‘ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್ ರನ್ನು ರಕ್ಷಿಸಿತು’: ವಿನೇಶ್ ಫೋಗಟ್
ಖುಲಾಸೆ ತೀರ್ಪು ಪ್ರಶ್ನಿಸಿ ದಿಲ್ಲಿ ಹೌಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ನಿರ್ಧಾರ
Photo Credit: timesofindia
ಹೊಸದಿಲ್ಲಿ: ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಕುಸ್ತಿ ಫೆಡರೇಶನ್ ಆಫ್ ಇಂಡಿಯಾದ (WFI) ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದಿಲ್ಲಿ ನ್ಯಾಯಾಲಯ ಖುಲಾಸೆಗೊಳಿಸಿರುವ ತೀರ್ಪಿನ ವಿರುದ್ಧ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸುವುದಾಗಿ ಕುಸ್ತಿಪಟು ವಿನೇಶ್ ಫೋಗಟ್ ತಿಳಿಸಿದ್ದಾರೆ. ನ್ಯಾಯ ಸಿಗುವವರೆಗೆ ಕಾನೂನು ಹೋರಾಟ ಮುಂದುವರಿಯಲಿದೆ ಎಂದು ಅವರು ಹೇಳಿದ್ದಾರೆ.
ಸೋಮವಾರ ಸಾಮಾಜಿಕ ಮಾಧ್ಯಮದಲ್ಲಿ ಪ್ರಕಟಿಸಿದ ಹೇಳಿಕೆಯಲ್ಲಿ, ‘ಆರಂಭದಿಂದಲೇ ಇಡೀ ವ್ಯವಸ್ಥೆ, ಸರ್ಕಾರ ಮತ್ತು ಸಂಬಂಧಿತ ಸಂಸ್ಥೆಗಳು ಬ್ರಿಜ್ ಭೂಷಣ್ ಅವರನ್ನು ರಕ್ಷಿಸಲು ಕೆಲಸ ಮಾಡಿವೆ. ಆದರೂ ನಾವು ಹೋರಾಟ ಕೈಬಿಡುವುದಿಲ್ಲ’ ಎಂದು ವಿನೇಶ್ ಆರೋಪಿಸಿದ್ದಾರೆ.
‘ಆಡಳಿತ ಪಕ್ಷದ ಪ್ರಭಾವಿ ನಾಯಕರ ವಿರುದ್ಧ ಎಫ್ಐಆರ್ ದಾಖಲಿಸುವುದೇ ನಮಗೆ ದೊಡ್ಡ ಸವಾಲಾಗಿತ್ತು. ತಮ್ಮ ರಾಜಕೀಯ ಪ್ರಭಾವ ಮತ್ತು ತೋಳುಬಲದ ಮೂಲಕ ಬ್ರಿಜ್ ಭೂಷಣ್ ಹಲವಾರು ಮಹಿಳೆಯರಿಗೆ ಬೆದರಿಕೆ ಹಾಕಿ ದೂರುಗಳನ್ನು ಹಿಂತೆಗೆದುಕೊಳ್ಳುವಂತೆ ಮಾಡಿದರು. ಆದರೂ ಕೆಲವು ಮಹಿಳಾ ಕುಸ್ತಿಪಟುಗಳು ಹಿಂದೆ ಸರಿಯದೆ ನ್ಯಾಯಾಲಯದಲ್ಲಿ ಕಾನೂನು ಹೋರಾಟ ಮುಂದುವರಿಸಿದರು. ಆದರೆ ನ್ಯಾಯಾಲಯ ಅವರನ್ನು ತಪ್ಪಿತಸ್ಥರೆಂದು ಘೋಷಿಸದಿರುವುದು ನಮಗೆ ತೀವ್ರ ನಿರಾಶೆ ತಂದಿದೆ’ ಎಂದು ಅವರು ಹೇಳಿದ್ದಾರೆ.
ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸುವಂತೆ ಮಹಿಳಾ ಕುಸ್ತಿಪಟುಗಳು ತಮ್ಮ ವಕೀಲರಿಗೆ ಈಗಾಗಲೇ ಸೂಚನೆ ನೀಡಿದ್ದಾರೆ. ‘ಮೇಲ್ಮನವಿಯನ್ನು ಆದಷ್ಟು ಬೇಗ ಸಲ್ಲಿಸಲಾಗುವುದು. ನಾವು ಭರವಸೆ ಕಳೆದುಕೊಂಡಿಲ್ಲ. ನ್ಯಾಯಕ್ಕಾಗಿ ಹೋರಾಟ ಮುಂದುವರಿಯಲಿದೆ’ ಎಂದು ವಿನೇಶ್ ತಿಳಿಸಿದ್ದಾರೆ.
ವಿನೇಶ್ ಈ ಪ್ರಕರಣದ ಆರು ದೂರುದಾರರಲ್ಲಿ ಒಬ್ಬರು. ಲೈಂಗಿಕ ಕಿರುಕುಳ ಪ್ರಕರಣಗಳ ಸಂತ್ರಸ್ತೆಯರ ಗುರುತನ್ನು ರಕ್ಷಿಸುವ ಸುಪ್ರೀಂ ಕೋರ್ಟ್ ಮಾರ್ಗಸೂಚಿಗಳ ಹಿನ್ನೆಲೆಯಲ್ಲಿ ವಿಚಾರಣೆ ನಡೆಯುವವರೆಗೆ ತಮ್ಮ ಗುರುತನ್ನು ಬಹಿರಂಗಪಡಿಸಿರಲಿಲ್ಲ ಎಂದು ಅವರು ಈ ಹಿಂದೆ ತಿಳಿಸಿದ್ದರು.
2023ರಲ್ಲಿ ಬ್ರಿಜ್ ಭೂಷಣ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪಗಳು ಕೇಳಿಬಂದ ಬಳಿಕ ವಿನೇಶ್ ಫೋಗಟ್, ಸಾಕ್ಷಿ ಮಲಿಕ್ ಹಾಗೂ ಬಜರಂಗ್ ಪುನಿಯಾ ನೇತೃತ್ವದಲ್ಲಿ ಹಲವು ತಿಂಗಳುಗಳ ಕಾಲ ಪ್ರತಿಭಟನೆ ನಡೆದಿತ್ತು. ಬ್ರಿಜ್ ಭೂಷಣ್ ಅವರನ್ನು ಬಂಧಿಸಬೇಕು ಹಾಗೂ WFI ಅಧ್ಯಕ್ಷ ಸ್ಥಾನದಿಂದ ತೆರವುಗೊಳಿಸಬೇಕು ಎಂದು ಕುಸ್ತಿಪಟುಗಳು ಆಗ ಒತ್ತಾಯಿಸಿದ್ದರು.
ಖುಲಾಸೆ ತೀರ್ಪಿನ ಬಳಿಕ ಪ್ರತಿಕ್ರಿಯಿಸಿದ ಬ್ರಿಜ್ ಭೂಷಣ್ ಶರಣ್ ಸಿಂಗ್, ‘ಆರೋಪಗಳು ನಿಜವಾಗಿದ್ದರೆ ಮೊದಲ ದಿನವೇ ನಾನು ನೇಣು ಹಾಕಿಕೊಳ್ಳುತ್ತೇನೆ ಎಂದು ಹೇಳಿದ್ದೆ. ಈಗ ನ್ಯಾಯಾಲಯ ನನ್ನನ್ನು ಖುಲಾಸೆಗೊಳಿಸಿದೆ. ಇದು ನನಗೆ ಹಾಗೂ ನನ್ನ ಬೆಂಬಲಿಗರಿಗೆ ಸಂತಸದ ವಿಷಯ’ ಎಂದು ಹೇಳಿದರು.
— Vinesh Phogat (@Phogat_Vinesh) August 3, 2026