ಹುಣಸೂರು | ಜಾನುವಾರು ಸಂರಕ್ಷಣೆ ನೆಪದಲ್ಲಿ ಹಣ ವಸೂಲಿ ಆರೋಪ: ಹಿಂದುತ್ವ ಸಂಘಟನೆಯ ಏಳು ಮಂದಿಯ ಬಂಧನ
ಹುಣಸೂರು : ಹಿಂದುತ್ವ ಸಂಘಟನೆಯ ಹೆಸರಿನಲ್ಲಿ ಜಾನುವಾರು ಸಂರಕ್ಷಣೆ ನೆಪದಲ್ಲಿ ಜಾನುವಾರು ಸಾಗಿಸುವ ವಾಹನಗಳನ್ನು ತಡೆದು ಹಣ ವಸೂಲಿಗಿಳಿದಿದ್ದ ಮಹಿಳೆ ಸೇರಿದಂತೆ ಏಳು ಮಂದಿಯ ತಂಡವನ್ನು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿ, ಎರಡು ಕಾರುಗಳನ್ನು ವಶಕ್ಕೆ ಪಡೆದಿರುವ ಘಟನೆ ಹುಣಸೂರು ತಾಲೂಕಿನ ಕಟ್ಟೆಮಳಲವಾಡಿಯಲ್ಲಿ ಜರುಗಿದೆ.
ಹಿಂದೂ ರಾಷ್ಟ್ರ ರಕ್ಷಣಾ ವೇದಿಕೆಯ ರಾಷ್ಟ್ರೀಯ ಅಧ್ಯಕ್ಷ, ಬೆಂಗಳೂರು ಉತ್ತರಹಳ್ಳಿಯ ರಾಮಕೃಷ್ಣ ಮತ್ತು ಬೆಂಗಳೂರಿನ ವಿವಿಧ ಬಡಾವಣೆ ನಿವಾಸಿಗಳಾದ ಶಿವಕುಮಾರ್, ಲಿಂಗರಾಜು, ಕಿಶೋರ್, ಪ್ರೇಮಕುಮಾರ್, ಪುಷ್ಪಲತಾ ಹಾಗೂ ಕೆ.ಆರ್.ಪೇಟೆ ತಾಲೂಕಿನ ಮಾರಗೌಡನಹಳ್ಳಿಯ ಸ್ವಾಮಿ ಬಂಧಿತರು.
ತಾಲೂಕಿನ ರತ್ನಪುರಿಯ ಕಿರಣ್ ಬುಧವಾರದಂದು ಸಾಲಿಗ್ರಾಮ ತಾಲೂಕಿನ ಚುಂಚನಕಟ್ಟೆ ಸಂತೆಯಲ್ಲಿ ಮೂರು ಜಾನುವಾರುಗಳನ್ನು ಖರೀದಿಸಿ ವಾಹನದಲ್ಲಿ ಸಾಗಿಸುತ್ತಿದ್ದ ವೇಳೆ ಕಾರಿನಲ್ಲಿ ಹಿಂಬಾಲಿಸಿಕೊಂಡು ತಾಲೂಕಿನ ಕಟ್ಟೆಮಳಲ ವಾಡಿ ಬಳಿ ಅಡ್ಡಗಟ್ಟಿ ಕಸಾಯಿಖಾನೆಗೆ ಜಾನುವಾರು ಸಾಗಿಸುತ್ತಿದ್ದೀರಾ ಎಂದು ಚಾಲಕ ಕಿರಣ್ ಎಂಬವರನ್ನು ಬೆದರಿಸಿ 25 ಸಾವಿರ ರೂ. ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾರೆ. ನಾನು ವ್ಯವಸಾಯಕ್ಕಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದೇನೆಂದು ಹೇಳಿದರೂ ಕೇಳದೆ ಕೊನೆಗೆ 20 ಸಾವಿರ ಕೊಟ್ಟರೆ ಬಿಡುತ್ತೇವೆ. ಇಲ್ಲದಿದ್ದರೆ ಪೊಲೀಸರಿಗೆ ಮಾಹಿತಿ ನೀಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.
ಈ ವೇಳೆ ಏನು ನಡೆಯುತ್ತಿದೆ ಎಂದು ರಸ್ತೆಯಲ್ಲಿ ಹೋಗುತ್ತಿದ್ದ ಜನರು ಜಮಾಯಿಸಿದರು. ವಿಷಯ ತಿಳಿದು ಜನರು ಆರೋಪಿಗಳ ವಿರುದ್ಧ ತಿರುಗಿ ಬಿದ್ದು ತರಾಟೆ ತೆಗೆದುಕೊಂಡು 112ಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು, ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದಾಗ ವಿಚಾರ ಬಯಲಾಗಿದೆ. ಈ ಸಂಬಂಧ ಕಿರಣ್ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ.
ಹಿಂದುತ್ವ ಸಂಘಟನೆ ಹೆಸರಲ್ಲಿ ಸುಲಿಗೆ ದಂಧೆ: ಇದೇ ತಂಡ ಕೆ.ಆರ್.ನಗರದಲ್ಲೂ ಗ್ಯಾಸ್ ಅಂಗಡಿಯೊಂದರ ಮಾಲೀಕನನ್ನು ಬೆದರಿಸಿ 20 ಸಾವಿರ ರೂ. ಕಿತ್ತಿದ್ದಾರೆ. ಚಾಮರಾಜನಗರದಲ್ಲಿ ಎರಡು ವರ್ಷಗಳ ಹಿಂದೆ ಹಾಗೂ ಬೆಂಗಳೂರಿನಲ್ಲೂ ಇದೀಗ ಹುಣಸೂರು ಮತ್ತು ಕೆ.ಆರ್.ನಗರ ಠಾಣೆಯಲ್ಲಿ ಇವರ ವಿರುದ್ಧ ಪ್ರಕರಣ ದಾಖಲಾಗಿದೆ.
ಆರೋಪಿಗಳು ಕೃತ್ಯಕ್ಕೆ ಬಳಸುತ್ತಿದ್ದ ಕಾರಿನಲ್ಲಿ ಹಿಂದೂರಾಷ್ಟ್ರ ರಕ್ಷಣಾ ಪಡೆ ನಾಮಫಲಕ ಅಳವಡಿಸಿಕೊಂಡಿದ್ದರಲ್ಲದೆ, ಜೆ.ಕೆ. 24/7 ಕನ್ನಡ ನ್ಯೂಸ್ ಚಾನಲ್ ಸ್ಟಿಕ್ಕರ್ ಅಳವಡಿಸಿಕೊಂಡು ವಿವಿಧೆಡೆ ಹಣ ವಸೂಲಿಯನ್ನೇ ದಂಧೆ ಮಾಡಿಕೊಂಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.
ಅಡಿಷನಲ್ ಎಸ್ಪಿ ಮಲ್ಲಿಕ್ ಭೇಟಿ ನೀಡಿ ವಿಚಾರಣೆ ನಡೆಸಿದರು. ಡಿವೈಎಸ್ಪಿ ಗೋಪಾಲಕೃಷ್ಣ, ಇನ್ಸ್ಪೆಕ್ಟರ್ ಮುನಿಯಪ್ಪ ಇದ್ದರು.