ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ಖುಲಾಸೆಗೊಂಡಿದ್ದ ಪುರೋಹಿತ್ಗೆ ಮತ್ತೆ ಕರ್ನಲ್ ಹುದ್ದೆ
Photo | ndtv
ಹೊಸದಿಲ್ಲಿ: 2008ರ ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ಖುಲಾಸೆಗೊಂಡಿದ್ದ ಲೆಫ್ಟಿನೆಂಟ್ ಕರ್ನಲ್ ಪ್ರಸಾದ್ ಶ್ರೀಕಾಂತ್ ಪುರೋಹಿತ್ಗೆ ಮತ್ತೆ ಕರ್ನಲ್ ಹುದ್ದೆಗೆ ಬಡ್ತಿ ನೀಡಲಾಗಿದೆ.
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ಜುಲೈ 31ರಂದು ವಿಶೇಷ NIA ನ್ಯಾಯಾಲಯ ಖುಲಾಸೆಗೊಳಿಸಿದ ಏಳು ಆರೋಪಿಗಳಲ್ಲಿ ಪುರೋಹಿತ್ ಕೂಡ ಒಬ್ಬರು. ತೀರ್ಪು ನೀಡುವಾಗ, ನ್ಯಾಯಾಲಯ ಯಾವುದೇ ದೃಢವಾದ ಪುರಾವೆಗಳಿಲ್ಲ ಎಂದು ಆರೋಪಿಗಳನ್ನು ಖುಲಾಸೆಗೊಳಿಸಿತ್ತು.
2008ರಲ್ಲಿ ನಡೆದ ಮಾಲೆಗಾಂವ್ ಬಾಂಬ್ ಸ್ಫೋಟ ಪ್ರಕರಣದಲ್ಲಿ 6 ಮಂದಿ ಮೃತಪಟ್ಟಿದ್ದು, 100ಕ್ಕೂ ಅಧಿಕ ಜನರು ಗಾಯಗೊಂಡಿದ್ದರು.
2008ರ ಸೆಪ್ಟೆಂಬರ್ 29ರ ರಾತ್ರಿ ಮಾಲೆಗಾಂವ್ನ ಭಿಕ್ಕು ಚೌಕ್ ಬಳಿ ನಡೆದ ಸ್ಫೋಟದಲ್ಲಿ ಆರು ಜನರು ಮೃತಪಟ್ಟಿದ್ದರು. ನೂರಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಜನದಟ್ಟಣೆಯ ಪ್ರದೇಶದಲ್ಲಿ ಮೋಟಾರ್ ಸೈಕಲ್ಗೆ ಐಇಡಿ ಅಳವಡಿಸಲಾಗಿತ್ತು. ಆರಂಭದಲ್ಲಿ ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳ (ATS) ತನಿಖೆ ನಡೆಸುತ್ತಿದ್ದ ಈ ಪ್ರಕರಣ ಮಹತ್ವದ ತಿರುವು ಪಡೆದುಕೊಂಡಿತ್ತು.
ತನಿಖೆಯ ವೇಳೆ ಮಾಜಿ ಬಿಜೆಪಿ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್, ಕರ್ನಲ್ ಪ್ರಸಾದ್ ಶ್ರೀಕಾಂತ್ ಪುರೋಹಿತ್, ಮೇಜರ್ ರಮೇಶ್ ಉಪಾಧ್ಯಾಯ, ಅಜಯ್ ರಹಿರ್ಕರ್, ಸಮೀರ್ ಕುಲಕರ್ಣಿ, ಸುಧಾಕರ್ ದ್ವಿವೇದಿ ಮತ್ತು ಸುಧಾಕರ್ ಚತುರ್ವೇದಿ ಮೇಲೆ ಹಿಂದುತ್ವ ಸಿದ್ಧಾಂತಕ್ಕೆ ಸಂಬಂಧಿಸಿದ ವ್ಯಾಪಕ ಪಿತೂರಿಯ ಭಾಗವಾಗಿ ಸ್ಫೋಟವನ್ನು ರೂಪಿಸಿ ಕಾರ್ಯಗತಗೊಳಿಸಿದ ಆರೋಪವನ್ನು ಹೊರಿಸಲಾಗಿತ್ತು. ಆ ಬಳಿಕ ಎಲ್ಲಾ ಆರೋಪಿಗಳನ್ನು ಎನ್ಐಎ ನ್ಯಾಯಾಲಯ ಖುಲಾಸೆಗೊಳಿಸಿತ್ತು.
ಭಯೋತ್ಪಾದನಾ ಪ್ರಕರಣದಲ್ಲಿ ಭಾರತೀಯ ಸೇನೆಯ ಸೇವೆ ಸಲ್ಲಿಸುತ್ತಿರುವ ಅಧಿಕಾರಿಯೊಬ್ಬರನ್ನು ಬಂಧಿಸಿದ್ದು ಇದೇ ಮೊದಲಾಗಿತ್ತು.