕ್ರೌರ್ಯತೆಯನ್ನು ಮೆರೆಯಲಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
22 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳ ಭವಿಷ್ಯವೇ ಆಗಿರುವ ನೀಟ್ ಪರೀಕ್ಷಾ ಹಗರಣದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಮೌನ ವಹಿಸಿದ್ದಾರೆ. ತಪ್ಪಿತಸ್ಥರನ್ನು ಶಿಕ್ಷಿಸುವ ಪ್ರಯತ್ನ ಮಾಡಲಿಲ್ಲ. ಕೇಂದ್ರ ಸಚಿವರ ರಾಜೀನಾಮೆಯನ್ನೂ ಪಡೆಯಲಿಲ್ಲ. ಇದು ಕೇಂದ್ರ ಸರಕಾರದ ವಿದ್ಯಾರ್ಥಿ ವಿರೋಧಿ ಧೋರಣೆಯನ್ನು ಪ್ರದರ್ಶಿಸುತ್ತದೆ ಎಂದು ಅವರು ಕಿಡಿಕಾರಿದರು.
ದೆಹಲಿಯಲ್ಲಿ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಪೊಲೀಸ್ ವೇಷದ ಹಲವು ಖಾಸಗಿ ವ್ಯಕ್ತಿಗಳು ದೌರ್ಜನ್ಯ ಎಸಗಿದ್ದು, ಈ ಬಗ್ಗೆ ಸಮಗ್ರವಾದ ತನಿಖೆಯಾಗಬೇಕು. ನೀಟ್ ಪರೀಕ್ಷೆ ರದ್ದುಪಡಿಸಬೇಕು. ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಯನ್ನು ಪಡೆಯಬೇಕು. ಇಲ್ಲದಿದ್ದರೆ ಪ್ರತಿಭಟನೆಯನ್ನು ತೀವ್ರಗೊಳಿಸಲಾಗುವುದು ಎಂದು ಅವರು ಎಚ್ಚರಿಸಿದರು.
ವಿವಿಧ ಸಂಘಟನೆಗಳ ಮುಖಂಡರಾದ ಎಂ.ವಿ.ಕೃಷ್ಣ, ಟಿ.ಎಲ್.ಕೃಷ್ಣೇಗೌಡ, ಎಂ.ಬಿ.ನಾಗಣ್ಣಗೌಡ, ಎಚ್.ಡಿ.ಜಯರಾಂ, ಎಲ್.ಸಂದೇಶ್, ಎನ್.ದೊಡ್ಡಯ್ಯ, ಸಿ.ಕುಮಾರಿ, ನಿರಂಜನ್, ಎಸ್.ಪಿ.ನಾರಾಯಣಸ್ವಾಮಿ ಸೇರಿದಂತೆ ಇತರ ಮುಖಂಡರು ಹಾಗೂ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.