×
Ad

ಮೆಕ್ಕೆಜೋಳದ ಬೆಲೆ ಕುಸಿತದಿಂದ ಸಂಕಷ್ಟದಲ್ಲಿರುವ ರೈತರಿಗೆ ಸರಕಾರದ ನೆರವು : ಸಿಎಂ ಸಿದ್ದರಾಮಯ್ಯ

► "10 ಲಕ್ಷ ಮೆಟ್ರಿಕ್ ಟನ್ ಮೆಕ್ಕೆಜೋಳ ಖರೀದಿಸಲು ಸರಕಾರದ ತೀರ್ಮಾನ" ► "ಮೆಕ್ಕೆಜೋಳ ಆಮದು ನಿಲ್ಲಿಸುವಂತೆ ಕೇಂದ್ರಕ್ಕೆ ಒತ್ತಾಯ"

Update: 2025-11-21 15:53 IST

ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು : ಮೆಕ್ಕೆ ಜೋಳ ಬೆಲೆ ಕುಸಿತದಿಂದ ಸಂಕಷ್ಟದಲ್ಲಿರುವ ರೈತರಿಗೆ ಸರಕಾರ ಎಲ್ಲ ರೀತಿಯ ನೆರವು ಒದಗಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಕೇಂದ್ರದಿಂದ 70 ಲಕ್ಷ ಮೆ.ಟನ್ ಮೆಕ್ಕೆಜೋಳ ಆಮದು :

ಒಂದು ಕ್ವಿಂಟಾಲ್ ಮೆಕ್ಕೆಜೋಳಕ್ಕೆ 2400 ರೂ.ಗಳ ಎಂಎಸ್ ಪಿ ದರ ನಿಗದಿಯಾಗಿದ್ದು, ಇದುವರೆಗೆ ಖರೀದಿ ಕೇಂದ್ರ ಪ್ರಾರಂಭವಾಗಿಲ್ಲ. ಖರೀದಿ ಪ್ರಕ್ರಿಯೆ ಪ್ರಾರಂಭಿಸಬೇಕೆಂದು ರೈತರು ಒತ್ತಾಯಿಸುತ್ತಿದ್ದಾರೆ. ಆದ್ದರಿಂದ ಮೆಕ್ಕೆ ಜೋಳದ ಖರೀದಿ ಬಗ್ಗೆ ಸಂಬಂಧಪಟ್ಟ ಸಚಿವರು , ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಲಾಗಿದೆ. ಮಾರುಕಟ್ಟೆಯಲ್ಲಿ ಮೆಕ್ಕೆ ಜೋಳದ ಬೆಲೆ ಕುಸಿತ ಕಂಡಿದ್ದು, ಉತ್ಪಾದನೆ ಹೆಚ್ಚಾಗಿದೆ. ಸುಮಾರು 55 ಲಕ್ಷ ಮೆಟ್ರಿಕ್ ಟನ್ ನಷ್ಟು ಮೆಕ್ಕೆಜೋಳವನ್ನು ರೈತರು ಬೆಳೆಯಬಹುದೆಂಬ ಅಂದಾಜಿದೆ. ಕರ್ನಾಟಕವೂ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ಮೆಕ್ಕೆ ಜೋಳ ಉತ್ಪತ್ತಿಯಲ್ಲಿ ಏರಿಕೆ ಕಂಡಿದ್ದರೂ ಸಹ , ಕೇಂದ್ರ ಸರಕಾರ ಸುಮಾರು 70 ಲಕ್ಷ ಮೆ.ಟನ್ ನಷ್ಟು ಮೆಕ್ಕೆಜೋಳವನ್ನು ಆಮದು ಮಾಡಿಕೊಳ್ಳುತ್ತಿದೆ. ಕೇಂದ್ರದ ಈ ನಿರ್ಧಾರದಿಂದ ನೋಡಲ್ ಏಜೆನ್ಸಿಗಳಾದ ನಫೆಡ್, ಎನ್ ಸಿ ಸಿಎಫ್ ಸಂಸ್ಥೆಗಳು ಮೆಕ್ಕೆ ಜೋಳ ಖರೀದಿ ಪ್ರಕ್ರಿಯೆ ನಡೆಸದೇ ಇರುವುದರಿಂದ, ರೈತರು ಕೆಲವಡೆ ಧರಣಿ ನಡೆಸುತ್ತಿದ್ದಾರೆ ಎಂದರು.

ಮೆಕ್ಕೆಜೋಳ ಖರೀದಿಗೆ ಡಿಸ್ಟಲರಿಗಳೊಂದಿಗೆ ಚರ್ಚೆ‌ :

ಡಿಸ್ಟಿಲರಿಗಳು ಮೆಕ್ಕೆ ಜೋಳ ಬೆಲೆ ಕಡಿಮೆ ಇದ್ದಾಗಲೇ ಹಿಂದೆಯೇ ಖರೀದಿಸಿ ಶೇಖರಣೆ ಮಾಡಿಕೊಂಡಿವೆ. ಮೆಕ್ಕೆಜೋಳವನ್ನು ನಿಯಮಾಸುಸಾರ ಖರೀದಿಸಿ ರೈತರಿಗೆ ಅನುಕೂಲ ಕಲ್ಪಿಸಲು ಡಿಸ್ಟಲರಿ ಮಾಲೀಕರೊಂದಿಗೆ ಚರ್ಚಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಸರಕಾರದಿಂದ 10 ಲಕ್ಷ ಮೆ.ಟನ್ ಖರೀದಿ :

ಮೆಕ್ಕೆ ಜೋಳದ ಬೆಲೆ ಕುಸಿತದಿಂದ ಸಂಕಷ್ಟದಲ್ಲಿರುವ ರೈತರಿಗೆ ಎಲ್ಲ ರೀತಿಯ ಸಹಾಯವನ್ನು ಸರಕಾರ ಮಾಡಲಿದೆ. ರಾಜ್ಯ ಸರಕಾರ, ರೈತರಿಂದ ಸುಮಾರು 10 ಲಕ್ಷ ಮೆ.ಟನ್ ಮೆಕ್ಕೆಜೋಳ ಖರೀದಿಗೆ ಖರೀದಿ ಕೇಂದ್ರ ಸ್ಥಾಪಿಸಲು ಸೂಚನೆ ನೀಡಲಾಗಿದೆ. ದೇಶದಲ್ಲಿಯೇ ಹೇರಳವಾಗಿ ಮೆಕ್ಕೆಜೋಳವನ್ನು ಬೆಳೆದಿದ್ದು, ಅದನ್ನು ಆಮದು ಮಾಡಿಕೊಳ್ಳದಂತೆ ಕೇಂದ್ರ ಸರಕಾರವನ್ನು ಪತ್ರಮುಖೇನ ಕೋರಲಾಗುವುದು ಎಂದರು.

ಬೆಳೆಹಾನಿ ಪರಿಹಾರಕ್ಕಾಗಿ ಕೇಂದ್ರಕ್ಕೆ ಮನವಿ :

ಮೆಕ್ಕೆ ಜೋಳದ ಜೊತೆಗೆ ಹೆಸರು ಕಾಳು ಬೆಳೆ ಸಮಸ್ಯೆ ಬಗ್ಗೆ ಚರ್ಚಿಸಲಾಗಿದ್ದು, ಇದಕ್ಕೆ ಸಂಬಂಧಿಸಿದ ಎಫ್ ಎ ಕ್ಯು ಬದಲಾವಣೆಗೆ ಕೇಂದ್ರ ಸರಕಾರ ಮನವಿ ಸಲ್ಲಿಸುವ ಜೊತೆಗೆ ಸಂಬಂಧಪಟ್ಟವರ ತಂಡ ಈ ಬಗ್ಗೆ ದೆಹಲಿಗೂ ಭೇಟಿ ನೀಡಬೇಕೆಂದು ಸೂಚನೆ ನೀಡಲಾಗಿದೆ. ಇತ್ತೀಚೆಗೆ ಪ್ರಧಾನಿಯವರನ್ನು ಭೇಟಿಯಾಗಿ ಮಳೆಯಿಂದಾದ ಬೆಳೆ ಹಾನಿಗೆ ಪರಿಹಾರ ಕೋರಲಾಗಿದೆ. ಈ ಬಾರಿ ರಾಜ್ಯದಲ್ಲಿ ಸುಮಾರು 15.5 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ ಸಂಭವಿಸಿದೆ. ರಾಜ್ಯದ ಮನವಿಗೆ ಕೇಂದ್ರ ಪೂರಕವಾಗಿ ಸ್ಪಂದಿಸಲಿದೆ ಎಂಬ ವಿಶ್ವಾಸವಿದೆ ಎಂದರು.

ವರಿಷ್ಠರ ತೀರ್ಮಾನಕ್ಕೆ ಪಕ್ಷದ ಪ್ರತಿಯೊಬ್ಬರೂ ಬದ್ಧರಾಗಿರಬೇಕು :

ಕಾಂಗ್ರೆಸ್ ನ ಕೆಲ ಶಾಸಕರು ಪಕ್ಷದ ವರಿಷ್ಠರನ್ನು ಭೇಟಿಯಾಗಲು ದೆಹಲಿಗೆ ತೆರಳಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ, ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಅಥವಾ ಸಂಪುಟ ಪುನರ್ರಚನೆ ಬಗ್ಗೆ ಪಕ್ಷದ ವರಿಷ್ಠರು ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತಾರೆ. ವರಿಷ್ಠರ ತೀರ್ಮಾನಕ್ಕೆ ಪಕ್ಷದ ಪ್ರತಿಯೊಬ್ಬರೂ ಬದ್ಧರಾಗಿರಬೇಕು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳಿದಂತೆ ನಾನೆಂದೂ ಮಾತಿಗೆ ತಪ್ಪುವುದಿಲ್ಲ. ರಾಜ್ಯದ ಜನರಿಗೆ ನೀಡಿದ ಗ್ಯಾರಂಟಿಯ ಭರವಸೆಯನ್ನು ಈಡೇರಿಸಿದ್ದೇನೆ. ಮುಖ್ಯಮಂತ್ರಿಯಾಗಿ ನಾನೇ ಮುಂದುವರೆದು, ಮುಂದಿನ ಬಜೆಟ್ ಗಳನ್ನು ನಾನೇ ಮಂಡಿಸುವೆ. ಇಂದು ಪಕ್ಷದ ವರಿಷ್ಠರಾದ ಮಲ್ಲಿಕಾರ್ಜುನ ಖರ್ಗೆಯವರು ಬೆಂಗಳೂರಿಗೆ ಆಗಮಿಸಲಿದ್ದು, ನಾಳೆ ಅವರನ್ನು ಭೇಟಿಯಾಗುವ ನಿರೀಕ್ಷೆಯಿದೆ ಎಂದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News