ಹೊಟ್ಟೆಯಲ್ಲಿರುವಾಗಲೇ ಮಗುವಿನ ವಾಕ್, ಶ್ರವಣ ಸಮಸ್ಯೆ ಪತ್ತೆ ಹಚ್ಚಲು ಸಾಧ್ಯವಾಗಿರುವುದು ನಿಜಕ್ಕೂ ದೊಡ್ಡ ಸಾಧನೆ : ಸಿಎಂ ಸಿದ್ದರಾಮಯ್ಯ
ಅಖಿಲ ಭಾರತ ವಾಕ್-ಶ್ರವಣ ಸಂಸ್ಥೆಯ ʼವಜ್ರ ಮಹೋತ್ಸವʼ ಕಾರ್ಯಕ್ರಮ
ಮೈಸೂರು: ಹೊಟ್ಟೆಯಲ್ಲಿರುವಾಗಲೇ ಮಗುವಿನ ವಾಕ್ ಮತ್ತು ಶ್ರವಣ ಸಮಸ್ಯೆ ಪತ್ತೆ ಹಚ್ಚಲು ಸಾಧ್ಯವಾಗಿರುವುದು ನಿಜಕ್ಕೂ ದೊಡ್ಡ ಸಾಧನೆ. ಇದಕ್ಕಾಗಿ ಮೈಸೂರಿನ ವಾಕ್ ಮತ್ತು ಶ್ರವಣ ಸಂಸ್ಥೆ ಅಭಿನಂದನೀಯವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ನುಡಿದರು.
ಅಖಿಲ ಭಾರತ ವಾಕ್-ಶ್ರವಣ ಸಂಸ್ಥೆ (ಆಯಿಷ್) ಮೈಸೂರು ಇವರ ವತಿಯಿಂದ ಆಯೋಜಿಸಿದ್ದ ಅಖಿಲ ಭಾರತ ವಾಕ್-ಶ್ರವಣ ಸಂಸ್ಥೆಯ “ವಜ್ರ ಮಹೋತ್ಸವ ಕಾರ್ಯಕ್ರಮ”ದಲ್ಲಿ ಮಾತನಾಡಿದರು.
ಈ ಕ್ಷೇತ್ರದಲ್ಲಿ ಇನ್ನಷ್ಟು ಸಾಧನೆ ಮತ್ತು ಪ್ರಗತಿ ಕಾಣಬೇಕಾಗಿದೆ. ಇದಕ್ಕಾಗಿ ನಮ್ಮ ಸರ್ಕಾರ ಈಗಾಗಲೇ 10 ಎಕರೆ ಜಾಗ ಒದಗಿಸಿದೆ. ಇಷ್ಟಲ್ಲದೆ ಅಗತ್ಯ ಇರುವ ಎಲ್ಲಾ ನೆರವನ್ನೂ ಒದಗಿಸಲು ನಾವು ಸಿದ್ದರಿದ್ದೇವೆ ಎಂದು ಭರವಸೆ ನೀಡಿದರು.
ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯು (AIISH), ವಾಕ್ ಮತ್ತು ಶ್ರವಣ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಕೆಲಸ ಮಾಡುತ್ತಿರುವ ಏಷ್ಯಾದ ಅತ್ಯುತ್ತಮ ಸಂಸ್ಥೆಗಳಲ್ಲೊಂದಾಗಿರುವುದು ನಮ್ಮ ಜಿಲ್ಲೆಯ ಮತ್ತು ರಾಜ್ಯದ ಹೆಮ್ಮೆ. ಧ್ವನಿಯಿಲ್ಲದವರಿಗೆ ಧ್ವನಿಯಾಗಿರುವ, ಕಿವಿ ಕೇಳದೆ ಮೌನವಾಗಿರುವವರಿಗೆ ಮಾತಿನ ಚೈತನ್ಯ ತುಂಬಿರುವ ಇಂಥ ಸಂಸ್ಥೆಯು ಮೈಸೂರಿನಲ್ಲಿರುವುದು ಹಾಗೂ ವಜ್ರ ಮಹೋತ್ಸವವನ್ನು ಆಚರಿಸಿಕೊಳ್ಳುತ್ತಿರುವುದು ನಮ್ಮೆಲ್ಲರಿಗೂ ಹೆಮ್ಮೆಯ ಸಂಗತಿಯಾಗಿದೆ ಎಂದರು.
ಮನುಷ್ಯರಿಗೆ ದೇಹದ ಎಲ್ಲಾ ಅಂಗಗಳು ಮುಖ್ಯವಾದರೂ ಕಣ್ಣು, ಕಿವಿಗಳು ಅತಿ ಮುಖ್ಯವಾದ ಅಂಗಗಳಾಗಿವೆ. ದೃಷ್ಟಿ ಮತ್ತು ಶಬ್ಧಗಳ ಗ್ರಹಿಕೆಯು ಮನುಷ್ಯರ ಮಾತುಗಳನ್ನು ರೂಪಿಸುತ್ತವೆ ಹಾಗೂ ನಿಯಂತ್ರಿಸುತ್ತವೆ. 2011 ರ ರಾಷ್ಟ್ರೀಯ ಜನಗಣತಿಯ ಪ್ರಕಾರ ರಾಜ್ಯದಲ್ಲಿ 3.3 ಲಕ್ಷ ಜನರು ಮಾತು ಬಾರದವರು ಹಾಗೂ ಕಿವಿ ಕೇಳಿಸದವರಿದ್ದಾರೆ. ಶೇ.0.5 ರಷ್ಟಿರುವ ಈ ಅಸಹಾಯಕರು ನಮಗೆ ಅಂಕಿ ಸಂಖ್ಯೆಗಳಲ್ಲ, ಜೀವಂತ ಮನುಷ್ಯರ ನಿರಂತರ ಕಷ್ಟದ ಉದಾಹರಣೆಗಳು. ಹಾಗಾಗಿ ಈ ಸಮಸ್ಯೆಯಿರುವವರನ್ನು ಅತ್ಯಂತ ಎಚ್ಚರಿಕೆಯಿಂದ ಕಾಪಾಡಿಕೊಳ್ಳುವುದು ನಾಗರಿಕ ಸಮಾಜದ ಹಾಗೂ ಸರ್ಕಾರದ ಜವಾಬ್ದಾರಿಯಾಗಿದೆ ಎಂದರು.
1966ರಲ್ಲಿ ಮೈಸೂರಿನಲ್ಲಿ ಸ್ಥಾಪನೆಯಾದ ಈ ಸಂಸ್ಥೆಯು ವಾಕ್ ಮತ್ತು ಶ್ರವಣ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಮಾನವ ಸಂಪನ್ಮೂಲ ಅಭಿವೃದ್ಧಿ, ಸಂಶೋಧನೆ, ಚಿಕಿತ್ಸೆ, ಪುನರ್ವಸತಿ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲೂ ಸೇವೆ ಒದಗಿಸುತ್ತಿರುವ ಮಹತ್ವದ ರಾಷ್ಟ್ರೀಯ ಸಂಸ್ಥೆಯಾಗಿದೆ ಎಂದರು.
ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮನ್ನಣೆಯನ್ನು ಗಳಿಸಿರುವ ಈ ಸಂಸ್ಥೆಯನ್ನು ವಿಶ್ವ ಆರೋಗ್ಯ ಸಂಸ್ಥೆಯು Centre of Excellence ಎಂದು ಗುರುತಿಸಿದ್ದರೆ, ಕೇಂದ್ರ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು Science and Technology Institute ಎಂದು ಗುರುತಿಸಿರುವುದನ್ನು ಸ್ಮರಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂಸ್ಥೆಯ ಹೊರವಲಯ ಸೇವಾ ಕೇಂದ್ರಗಳು ಮತ್ತು ನವಜಾತ ಶಿಶು ತಪಾಸಣೆ ಘಟಕಗಳಿಗೆ ರಾಜ್ಯ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಜಿಲ್ಲಾ, ತಾಲ್ಲೂಕು ಆಸ್ಪತ್ರೆಗಳಲ್ಲಿ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಸ್ಥಳಾವಕಾಶ ಒದಗಿಸುತ್ತಿದೆ ಎಂದರು.
ನಮ್ಮ ರಾಜ್ಯ ಸರ್ಕಾರದ ಪ್ರಾಯೋಜಿತ ಕಾಕ್ಲಿಯರ್ ಇಂಪ್ಲಾಂಟ್ ಕಾರ್ಯಕ್ರಮವಾದ 'ಶ್ರವಣ ಸಂಜೀವಿನಿ' ಯೋಜನೆಗೆ ರಾಜ್ಯ ಸರ್ಕಾರವು 2024-25ರ ಬಜೆಟ್ಟಿನಲ್ಲಿ ಆರ್ಥಿಕವಾಗಿ ದುರ್ಬಲ ವರ್ಗದ ಮಕ್ಕಳಿಗೆ ದುಬಾರಿ ಕಾಕ್ಲಿಯರ್ ಇಂಪ್ಲಾಂಟ್ ಶಸ್ತ್ರ ಚಿಕಿತ್ಸೆಗಳನ್ನು ಉಚಿತವಾಗಿ ಒದಗಿಸಲು 32 ಕೋಟಿ ರೂಗಳನ್ನು ಮೀಸಲಿಟ್ಟಿದೆ. ಈ ಸಂಸ್ಥೆಯ ಕ್ಲಿನಿಕಲ್ ಮತ್ತು ಪುನರ್ವಸತಿ ಕಾರ್ಯವನ್ನು ಇನ್ನಷ್ಟು ವಿಸ್ತರಿಸಲು ಪೂರಕವಾಗಿ ವರುಣಾದಲ್ಲಿ ನಮ್ಮ ಸರ್ಕಾರ ಉಚಿತವಾಗಿ 10 ಎಕರೆ ಜಮೀನನ್ನು ಸಂಸ್ಥೆಗೆ ನೀಡಿದೆ. ಈ ಸಂಸ್ಥೆಯ ಅಂಗಳದಲ್ಲಿ ರೂ.2.55 ಕೋಟಿ ವೆಚ್ಚದಲ್ಲಿ ಮೈಸೂರು ಮಹಾನಗರ ಪಾಲಿಕೆಯು ಅಂಗವಿಕಲ ಮಕ್ಕಳಿಗೆ ಆಂಫಿಥಿಯೇಟರ್ ನಿರ್ಮಾಣ, ಅಂಗವಿಕಲ ಸ್ನೇಹಿ ಸಲಕರಣೆಗಳು, ಉದ್ಯಾನವನ ಅಭಿವೃದ್ಧಿ, ಮಾತು ಬಾರದ, ಕಿವಿ ಕೇಳದ ಮಕ್ಕಳಿಗೆ ನಿರೀಕ್ಷಣಾ ಕೊಠಡಿ ಮತ್ತು ಮ್ಯೂಸಿಯಂ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಲಾಗುತ್ತಿದೆ ಎಂದರು.
ಮಗು ಭ್ರೂಣಾವಸ್ಥೆಯಲ್ಲಿರುವಾಗಲೇ ಅದರ ಸಂವಹನದ ಸಮಸ್ಯೆಗಳನ್ನು ಪತ್ತೆ ಹಚ್ಚುವ ತಂತ್ರಜ್ಞಾನ ಗಳಿಸಲು ನಮಗೆ ಸಾಧ್ಯವಾಗಿರುವುದು ಇಂತಹ ಪ್ರೀಮಿಯರ್ ಸಂಸ್ಥೆಗಳಿಂದಾಗಿ ಮಾತ್ರ. ಸಮಸ್ಯೆಯನ್ನು ಗುರುತಿಸಿ ಚಿಕಿತ್ಸೆ ನೀಡುವ ಬಗ್ಗೆ ಸಮಾಜದಲ್ಲಿ ಜಾಗೃತಿ ಮೂಡಿಸುವ ಮಹತ್ತರ ಕೆಲಸವನ್ನು ಈ ಸಂಸ್ಥೆಯು ಮಾಡುತ್ತಿದೆ. ವಜ್ರ ಮಹೋತ್ಸವದ ಈ ಸಂದರ್ಭದಲ್ಲಿ - ಈ ಸಂಸ್ಥೆಯಲ್ಲಿದ್ದುಕೊಂಡು ಸ್ವಸ್ಥ ಸಮಾಜದ ಏಳಿಗೆಗಾಗಿ ದುಡಿದ-ದುಡಿಯುತ್ತಿರುವ ತಜ್ಞರು, ಪ್ರಾಧ್ಯಾಪಕರು, ಸಹಾಯಕರು, ವಿದ್ಯಾರ್ಥಿಗಳು ಸೇರಿದಂತೆ ಎಲ್ಲರನ್ನೂ ಕೃತಜ್ಞತೆಯಿಂದ ಸ್ಮರಿಸುತ್ತೇನೆ ಎಂದರು.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉದ್ಘಾಟಿಸಿದ ಕಾರ್ಯಕ್ರಮದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಕೇಂದ್ರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ರಾಜ್ಯ ಖಾತೆ ಸಚಿವೆ ಅನುಪ್ರಿಯಾ ಪಟೇಲ್, ರಾಜ್ಯ ಸರ್ಕಾರದ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಉಪಸ್ಥಿತರಿದ್ದರು.