ಅಧಿಕಾರದಲ್ಲಿದ್ದಾಗ ಏನೂ ಮಾಡದೇ ವಿಪಕ್ಷದಲ್ಲಿದ್ದಾಗ ಪ್ರತಿಭಟನೆ ಮಾಡುವುದು ಬಿಜೆಪಿಗೆ ಒಂದು ಚಾಳಿ: ಸಿಎಂ ಸಿದ್ದರಾಮಯ್ಯ
"ನಾವು ಕೊಟ್ಟ ಮಾತಿನಂತೆ ಉದ್ಯೋಗ ನೀಡಲಿದ್ದೇವೆ"
ಮೈಸೂರು: ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಏನು ಮಾಡುವುದಿಲ್ಲ, ವಿರೋಧ ಪಕ್ಷದಲ್ಲಿದ್ದಾಗ ಪ್ರತಿಭಟನೆ ಮಾಡುವುದೇ ಒಂದು ಚಾಳಿ ಮಾಡಿಕೊಂಡು ಬಿಟ್ಟಿದ್ದಾರೆ. ಹಾಗಾಗಿ ಧಾರವಾಡದಲ್ಲಿ ಪ್ರತಿಭಟನೆ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.
ನರೇಂದ್ರ ಮೋದಿ ಅಧಿಕಾರಕ್ಕೆ ಬರುವ ಮೊದಲು ವರ್ಷಕ್ಕೆ 2 ಕೋಟಿ ಉದ್ಯೋಗ ಕೊಡುವುದಾಗಿ ಘೋಷಣೆ ಮಾಡಿದ್ದರು. ಅವರು ಅಧಿಕಾರಕ್ಕೆ ಬಂದು 11 ವರ್ಷ ಆಯಿತು. ಹಾಗದಾರೆ ಎಷ್ಟು ಉದ್ಯೋಗ ನೀಡಬೇಕಿತ್ತು. ಉದ್ಯೋಗ ನೀಡಿದರೇ ಎಂದು ಪ್ರಶ್ನಿಸಿದರು.
ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳು ನಡೆಸಿದ ಪ್ರತಿಭಟನೆಯಲ್ಲಿ ಲಾಭ ಪಡೆಯಲು ಬಿಜೆಪಿಯವರು ಹೋಗಿದ್ದಾರೆ. ರಾಜ್ಯದಲ್ಲಿ ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಎಷ್ಟು ಉದ್ಯೋಗಗಳನ್ನು ನೀಡಿದ್ದಾರೆ? ಉದ್ಯೋಗಾಕಾಂಕ್ಷಿಗಳು ಬಿಜೆಪಿಯವರನ್ನು ಬಿಟ್ಟು ಬೇರೆ ಕಡೆ ಹೋಗಿ ಪ್ರತಿಭಟನೆ ಮಾಡಿದ್ದಾರೆ ಎಂದು ಹೇಳಿದರು.
ನಾವು ಕೊಟ್ಟ ಮಾತಿನಂತೆ ಉದ್ಯೋಗ ನೀಡಲಿದ್ದೇವೆ. ಈ ಬಾರಿಯ ಬಜೆಟ್ ನಲ್ಲಿ ಕೆಲವು ಇಲಾಖೆಯ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಮುಂದಾಗಲಿದ್ದೇವೆ ಎಂದು ಹೇಳಿದರು.
ಆರೋಗ್ಯ ಇಲಾಖೆಯಲ್ಲಿ ಬಿಡುಗಡೆ ಮಾಡಲಾದ ಆಹ್ವಾನ ಪತ್ರಿಕೆಯಲ್ಲಿ ಉರ್ದು ಭಾಷೆ ಇರುವ ಬಗ್ಗೆ ವಿರೋಧ ವ್ಯಕ್ತವಾಗುತ್ತಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ, ಸರ್ಕಾರದ ಜಾಹಿರಾತು ನೀಡುವಾಗ ಉರ್ದು ಪತ್ರಿಕೆಗಳಿಗೂ ನೀಡಬೇಕು ಹಾಗಾಗಿ ನೀಡಲಾಗಿದೆ. ಆಹ್ವಾನ ಪತ್ರಿಕೆಯಲ್ಲಿ ಉರ್ದು ಇಲ್ಲ, ಬಿಜೆಪಿಯವರು ಬೇಕಂತಲೇ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಹೇಳಿದರು.