ನಿಮಿಷಾ ಪ್ರಿಯಾಳ ಗಲ್ಲು ಶಿಕ್ಷೆ ತಡೆಯಲು ಕೇಂದ್ರ ಸರಕಾರ ತುರ್ತು ಕ್ರಮ ತೆಗೆದುಕೊಳ್ಳುತ್ತಿಲ್ಲ : ಕೆ.ಸಿ ವೇಣುಗೋಪಾಲ್ ಆರೋಪ
Photo | indianexpress
ಹೊಸದಿಲ್ಲಿ : ಕೊಲೆ ಆರೋಪಕ್ಕೆ ಸಂಬಂಧಿಸಿ ಯೆಮೆನ್ನಲ್ಲಿ ಗಲ್ಲುಶಿಕ್ಷೆಗೆ ಗುರಿಯಾಗಿರುವ ಕೇರಳದ ನರ್ಸ್ ನಿಮಿಷ ಪ್ರಿಯಾ ಅವರನ್ನು ರಕ್ಷಿಸಲು ಕೇಂದ್ರ ಸರಕಾರ ಯಾವುದೇ ತುರ್ತು ಕ್ರಮಗಳನ್ನು ತೆಗೆದುಕೊಳ್ಳುತ್ತಿಲ್ಲ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಆರೋಪಿಸಿದ್ದಾರೆ.
ಈ ಬಗ್ಗೆ ಪ್ರಧಾನಿ ಮತ್ತು ವಿದೇಶಾಂಗ ಸಚಿವಾಲಯದ ಗಮನಕ್ಕೆ ತಂದರೂ ಕೇಂದ್ರ ಸರಕಾರ ಯಾವುದೇ ತುರ್ತು ಕ್ರಮವನ್ನು ತೆಗೆದುಕೊಳ್ಳದಿರುವುದು ದುಃಖಕರ. ನಿಮಿಷ ಪ್ರಿಯಾ ಅವರಿಗೆ ವಿಧಿಸಿದ ಗಲ್ಲು ಶಿಕ್ಷೆ ʼನ್ಯಾಯದ ಗಂಭೀರ ಅಣಕʼ ಎಂದು ಹೇಳಿದರು.
ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಕೆ ಸಿ ವೇಣುಗೋಪಾಲ್, ಅವಳು ವಿದೇಶಿ ನೆಲದಲ್ಲಿ ಊಹಿಸಲಾಗದ ಕ್ರೌರ್ಯ ಮತ್ತು ದೌರ್ಜನ್ಯಕ್ಕೆ ಗುರಿಯಾಗಿ ಅಂಚಿಗೆ ತಳ್ಳಲ್ಪಟ್ಟಿದ್ದಾಳೆ. ಅವಳು ಗಲ್ಲು ಶಿಕ್ಷೆಗೆ ಅರ್ಹಳಲ್ಲ. ಅವಳ ಮರಣದಂಡನೆಯನ್ನು ತಡೆಯಲು ತುರ್ತು ಹಸ್ತಕ್ಷೇಪವನ್ನು ಕೋರಿ ನಾನು ಪ್ರಧಾನಿಗೆ ಪತ್ರ ಬರೆದಿದ್ದೇನೆ ಎಂದು ಹೇಳಿದರು.
2017ರಲ್ಲಿ ಯೆಮೆನ್ ಪ್ರಜೆಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ನಿಮಿಷಾ ಅವರನ್ನು ಜುಲೈ 16ರಂದು ಗಲ್ಲಿಗೇರಿಸಲು ನಿರ್ಧರಿಸಲಾಗಿದೆ ಎಂದು ಯೆಮೆನ್ನ ಜೈಲು ಅಧಿಕಾರಿಗಳು ಮಂಗಳವಾರ ತಿಳಿಸಿದ್ದರು.