Madhya Pradesh | Petrol ಬೆಲೆ ಹೆಚ್ಚಳವಾಯಿತೆಂದು ಪೆಟ್ರೋಲ್ ಪಂಪ್ ಸಿಬ್ಬಂದಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು
ಭೋಪಾಲ್: ಮಧ್ಯಪ್ರದೇಶದ ಗ್ವಾಲಿಯರ್ನಲ್ಲಿ ಪೆಟ್ರೋಲ್ ದರದ ಬಗ್ಗೆ ವಾಗ್ವಾದ ನಡೆದು ಪೆಟ್ರೋಲ್ ಪಂಪ್ ಸಿಬ್ಬಂದಿ ಮೇಲೆ ಮೂವರು ದುಷ್ಕರ್ಮಿಗಳು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ನಡೆದಿದೆ.
ಮಂಗಳವಾರ ರಾತ್ರಿ 10 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಗಂಭೀರವಾಗಿ ಗಾಯಗೊಂಡಿರುವ ಪೆಟ್ರೋಲ್ ಪಂಪ್ ಸಿಬ್ಬಂದಿಯನ್ನು ಆಕಾಶ್ ಸೆಂಗಾರ್ ಎಂದು ಗುರುತಿಸಲಾಗಿದೆ. ಅವರನ್ನು ಜಯರೋಗ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
"ಮೂವರು ದುಷ್ಕರ್ಮಿಗಳು ಬುಲೆಟ್ನಲ್ಲಿ ಪೆಟ್ರೋಲ್ ಪಂಪ್ಗೆ ಆಗಮಿಸಿದ್ದರು. ಪೆಟ್ರೋಲ್ ಬೆಲೆ ಬಗ್ಗೆ ಆಕಾಶ್ ಜೊತೆ ವಾಗ್ವಾದಕ್ಕಿಳಿದರು. ಬಳಿಕ ಓರ್ವ ಆರೋಪಿ ಆಕಾಶ್ ಮೇಲೆ ಪೆಟ್ರೋಲ್ ಸುರಿದು ಲೈಟರ್ ಬಳಸಿ ಬೆಂಕಿಹಚ್ಚಿದ್ದಾನೆ" ಎಂದು ಪೊಲೀಸರು ತಿಳಿಸಿದ್ದಾರೆ.
ಈ ವೇಳೆ ಪೆಟ್ರೋಲ್ ಪಂಪ್ ಪಕ್ಕದ ಟ್ರಾವೆಲ್ಸ್ ಕಚೇರಿಯಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ ರಾಮಚಂದ್ರ ಸೆಂಗಾರ್ ಅವರು ತಮ್ಮ ಮಗನನ್ನು ರಕ್ಷಿಸಲು ಪ್ರಯತ್ನಿಸಿದ್ದಾರೆ. ಈ ವೇಳೆ ಅವರಿಗೂ ಸುಟ್ಟು ಗಾಯಗಳಾಗಿವೆ ಎಂದು ವರದಿಯಾಗಿದೆ.
ತಕ್ಷಣ ಸ್ಥಳೀಯರು ಬೆಂಕಿ ನಂದಿಸಿ ತಂದೆ-ಮಗ ಇಬ್ಬರನ್ನೂ ಜಯರೋಗ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆಕಾಶ್ಗೆ ಶೇ 37ರಷ್ಟು ಸುಟ್ಟ ಗಾಯಗಳಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸಂಬಂಧ ಎಫ್ಐಆರ್ ದಾಖಲಾಗಿದೆ. ಘಟನೆಗೆ ಸಂಬಂಧಿಸಿ ಪೊಲೀಸರು ಡೋಲಿ ಅಲಿಯಾಸ್ ಅನುಜ್ ಗುರ್ಜರ್ ಮತ್ತು ಸಚಿನ್ ಗುರ್ಜರ್ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಮೂರನೇ ಆರೋಪಿ ಅರವಿಂದ್ ಛವಾಯ್ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.