ಜಮ್ಮುಕಾಶ್ಮೀರ | ಭಯೋತ್ಪಾದಕರ ವಿರುದ್ಧದ ಕಾರ್ಯಾಚರಣೆ ವೇಳೆ ಗಾಯಗೊಂಡಿದ್ದ ಯೋಧ ಮೃತ್ಯು
ಸಾಂದರ್ಭಿಕ ಚಿತ್ರ | timesofindia
ಹೊಸದಿಲ್ಲಿ: ಜಮ್ಮುಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ಶುಕ್ರವಾರ ತಡರಾತ್ರಿ ಭಯೋತ್ಪಾದಕರೊಂದಿಗಿನ ಗುಂಡಿನ ಚಕಮಕಿಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಸೈನಿಕರೋರ್ವರು ಶನಿವಾರ ಮೃತಪಟ್ಟಿದ್ದಾರೆ.
ಭಾರತೀಯ ಸೇನೆ ಮತ್ತು ಜಮ್ಮುಕಾಶ್ಮೀರ ಪೊಲೀಸರು ಉಧಂಪುರ ಜಿಲ್ಲೆಯಲ್ಲಿ ಭಯೋತ್ಪಾದಕರ ವಿರುದ್ಧ ಜಂಟಿ ಶೋಧ ಕಾರ್ಯಾಚರಣೆಯನ್ನು ನಡೆಸಿದ್ದರು.
ಶುಕ್ರವಾರ ಸಂಜೆ ಉಧಂಪುರದ ದುಡು-ಬಸಂತ್ಗಢ ಮತ್ತು ದೋಡಾದ ಭದೇರ್ವಾ ಪ್ರದೇಶದ ಸಿಯೋಜ್ ಧಾರ್ ಅರಣ್ಯ ಗಡಿಯಲ್ಲಿ ಜಮ್ಮುಕಾಶ್ಮೀರ ಪೊಲೀಸರು ಮತ್ತು ಭಾರತೀಯ ಸೇನೆ ವಿಶೇಷ ಕಾರ್ಯಾಚರಣೆ ನಡೆಸುತ್ತಿದ್ದಾಗ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಯಲ್ಲಿ ಗಾಯಗೊಂಡಿದ್ದ ಸೈನಿಕನನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ, ಅವರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶನಿವಾರ ಬೆಳಿಗ್ಗೆ ಜಂಟಿ ಶೋಧ ಕಾರ್ಯಾಚರಣೆಯನ್ನು ಅಧಿಕಾರಿಗಳು ಪುನರಾರಂಭಿಸಿದ್ದಾರೆ. ಉಧಂಪುರದ ಅರಣ್ಯದಲ್ಲಿ ಎರಡರಿಂದ ಮೂವರು ಭಯೋತ್ಪಾದಕರು ಅಡಗಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.