×
Ad

ತಮಿಳುನಾಡು | ಋತುಮತಿಯಾದ ದಲಿತ ವಿದ್ಯಾರ್ಥಿನಿಗೆ ತರಗತಿಯೊಳಗೆ ಪರೀಕ್ಷೆ ಬರೆಯಲು ಅವಕಾಶ ನಿರಾಕರಣೆ : ಆರೋಪ

Update: 2025-04-10 19:22 IST

Photo |NDTV

ಚೆನ್ನೈ: ತಮಿಳುನಾಡಿನ ಕೊಯಮತ್ತೂರಿನ ಖಾಸಗಿ ಶಾಲೆಯೊಂದರಲ್ಲಿ 8ನೇ ತರಗತಿಯ ವಿದ್ಯಾರ್ಥಿನಿಯೋರ್ವಳನ್ನು ಋತುಮತಿಯಾದ ಕಾರಣ ತರಗತಿಯ ಒಳಗೆ ಪರೀಕ್ಷೆ ಬರೆಯಲು ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.

ದಲಿತ ಸಮುದಾಯಕ್ಕೆ ಸೇರಿದ ಬಾಲಕಿ ತರಗತಿಯ ಹೊರಗೆ ಮೆಟ್ಟಿಲುಗಳ ಮೇಲೆ ಕುಳಿತು ಪರೀಕ್ಷೆ ಬರೆಯುತ್ತಿರುವ ವಿಡಿಯೋ ವ್ಯಾಪಕವಾಗಿ ವೈರಲ್ ಆಗಿದೆ.

ʼ1.22 ನಿಮಿಷಗಳ ವೀಡಿಯೊದಲ್ಲಿ ಬಾಲಕಿ ತರಗತಿಯ ಮೆಟ್ಟಿಲುಗಳ ಮೇಲೆ ಕುಳಿತು ಪರೀಕ್ಷೆ ಬರೆಯುತ್ತಿರುವುದು ಕಂಡು ಬಂದಿದೆ. ಆಕೆಯ ಉತ್ತರ ಪತ್ರಿಕೆಯಲ್ಲಿ ಶಾಲೆಯ ಹೆಸರು ʼಸ್ವಾಮಿ ಚಿದ್ಭಾವಾನಂದ ಮೆಟ್ರಿಕ್ ಹೈಯರ್ ಸೆಕೆಂಡರಿ ಶಾಲೆ, ಸೆಂಗುಟ್ಟೈಪಾಳಯಂʼ ಎಂದು ಬರೆಯಲಾಗಿದೆʼ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ವೀಡಿಯೊದಲ್ಲಿ ಬಾಲಕಿ ತಾಯಿಯೊಂದಿಗೆ ಮಾತನಾಡುತ್ತಿರುವುದು ಕೇಳಿಸುತ್ತದೆ. ʼಪ್ರಾಂಶುಪಾಲರು ನನಗೆ ಇಲ್ಲಿ ಕುಳಿತು ಪರೀಕ್ಷೆ ಬರೆಯಲು ಹೇಳಿದರು. ಇದು ಮೊದಲಲ್ಲ. ಈ ಹಿಂದೆ ಕೂಡ ಬೇರೆ ಪ್ರತ್ಯೇಕ ಸ್ಥಳದಲ್ಲಿ ಕುಳಿತು ಪರೀಕ್ಷೆ ಬರೆಯುವಂತೆ ಸೂಚಿಸಿದ್ದರುʼ ಎಂದು ಬಾಲಕಿ ಆರೋಪಿಸಿದ್ದಾಳೆ.

ಈ ವೇಳೆ ಪ್ರೌಢಾವಸ್ಥೆಗೆ ಬಂದರೆ ಅವರು ನಿಮ್ಮನ್ನು ತರಗತಿಯೊಳಗೆ ಪರೀಕ್ಷೆ ಬರೆಯಲು ಬಿಡುವುದಿಲ್ಲವೇ? ಎಂದು ಬಾಲಕಿಗೆ ತಾಯಿ ಪ್ರಶ್ನಿಸಿದ್ದಾರೆ. ಈ ಕುರಿತ ವಿಡಿಯೋ ವೈರಲ್ ಆಗುತ್ತಿದ್ದಂತೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಶಾಲಾ ಮುಖ್ಯೋಪಾಧ್ಯಾಯಿನಿಯನ್ನು ಅಮಾನತುಗೊಳಿಸಿ ತನಿಖೆಗೆ ಆದೇಶಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.

ಈ ಕುರಿತು ತಮಿಳುನಾಡು ಶಾಲಾ ಶಿಕ್ಷಣ ಇಲಾಖೆಯು ತನಿಖೆಗೆ ಆದೇಶಿಸಿದೆ. ಶಾಲಾ ಆಡಳಿತ ಮಂಡಳಿಯಿಂದ ವಿವರಣೆಯನ್ನು ಕೇಳಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News